ಮಂಗಳೂರು: ಕೇಂದ್ರ ಸರ್ಕಾರದ ವಿಬಿ–ಜಿ ರಾಮ್ಜಿ ಕಾಯ್ದೆ ಕುರಿತು ಜನಜಾಗೃತಿ ಮೂಡಿಸುವುದು ಹಾಗೂ ರಾಜ್ಯದಲ್ಲಿ ಭ್ರಷ್ಟಾಚಾರ ಮುಕ್ತ ಆಡಳಿತಕ್ಕೆ ಆಗ್ರಹಿಸಿ ಭಾರತೀಯ ಜನತಾ ಪಕ್ಷದ ಮಂಗಳೂರು ನಗರ ದಕ್ಷಿಣ ಮಂಡಲ ವತಿಯಿಂದ ಬಿಜೆಪಿ ಜಿಲ್ಲಾ ಕಚೇರಿಯಿಂದ ಮಂಗಳೂರು ಮಹಾನಗರ ಪಾಲಿಕೆ ಕಚೇರಿವರೆಗೆ ಬೃಹತ್ ಕಾಲ್ನಡಿಗೆ ಜಾಥಾ ನಡೆಸಲಾಯಿತು. ಜಾಥಾದಲ್ಲಿ ಬಿಜೆಪಿ ಮುಖಂಡರು, ಕಾರ್ಯಕರ್ತರು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡಿದ್ದರು.
ಸತೀಶ್ ಕುಂಪಲ್ ಹೇಳಿಕೆ: ಜಾಥಾ ಬಳಿಕ ಮಾತನಾಡಿದ ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ್, ಕಾಂಗ್ರೆಸ್ ಆಡಳಿತದ ಅವಧಿಯಲ್ಲಿ ಭ್ರಷ್ಟಾಚಾರ ವ್ಯಾಪಕವಾಗಿತ್ತು ಎಂದು ಆರೋಪಿಸಿದರು. ಸ್ವತಃ ರಾಜೀವ್ ಗಾಂಧಿ ಅವರೇ, ಸರ್ಕಾರ ಕೊಟ್ಟ ಒಂದು ರೂಪಾಯಿಯಲ್ಲಿ ಕೆಲವೇ ಪೈಸೆ ಜನರಿಗೆ ತಲುಪುತ್ತಿತ್ತು ಎಂದು ಹೇಳಿದ್ದನ್ನು ಉಲ್ಲೇಖಿಸಿದರು. ಆದರೆ ಇಂದಿನ ನರೇಂದ್ರ ಮೋದಿ ನೇತೃತ್ವದ ಸರ್ಕಾರದಲ್ಲಿ ಒಂದು ರೂಪಾಯಿಗೂ ಭ್ರಷ್ಟಾಚಾರಕ್ಕೆ ಅವಕಾಶವಿಲ್ಲ. ಅದರ ಮುಂದುವರಿದ ಭಾಗವೇ ವಿಬಿ–ಜಿ ರಾಮ್ಜಿ ಕಾಯ್ದೆ ಎಂದು ತಿಳಿಸಿದರು. ಕಾಂಗ್ರೆಸ್ ಪಕ್ಷ ಈ ಕಾಯ್ದೆಗೆ ಕಾರಣವಿಲ್ಲದೇ ವಿರೋಧ ವ್ಯಕ್ತಪಡಿಸುತ್ತಿದೆ ಎಂದು ಅವರು ಹೇಳಿದರು.
ಇದನ್ನೂ ಓದಿ: ಭಾರತ ಮಂಟಪದಲ್ಲಿ AI ಜಾಗೃತಿ : ಗಿನ್ನೆಸ್ ದಾಖಲೆ ನಿರ್ಮಾಣ
ಶಾಸಕ ವೇದವ್ಯಾಸ ಕಾಮತ್ ಆಕ್ರೋಶ: ನಂತರ ಮಾತನಾಡಿದ ಶಾಸಕ ವೇದವ್ಯಾಸ ಕಾಮತ್, ವಿಬಿ–ಜಿ ರಾಮ್ಜಿ ಕಾಯ್ದೆಯ ಮೂಲಕ ಬಡವರಿಗೆ ಹೆಚ್ಚು ಉದ್ಯೋಗಾವಕಾಶ ಕಲ್ಪಿಸಲಾಗಿದೆ ಎಂದು ಹೇಳಿದರು. ದುಡಿಯುವ ದಿನಗಳನ್ನು 100ರಿಂದ 125ಕ್ಕೆ ಹೆಚ್ಚಿಸಿದ್ದು ತಪ್ಪೇ ಎಂದು ಪ್ರಶ್ನಿಸಿದ ಅವರು, ಇದರಿಂದ ಕಾಂಗ್ರೆಸ್ಗೆ ತೊಂದರೆಯಾಗುತ್ತಿರುವುದಕ್ಕೆ ಅವರ ಅಸಲಿ ಉದ್ದೇಶವೇ ಕಾರಣ ಎಂದು ಆರೋಪಿಸಿದರು.
ಮನರೇಗಾ ಯೋಜನೆಯ ಹೆಸರಿನಲ್ಲಿ ಸಾವಿರಾರು ಕೋಟಿ ರೂಪಾಯಿ ಭ್ರಷ್ಟಾಚಾರ ನಡೆದಿದ್ದು, ಇನ್ನು ಮುಂದೆ ಅದಕ್ಕೆ ಅವಕಾಶ ಇಲ್ಲದಿರುವುದೇ ಕಾಂಗ್ರೆಸ್ ಅಸಹನೆಗೆ ಕಾರಣವಾಗಿದೆ ಎಂದು ಹೇಳಿದರು.
ಇದನ್ನೂ ಓದಿ: AI Summit: ಭಾರತ–Google ಡೀಪ್ಮೈಂಡ್ ಪಾಲುದಾರಿಕೆ ಘೋಷಣೆ
ರಾಜ್ಯ ಸರ್ಕಾರದ ವಿರುದ್ಧ ಟೀಕೆ: ರಾಜ್ಯದ ಕಾಂಗ್ರೆಸ್ ಸರ್ಕಾರದ ದುರಾಡಳಿತದಿಂದ ಜನತೆ ಬೇಸತ್ತಿದ್ದಾರೆ ಎಂದು ಕಾಮತ್ ಹೇಳಿದರು. ಇ-ಖಾತಾ ಸಿಗದಿರುವುದು, ಜೈಲ್ ಜಾಮರ್ ಸಮಸ್ಯೆ, ಮರಳು ಹಾಗೂ ಕೆಂಪುಕಲ್ಲು ಲಭ್ಯವಿಲ್ಲದಿರುವುದರಿಂದ ಜನರು ಸಂಕಷ್ಟ ಅನುಭವಿಸುತ್ತಿದ್ದಾರೆ. ಈ ಸಮಸ್ಯೆಗಳ ವಿರುದ್ಧ ಕಾಂಗ್ರೆಸ್ ಪಾದಯಾತ್ರೆ ಮಾಡಿತ್ತೇ ಎಂದು ಪ್ರಶ್ನಿಸಿದರು.
ಇದೇ ವೇಳೆ ಸಚಿವ ಪ್ರಿಯಾಂಕ್ ಖರ್ಗೆ ಅವರ ಹೇಳಿಕೆಗಳಿಗೂ ಪ್ರತಿಕ್ರಿಯಿಸಿದ ಅವರು, ಕರಾವಳಿ ಭಾಗದ ಅಭಿವೃದ್ಧಿಯನ್ನು ಅರಿತು ಮಾತನಾಡಬೇಕು ಎಂದರು. ಐಟಿ, ಶಿಕ್ಷಣ ಮತ್ತು ಆರೋಗ್ಯ ಕ್ಷೇತ್ರಗಳಲ್ಲಿ ಈ ಭಾಗ ನೀಡಿರುವ ಕೊಡುಗೆ ಗಮನಾರ್ಹವಾಗಿದೆ ಎಂದು ಹೇಳಿದರು.
ಇದನ್ನೂ ಓದಿ: 10 ರಾಜ್ಯಗಳ 37 ರಾಜ್ಯಸಭಾ ಸ್ಥಾನಗಳಿಗೆ ಮಾರ್ಚ್ 16ಕ್ಕೆ ಚುನಾವಣೆ
ಪ್ರಮುಖರ ಉಪಸ್ಥಿತಿ: ಈ ಜಾಥಾದಲ್ಲಿ ರಮೇಶ್ ಕಂಡೆಟ್ಟು, ರಮೇಶ್ ಹೆಗ್ಡೆ, ಲಲ್ಲೇಶ್ ಕುಮಾರ್, ತಿಲಕ್ ರಾಜ್ ಕೃಷ್ಣಾಪುರ, ಪೂರ್ಣಿಮಾ ಎಂ., ಸಂಜಯ್ ಪ್ರಭು, ಶಾನವಾಜ್, ಜಗನ್ನಾಥ್, ಸುಧೀರ್ ಶೆಟ್ಟಿ, ನಂದನ್ ಮಲ್ಯ, ವಸಂತ್ ಜೆ. ಪೂಜಾರಿ, ರವಿಶಂಕರ್ ಮಿಜಾರ್, ನಿತಿನ್ ಕುಮಾರ್, ವಿಜಯ್ ಕುಮಾರ್ ಶೆಟ್ಟಿ, ಅಶ್ವಿತ್ ಕೊಟ್ಟಾರಿ, ರಾಜಗೋಪಾಲ್ ರೈ ಸೇರಿದಂತೆ ಅನೇಕ ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರು ಭಾಗವಹಿಸಿದ್ದರು.
ಜನಜಾಗೃತಿ ಅಭಿಯಾನಕ್ಕೆ ಒತ್ತು: ವಿಬಿ–ಜಿ ರಾಮ್ಜಿ ಕಾಯ್ದೆಯ ಬಗ್ಗೆ ತಪ್ಪು ಮಾಹಿತಿ ಹರಡುತ್ತಿರುವುದನ್ನು ತಡೆಯಲು ಹಾಗೂ ಬಡವರ ಪರವಾದ ಯೋಜನೆಗಳ ಮಹತ್ವವನ್ನು ಜನರಿಗೆ ತಲುಪಿಸುವ ಉದ್ದೇಶದಿಂದ ಈ ಜಾಥಾ ಹಮ್ಮಿಕೊಳ್ಳಲಾಗಿದೆ ಎಂದು ಬಿಜೆಪಿ ಮುಖಂಡರು ತಿಳಿಸಿದರು.























