ಬೆಂಗಳೂರು: ಬೆಂಗಳೂರು ನಗರದ ವಿಕ್ಟೋರಿಯಾ ಆಸ್ಪತ್ರೆಯ ಸಿಬ್ಬಂದಿಗಳು ಬುಧವಾರ ಒಂದು ಕ್ಷಣ ತಬ್ಬಿಬ್ಬಾದರು. ಕಾರಣ ಮುಖ್ಯಮಂತ್ರಿ ಸಿದ್ದರಾಮಯ್ಯ. ಯಾವುದೇ ಸೂಚನೆ ನೀಡದೆ, ಅಧಿಕೃತ ಕಾರ್ಯಕ್ರಮಗಳನ್ನು ಬಿಟ್ಟು ಸಿದ್ದರಾಮಯ್ಯ ಆಸ್ಪತ್ರೆಗೆ ದಿಢೀರ್ ಭೇಟಿ ನೀಡಿದರು. ರೋಗಿಗಳ ಜೊತೆ ಸಮಾಲೋಚನೆ ನಡೆಸಿದರು. ಚಿಕಿತ್ಸೆ, ಆಹಾರ, ಆಸ್ಪತ್ರೆಯ ವ್ಯವಸ್ಥೆ ಕುರಿತು ಮಾತುಕತೆ ನಡೆಸಿದರು.
ಬುಧವಾರ ಮುಖ್ಯಮಂತ್ರಿ ಸಿದ್ದರಾಮಯ್ಯ, ವೈದ್ಯಕೀಯ ಶಿಕ್ಷಣ ಹಾಗೂ ಕೌಶಲ್ಯಾಭಿವೃದ್ಧಿ ಉದ್ಯಮಶೀಲತೆ ಮತ್ತು ಜೀವನೋಪಾಯ ಖಾತೆ ಸಚಿವ ಡಾ.ಶರಣ ಪ್ರಕಾಶ್ ಪಾಟೀಲ್ ಜೊತೆ ವಿಕ್ಟೋರಿಯಾ ಆಸ್ಪತ್ರೆಗೆ ದಿಢೀರ್ ಭೇಟಿ ಕೊಟ್ಟರು.
ಸಿದ್ದರಾಮಯ್ಯ ಬುಧವಾರ ಕೊಪ್ಪಳ ಪ್ರವಾಸ ಕೈಗೊಳ್ಳಬೇಕಿತ್ತು. ಆದರೆ ಮಳೆ ಕಾರಣದಿಂದ ಕೊಪ್ಪಳದ ಕಾರ್ಯಕ್ರಮಕ್ಕೆ ಹೋಗಲಿಲ್ಲ. ಡಾ.ಶರಣ ಪ್ರಕಾಶ್ ಪಾಟೀಲ್ ರಾಯಚೂರು ಪ್ರವಾಸ ಕೈಗೊಳ್ಳಬೇಕಿತ್ತು. ಆದರೆ ಇಬ್ಬರು ಒಟ್ಟಿಗೆ ವಿಕ್ಟೋರಿಯಾ ಆಸ್ಪತ್ರೆಗೆ ತೆರಳಿದರು.
ಮುಖ್ಯಮಂತ್ರಿಗಳು, ಸಚಿವರು ವಿಕ್ಟೋರಿಯಾ ಆಸ್ಪತ್ರೆಗೆ ಅನಿರೀಕ್ಷಿತವಾಗಿ ಭೇಟಿ ನೀಡಿ, ವ್ಯವಸ್ಥೆಗಳ ಬಗ್ಗೆ ಪರಿಶೀಲನೆ ನಡೆಸಿದರು. ಈ ವೇಳೆ ವೈದ್ಯರು ರೋಗಿಗಳನ್ನು ಸಹಾನುಭೂತಿಯಿಂದ ಕಾಣಬೇಕು. ಉಚಿತ ಚಿಕಿತ್ಸೆ ಇರುವುದರಿಂದ ಒತ್ತಡವೂ ಹೆಚ್ಚಿರುತ್ತದೆ, ಆದರೂ ವೈದ್ಯರು ಸಹನೆಯಿಂದ ಕೆಲಸ ಮಾಡಬೇಕು, ಯಾರ ಬಳಿಯೂ ಹಣ ಪಡೆಯಬಾರದು ಎಂದು ಮುಖ್ಯಮಂತ್ರಿಗಳು ಸೂಚಿಸಿದರು.
ಸಿದ್ದರಾಮಯ್ಯ ಹೇಳಿದ್ದೇನು?: ಆಸ್ಪತ್ರೆ ಭೇಟಿ ಬಳಿಕ ಮಾತನಾಡಿದ ಸಿದ್ದರಾಮಯ್ಯ, “ಆಸ್ಪತ್ರೆಯಲ್ಲಿ ವಾಹನ ನಿಲುಗಡೆಗೆ ಹಣ ಪಡೆಯುತ್ತಿರುವ ಬಗ್ಗೆ ಪರಿಶೀಲಿಸಲಾಗುವುದು. ವಾಣಿ ವಿಲಾಸ ಆಸ್ಪತ್ರೆ ಹಾಗೂ ಟ್ರಾಮಾ ಸೆಂಟರ್ಗೆ ಸಹ ಭೇಟಿ ನೀಡಿದ್ದು, ವಾಣಿ ವಿಳಾಸದಲ್ಲಿ ಒಂದು ದಿನಕ್ಕೆ 40ಕ್ಕೂ ಹೆಚ್ಚು ಹೆರಿಗೆಗಳಾಗುತ್ತವೆ. ಬೇರೆ ಬೇರೆ ರಾಜ್ಯದ ಜನರು ಇಲ್ಲಿ ಚಿಕಿತ್ಸೆಗಾಗಿ ಬರುತ್ತಾರೆ. ಜನ ದಟ್ಟಣೆ ಹೆಚ್ಚಿರುವುದರಿಂದ ಆಸ್ಪತ್ರೆಯ ಹಾಸಿಗೆಗಳನ್ನು ಹೆಚ್ಚು ಮಾಡಬೇಕಿದೆ. ವೈದ್ಯರ ಹುದ್ದೆಗಳನ್ನು ಸಹ ಭರ್ತಿ ಮಾಡಲಾಗುವುದು” ಎಂದು ಹೇಳಿದರು.
“ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಹಲವಾರು ರೋಗಿಗಳನ್ನು ಭೇಟಿ ಮಾಡಿ ಮಾತನಾಡಿಸಿದೆ. ಡಾಕ್ಟರ್ಗಳು ಚೆನ್ನಾಗಿ ನೋಡಿಕೊಳ್ಳುತ್ತಿದ್ದಾರೆ, ಊಟ ಚೆನ್ನಾಗಿದೆ ಎಂದು ಹೇಳಿದರು. ಗ್ಯಾಸ್ಟ್ರೋ ಎಂಟ್ರಾಲಜಿ ವಿಭಾಗಕ್ಕೆ ಭೇಟಿ ನೀಡಿದ್ದೇನೆ. ಅಂಗಾಂಗ ದಾನಕ್ಕೆ ಹೊರಗೆ 30 ರಿಂದ 40 ಲಕ್ಷ ವೆಚ್ಚವಾಗುತ್ತದೆ. ಇಲ್ಲಿ ಉಚಿತವಾಗಿ ಮಾಡಲಾಗುತ್ತದೆ” ಎಂದು ತಿಳಿಸಿದರು.

“120 ಹಾಸಿಗೆಗಳ ಆಸ್ಪತ್ರೆಯನ್ನು 300 ಹಾಸಿಗೆಗಳಿಗೆ ಹೆಚ್ಚಿಸುವ ಬಗ್ಗೆ ಬೇಡಿಕೆಯಿದೆ. ಈ ಕುರಿತ ಪ್ರಸ್ತಾವನೆ ಸರ್ಕಾರದ ಮುಂದಿದ್ದು ಇದನ್ನು ಪರಿಗಣಿಸಲಾಗುವುದು” ಎಂದು ಸಿದ್ದರಾಮಯ್ಯ ಹೇಳಿದರು. ರೋಗಿಗಳು ಆಸ್ಪತ್ರೆಯ ವ್ಯವಸ್ಥೆ ಕುರಿತು ಮುಖ್ಯಮಂತ್ರಿಗಳಿಗೆ ವಿವರಣೆ ನೀಡಿದರು.
ಸಿದ್ದರಾಮಯ್ಯ ಆಸ್ಪತ್ರೆಯ ಅಧಿಕಾರಿಗಳಿಗೆ ಕ್ಯಾಂಟೀನ್ ಊಟ ತರುವಂತೆ ಸೂಚನೆ ನೀಡಿದರು. ಸಚಿವರ ಜೊತೆ ಸೇರಿ ಆಹಾರದ ಗುಣಮಟ್ಟವನ್ನು ವೀಕ್ಷಿಸಿದರು. ಅದರ ರುಚಿ ನೀಡಿದರು. ಉತ್ತಮ ಆರೋಗ್ಯಕ್ಕಾಗಿ ಗುಣಮಟ್ಟದ ಆಹಾರ ಸೇವನೆ ಮುಖ್ಯ. ಈ ದೃಷ್ಟಿಯಿಂದ ವಿಕ್ಟೋರಿಯಾ ಆಸ್ಪತ್ರೆಗೆ ದಿಢೀರ್ ಭೇಟಿ ನೀಡಿದ ಸಂದರ್ಭದಲ್ಲಿ ಇಲ್ಲಿನ ಕ್ಯಾಂಟೀನ್ ಊಟದ ಗುಣಮಟ್ಟವನ್ನು ಪರೀಕ್ಷಿಸಿದೆ ಎಂದು ಸಿದ್ದರಾಮಯ್ಯ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಾಕಿದ್ದಾರೆ.