ಚಿತ್ರದುರ್ಗ: ನಗರದ ರಾಮದಾಸ್ ಕಂಪೌಂಡ್ ಬಡಾವಣೆಯಲ್ಲಿ ಭೀಕರ ಕೊಲೆ ಘಟನೆ ಸಂಭವಿಸಿದ್ದು, 46 ವರ್ಷದ ವ್ಯಕ್ತಿಯನ್ನು ದುಷ್ಕರ್ಮಿಗಳು ಮನೆಗೆ ನುಗ್ಗಿ ಮಾರಕಾಸ್ತ್ರಗಳಿಂದ ಕೊಚ್ಚಿ ಹತ್ಯೆ ಮಾಡಿದ್ದಾರೆ.
ಮೃತರನ್ನು ಪ್ರಮೋದ್ (46) ಎಂದು ಗುರುತಿಸಲಾಗಿದೆ. ಅವರು ಮನೆಯಲ್ಲಿ ಏಕಾಂಗಿಯಾಗಿ ಇದ್ದ ವೇಳೆ ರಾತ್ರಿ ಸಮಯದಲ್ಲಿ ದುಷ್ಕರ್ಮಿ ಮನೆಗೆ ನುಗ್ಗಿ ಈ ಕೃತ್ಯ ಎಸಗಿರುವುದು ಪ್ರಾಥಮಿಕ ತನಿಖೆಯಲ್ಲಿ ತಿಳಿದುಬಂದಿದೆ.
ಬೆಳಗ್ಗೆ ಸುಮಾರು 8 ಗಂಟೆ ಸುಮಾರಿಗೆ ಮನೆಯ ಬಾಗಿಲು ತೆರೆಯುತ್ತಿದ್ದಂತೆಯೇ ಈ ಘಟನೆ ಬೆಳಕಿಗೆ ಬಂದಿದೆ. ಹತ್ಯೆಗೈದ ಬಳಿಕ ಆರೋಪಿಗಳು ಸ್ಥಳದಿಂದ ಪರಾರಿಯಾಗಿದ್ದಾರೆ.
ಮಹಿಳೆಯೊಬ್ಬರೊಂದಿಗೆ ಅಕ್ರಮ ಸಂಬಂಧ ಹಿನ್ನೆಲೆ ಈ ಕೊಲೆ ನಡೆದಿರುವ ಶಂಕೆ ವ್ಯಕ್ತವಾಗಿದ್ದು, ಪೊಲೀಸರು ವಿವಿಧ ಕೋಣಗಳಲ್ಲಿ ತನಿಖೆ ಮುಂದುವರೆಸಿದ್ದಾರೆ.
ಘಟನಾ ಸ್ಥಳಕ್ಕೆ ಡಿವೈಎಸ್ಪಿ ಅರುಣ್ ಗೌಡ ಹಾಗೂ ಸಿಪಿಐ ನಯೂಮ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಪ್ರಕರಣ ಚಿತ್ರದುರ್ಗ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ದಾಖಲಾಗಿದ್ದು, ಆರೋಪಿಗಳ ಪತ್ತೆಗೆ ವಿಶೇಷ ತಂಡಗಳನ್ನು ರಚಿಸಲಾಗಿದೆ.























