ಚಳ್ಳಕೆರೆ: ದೇವಸ್ಥಾನಕ್ಕೆ ಪೂಜೆ ಸಲ್ಲಿಸಲು ಬೈಕ್ನಲ್ಲಿ ತೆರಳುತ್ತಿದ್ದ ದಂಪತಿಗೆ ಹಿಂಬದಿಯಿಂದ ಬಂದ ಕಾರು ಡಿಕ್ಕಿ ಹೊಡೆದ ಪರಿಣಾಮ, ಗಂಭೀರವಾಗಿ ಗಾಯಗೊಂಡಿದ್ದ ಮಹಿಳೆ ಮೃತಪಟ್ಟ ಘಟನೆ ಭಾನುವಾರ ಮಧ್ಯಾಹ್ನ ತಾಲೂಕಿನ ಇಮಾಂಪುರ ಬಳಿ ನಡೆದಿದೆ.
ಮೃತರನ್ನು ಎನ್. ಶಾಂತ ಎಂದು ಗುರುತಿಸಲಾಗಿದೆ. ಬೈಕ್ ಚಲಾಯಿಸುತ್ತಿದ್ದ ಅವರ ಪತಿ ಗಾಯಗೊಂಡಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಭಾನುವಾರ ಮಧ್ಯಾಹ್ನ ಸುಮಾರು 1.30ರ ಸುಮಾರಿಗೆ ಬೈಕ್ನಲ್ಲಿ ಚಿತ್ರದುರ್ಗ ಕಡೆಯಿಂದ ಚಳ್ಳಕೆರೆಯ ಅಜ್ಜನಗುಡಿ ದೇವಸ್ಥಾನಕ್ಕೆ ದಂಪತಿ ಬರುತ್ತಿದ್ದರು. ಈ ವೇಳೆ ಚಿತ್ರದುರ್ಗ-ಚಳ್ಳಕೆರೆ ರಾಜ್ಯ ಹೆದ್ದಾರಿ-48ರ ಇಮಾಂಪುರ ಅರಣ್ಯ ಪ್ರದೇಶದ ಬಳಿ, ಹಿಂದಿನಿಂದ ಬಂದ ಕಾರು ಓವರ್ಟೇಕ್ ಮಾಡಲು ಮುಂದಾಗಿ ಬೈಕ್ಗೆ ಡಿಕ್ಕಿ ಹೊಡೆದಿದೆ.
ಇದನ್ನೂ ಓದಿ: ಕಾಂಗ್ರೆಸ್ನ ಹಿರಿಯ ಶಾಸಕ, ಮಾಜಿ ಸಚಿವ ಶಾಮನೂರು ಶಿವಶಂಕರಪ್ಪ ಇನ್ನಿಲ್ಲ
ಡಿಕ್ಕಿಯ ರಭಸಕ್ಕೆ ಹಿಂಬದಿ ಕುಳಿತಿದ್ದ ಶಾಂತ ಅವರ ತಲೆ, ಮುಖ ಹಾಗೂ ಕೈಕಾಲುಗಳಿಗೆ ಗಂಭೀರ ಗಾಯಗವಾಗಿದೆ. ತಕ್ಷಣ ಗಾಯಾಳುಗಳನ್ನು ಚಳ್ಳಕೆರೆ ಸರ್ಕಾರಿ ಆಸ್ಪತ್ರೆಗೆ ದಾಖಲಾಯಿಸಿದರೂ ಶಾಂತ ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾರೆ. ಈ ಕುರಿತು ಚಳ್ಳಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ























