ದಾವಣಗೆರೆ: ರಾಮನಗರದಲ್ಲಿ ನವವಿವಾಹಿತೆಯೊಬ್ಬಳು ಶನಿವಾರ ರಾತ್ರಿ ಅನುಮಾನಾಸ್ಪದ ರೀತಿಯಲ್ಲಿ ಶವವಾಗಿ ಪತ್ತೆಯಾಗಿದ್ದಾಳೆ.
ದಾವಣಗೆರೆ ತಾಲೂಕಿನ ಕೈದಾಳೆ ಗ್ರಾಮದ ನಿವಾಸಿ ಅಮೂಲ್ಯ (19) ಮೃತಪಟ್ಟ ದುರ್ದೈವಿ. ಕಳೆದ ಒಂದು ವರ್ಷದ ಹಿಂದೆಯಷ್ಟೇ ಅಮೂಲ್ಯ, ಧನುಷ್ ಎಂಬುವವರನ್ನು ಪ್ರೀತಿಸಿ ಮದುವೆಯಾಗಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.
ದಾವಣಗೆರೆಯ ರಾಮನಗರದ ನಿವಾಸದಲ್ಲಿ ಅಮೂಲ್ಯ ಅವರ ಶವ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಇವರ ಸಾವಿನ ಸುದ್ದಿ ತಿಳಿಯುತ್ತಿದ್ದಂತೆ ಪತಿ ಧನುಷ್ ಹಾಗೂ ಅವರ ಕುಟುಂಬದ ಸದಸ್ಯರು ಮನೆ ತೊರೆದು ಪರಾರಿಯಾಗಿದ್ದಾರೆ ಎನ್ನಲಾಗಿದೆ. ಇದು ಅಮೂಲ್ಯ ಸಾವಿನ ಕುರಿತು ತೀವ್ರ ಅನುಮಾನಗಳಿಗೆ ಕಾರಣವಾಗಿದೆ.
ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿರುವ ದಾವಣಗೆರೆ ಮಹಿಳಾ ಪೊಲೀಸ್ ಠಾಣೆಯ ಅಧಿಕಾರಿಗಳು, ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ. ತಲೆಮರೆಸಿಕೊಂಡಿರುವ ಕುಟುಂಬದ ಸದಸ್ಯರ ಪತ್ತೆಗೆ ಜಾಲ ಬೀಸಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.






















