ದಕ್ಷಿಣ ಕನ್ನಡ: ಧರ್ಮಸ್ಥಳ ಕೇಸ್ ತನಿಖೆ ನಡೆಸುತ್ತಿರುವ ಎಸ್ಐಟಿ ಪೊಲೀಸರು ಮಹೇಶ್ ಶೆಟ್ಟಿ ತಿಮರೋಡಿ ಮನೆ ಮೇಲೆ ದಾಳಿ ಮಾಡಿದ್ದಾರೆ. ಧರ್ಮಸ್ಥಳ ಪ್ರಕರಣದ ದೂರುದಾರ ಸಿ.ಎನ್.ಚಿನ್ನಯ್ಯ ಜೊತೆ ಪೊಲೀಸರು ಆಗಮಿಸಿದ್ದಾರೆ.
ಮಂಗಳವಾರ ಸರ್ಚ್ ವಾರೆಂಟ್ ಜೊತೆ ಈ ದಾಳಿ ನಡೆಸಲಾಗಿದೆ. ಧರ್ಮಸ್ಥಳದಲ್ಲಿ ನೂರಾರು ಹೆಣಗಳನ್ನು ಹೂತು ಹಾಕಿದ್ದೇನೆ ಎಂದು ಹೇಳಿರುವ ಪ್ರಕರಣದ ಆರೋಪಿ ಚಿನ್ನಯ್ಯ ಜೊತೆ ಉಜಿರೆಯಲ್ಲಿರುವ ಮಹೇಶ್ ಶೆಟ್ಟಿ ತಿಮರೋಡಿ ಮನೆಗೆ ಪೊಲೀಸರು ಆಮಿಸಿದ್ದಾರೆ.
ಚಿನ್ನಯ್ಯರನ್ನು ಶನಿವಾರ ಬಂಧಿಸಿದ್ದ ಎಸ್ಐಟಿ ಅಧಿಕಾರಿಗಳು ಕೋರ್ಟ್ಗೆ ಹಾಜರುಪಡಿಸಿ 10 ದಿನಗಳ ಕಾಲ ವಶಕ್ಕೆ ಪಡೆದಿದ್ದರು. ಮಂಗಳವಾರ ಸ್ಥಳ ಮಹಜರು ನಡೆಸಲು ಆರೋಪಿಯನ್ನು ಮಹೇಶ್ ಶೆಟ್ಟಿ ತಿಮರೋಡಿ ಮನೆಗೆ ಕರೆದುಕೊಂಡು ಬಂದಿದ್ದಾರೆ.
ಉಜಿರೆಯಲ್ಲಿರುವ ಮಹೇಶ್ ಶೆಟ್ಟಿ ತಿಮರೋಡಿ ಮನೆಯಲ್ಲಿ ತಾನು ವಾಸ್ತವ್ಯ ಹೂಡಿದ್ದೆ ಎಂದು ದೂರುದಾರ ಚಿನ್ನಯ್ಯ ಪೊಲೀಸರ ಮುಂದೆ ಹೇಳಿಕೆ ನೀಡಿದ್ದ. ಆದ್ದರಿಂದ ತನಿಖಾಧಿಕಾರಿ ಜಿತೇಂದ್ರ ಕುಮಾರ್ ದಯಾಮ ನೇತೃತ್ವದಲ್ಲಿ ಪೊಲೀಸರು ಮಹೇಶ್ ಶೆಟ್ಟಿ ತಿಮರೋಡಿ ಮನೆ ಮೇಲೆ ದಾಳಿ ಮಾಡಿದ್ದಾರೆ.
ಬೆಳ್ತಂಗಡಿ ಕೋರ್ಟ್ಗೆ ಆಗಸ್ಟ್ 25ರಂದು ಅರ್ಜಿ ಸಲ್ಲಿಕೆ ಮಾಡಿದ್ದ ಎಸ್ಐಟಿ ಪೊಲೀಸರು ಮಹೇಶ್ ಶೆಟ್ಟಿ ತಿಮರೋಡಿ ಮನೆ ಸರ್ಚ್ ಮಾಡಲು ಅನುಮತಿ ಪಡೆದಿದ್ದರು. ಮಂಗಳವಾರ ಬೆಳಗ್ಗೆ ದಾಳಿ ಮಾಡಿದ್ದಾರೆ.
ಎರಡು ತಿಂಗಳ ಕಾಲ ಮಹೇಶ್ ಶೆಟ್ಟಿ ತಿಮರೋಡಿ ಮನೆಯಲ್ಲಿ ಆರೋಪಿ ಚಿನ್ನಯ್ಯಗೆ ಆಶ್ರಯ ನೀಡಲಾಗಿತ್ತು ಎಂಬ ಮಾಹಿತಿ ಇದೆ. ಈ ಹಿನ್ನಲೆಯಲ್ಲಿ ಸ್ಥಳ ಮಹಜರು ನಡೆಸಲು ಪೊಲೀಸರು ಆಗಮಿಸಿದ್ದಾರೆ.
ಧರ್ಮಸ್ಥಳ ಪ್ರಕರಣದಲ್ಲಿ ಸಂಚಲನ ಉಂಟು ಮಾಡಿದ್ದ ಯೂಟ್ಯೂಬರ್ ಸಮೀರ್ ಎಂ.ಡಿ.ಯನ್ನು ಪೊಲೀಸರು ಭಾನವಾರ, ಸೋಮವಾರ ವಿಚಾರಣೆ ನಡೆಸಿದ್ದರು. ಇದರ ಜೊತೆಗೆ ಅವರ ಯೂಟ್ಯೂಬ್ ಆದಾಯದ ಮೂಲ, ಹಣಕಾಸು ವ್ಯವಹಾರಗಳ ಮಾಹಿತಿ ಪಡೆದಿದ್ದರು.
ಪೊಲೀಸರ ಮತ್ತೊಂದು ತಂಡ ತಮ್ಮ ವಶದಲ್ಲಿರುವ ದೂರುದಾರ ಚಿನ್ನಯ್ಯ ವಿಚಾರಣೆಯನ್ನು ನಡೆಸುತ್ತಿದೆ. ಈ ವಿಚಾರಣೆ ಭಾಗವಾಗಿಯೇ ಮಹೇಶ್ ಶೆಟ್ಟಿ ತಿಮರೋಡಿ ಮನೆಯಲ್ಲಿ ಪರಿಶೀಲನೆ ನಡೆಸಲಾಗುತ್ತಿದೆ.
ಅನುಚೇತ್ ಅಮೆರಿಕ ಪ್ರವಾಸ: ಧರ್ಮಸ್ಥಳ ಕೇಸ್ ತನಿಖೆ ನಡುವೆಯೇ ಎಸ್ಐಟಿ ಅಧಿಕಾರಿ ಅನುಚೇತ್ ಅಮೆರಿಕ ಪ್ರವಾಸ ಕೈಗೊಂಡಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯ ಧರ್ಮಸ್ಥಳ ಪೊಲೀಸ್ ಠಾಣಾ ವ್ಯಾಪ್ತಿಯ ಪ್ರಕರಣಗಳ ತನಿಖೆಗೆ ರಾಜ್ಯ ಸರ್ಕಾರ ರಚಿಸಿದ್ದ ವಿಶೇಷ ತನಿಖಾ ತಂಡದ (ಎಸ್ಐಟಿ) ಸದಸ್ಯ ಪೊಲೀಸ್ ನೇಮಕಾತಿ ವಿಭಾಗದ ಡಿಐಜಿ ಎಂ.ಎನ್.ಅನುಚೇತ್ ಅಮೆರಿಕ ಪ್ರವಾಸಕ್ಕೆ ತೆರಳಿದ್ದಾರೆ.
ಪ್ರಕರಣದ ತನಿಖೆಯ ಮಧ್ಯೆಯೇ ಅವರು ಪ್ರವಾಸಕ್ಕೆ ಹೋಗಿದ್ದಾರೆ. ರಾಜ್ಯ ಸರ್ಕಾರವು ಆ.19ರಿಂದ 31ರವರೆಗೆ ವೇತನ ಸಹಿತ ರಜೆಯನ್ನು ಮಂಜೂರು ಮಾಡಿದ್ದು, ಅನುಚೇತ್ ಅವರು ಆಗಸ್ಟ್ 18ರಿಂದ ಆರಂಭವಾಗಿರುವ ‘ಇಂಟೆಲಿಜೆಂಟ್ ಟ್ರಾನ್ಸ್ರ್ಟೇಷನ್ ಸೊಸೈಟಿ ಆಫ್ ಅಮೆರಿಕ ವರ್ಲ್ಡ್ ಕಾಂಗ್ರೆಸ್-2025’ ರಲ್ಲಿ ಭಾಗವಹಿಸಲು ತೆರಳಿದ್ದಾರೆ ಎಂದು ತಿಳಿದುಬಂದಿದೆ.
ವೇತನ ಸಹಿತ ರಜೆ ಮಂಜೂರು ಮಾಡುವಂತೆ ಕೋರಿ ಅನುಚೇತ್ ಜು.16ರಂದು ಮನವಿ ಸಲ್ಲಿಸಿದ್ದರು. ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಸೂಚನೆಯ ಮೇರೆಗೆ, ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯ ಹೆಚ್ಚುವರಿ ಕಾರ್ಯದರ್ಶಿಯವರು ಆ.1ರಂದೇ ಪ್ರವಾಸಕ್ಕೆ ಅನುಮತಿ ನೀಡಿ ಆದೇಶ ಹೊರಡಿಸಿದ್ದರು. ಅನುಚೇತ್ ಅವರು ಆಗಸ್ಟ್ 18ರಂದೇ ಅಮೆರಿಕಕ್ಕೆ ತೆರಳಿದ್ದಾರೆ. ಸೆ.3 ಅಥವಾ 4ರಂದು ವಾಪಸ್ ಬರುವ ಸಾಧ್ಯತೆಯಿದೆ.