ಚಿಕ್ಕಮಗಳೂರು: ಜಿಲ್ಲೆಯ ಎನ್.ಆರ್.ಪುರ ತಾಲ್ಲೂಕಿನ ಮುಡುಬ ಸಮೀಪ ದಾರುಣ ಘಟನೆ ನಡೆದಿದ್ದು, ನರ್ಸ್ ಒಬ್ಬರು ಸೇತುವೆ ಮೇಲಿಂದ ಹೊಳೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವುದು ತೀವ್ರ ಆಘಾತ ಮೂಡಿಸಿದೆ.
ಮೃತರನ್ನು ರನ್ಯಾ ಬೇಸಿಲ್ (30) ಎಂದು ಗುರುತಿಸಲಾಗಿದೆ. ಇವರು ನಾರಾಯಣ ಹೃದಯಾಲಯ ಆಸ್ಪತ್ರೆಯಲ್ಲಿ ನರ್ಸ್ ಆಗಿ ಸೇವೆ ಸಲ್ಲಿಸುತ್ತಿದ್ದರು.
ಮೂಲಗಳ ಪ್ರಕಾರ, ಸೋಮವಾರ ಸಂಜೆ ತಮ್ಮ ಕೆಲಸ ಮುಗಿಸಿಕೊಂಡು ಮನೆಗೆ ಬಂದಿದ್ದ ರನ್ಯಾ, ಸ್ವಲ್ಪ ಸಮಯದ ಬಳಿಕ ಮತ್ತೆ ಹೊರಗೆ ತೆರಳಿದ್ದರು. ಮುಡುಬ ಸಮೀಪದ ಸೇತುವೆಯ ಬಳಿ ತಮ್ಮ ಸ್ಕೂಟರ್ ನಿಲ್ಲಿಸಿ ದಿಢೀರನೆ ನದಿಗೆ ಜಿಗಿದಿದ್ದಾರೆ. ಇದನ್ನು ಗಮನಿಸಿದ ಸ್ಥಳೀಯರು ತಕ್ಷಣವೇ ಪೊಲೀಸರಿಗೆ ಮಾಹಿತಿ ನೀಡಿದ್ದರು.
ಘಟನೆ ಕುರಿತು ಮಾಹಿತಿ ಸಿಗುತ್ತಿದ್ದಂತೆಯೇ ಸ್ಥಳಕ್ಕೆ ಧಾವಿಸಿದ ಎನ್.ಆರ್. ಪುರ ಪೊಲೀಸರು ಮತ್ತು ರಕ್ಷಣಾ ತಂಡದವರು ಸುದೀರ್ಘ ಕಾರ್ಯಾಚರಣೆ ನಡೆಸಿ ತಡರಾತ್ರಿಯ ವೇಳೆಗೆ ಮೃತದೇಹವನ್ನು ನದಿಯಿಂದ ಹೊರತೆಗೆಯುವಲ್ಲಿ ಯಶಸ್ವಿಯಾಗಿದ್ದಾರೆ.
ಈ ಘಟನೆ ಕುಟುಂಬಸ್ಥರು ಹಾಗೂ ಸ್ಥಳೀಯರಲ್ಲಿ ಆಘಾತ ಮೂಡಿಸಿದೆ.





















