ದಾವಣಗೆರೆ: ಜಿಲ್ಲೆಯ ಹರಿಹರ ತಾಲೂಕು ರಾಜನಹಳ್ಳಿ ವಾಲ್ಮೀಕಿ ಗುರುಪೀಠದ ಶ್ರೀ ಪ್ರಸನ್ನಾನಂದಪುರಿ ಸ್ವಾಮೀಜಿ ಸೇರಿ 8 ಜನರ ವಿರುದ್ಧ ವಂಚನೆ ಪ್ರಕರಣ ದಾಖಲಾಗಿದೆ.
ನಕಲಿ ದಾಖಲೆಗಳನ್ನು ಸೃಷ್ಟಿಸಿ ವಂಚನೆ ಮಾಡಿದ್ದಾರೆಂಬ ಆರೋಪದ ಹಿನ್ನೆಲೆಯಲ್ಲಿ ನ್ಯಾಯಾಲಯದ ಆದೇಶದಂತೆ ಹಾವೇರಿ ಜಿಲ್ಲೆ ರಾಣೆಬೆನ್ನೂರು ಗ್ರಾಮಾಂತರ ಠಾಣೆಯಲ್ಲಿ ಪ್ರಸನ್ನಾನಂದಪುರಿ ಸ್ವಾಮೀಜಿ ಸೇರಿದಂತೆ 8 ಜನರ ಮೇಲೆ ಎಫ್.ಐ.ಆರ್ ಹಾಕಲಾಗಿದೆ.
ಸ್ವಾಮೀಜಿಯವರು ಮಾರುತಿ ಮ್ಯಾನ್ ಪವರ್ ಎಂಬ ಶಿಕ್ಷಣ ಸಂಸ್ಥೆ ಹೆಸರಿನಲ್ಲಿ ನಕಲಿ ದಾಖಲೆ ಸೃಷ್ಟಿಸಿದ್ದು, ಅದನ್ನೇ ನೋಂದಣಿ ಕಚೇರಿಗೆ ಕೊಟ್ಟು ಸರ್ಕಾರಕ್ಕೆ ಸಹ ವಂಚಿಸಿದ್ದಾರೆ. ಸಂಸ್ಥೆಯ ಕಮಿಟಿ ಸದಸ್ಯರ ಸಹಿಯನ್ನೇ ಸ್ವಾಮೀಜಿ ನಕಲು ಮಾಡಿ ವಂಚನೆ ಮಾಡಿದ್ದಾರೆ ಎನ್ನಲಾಗಿದೆ.
ಪ್ರಕರಣಕ್ಕೆ ಸಂಬಂಧಪಟ್ಟಂತೆ ನ್ಯಾಯಾಲಯವು ಪ್ರಕರಣ ದಾಖಲಿಸಿ ತನಿಖೆ ಮಾಡುವಂತೆ ಆದೇಶಿಸಿದೆ. ಕೋರ್ಟ್ ಆದೇಶದ ಮೇರೆಗೆ ರಾಣೇಬೆನ್ನೂರು ಗ್ರಾಮಾಂತರ ಠಾಣೆಯಲ್ಲಿ ಸ್ವಾಮೀಜಿ ಹಾಗೂ ಇನ್ನುಳಿದ 7 ಜನರ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ರಾಣೆಬೆನ್ನೂರು ಮೃತ್ಯುಂಜಯ ನಗರದ ಶ್ರೀಧರ್ ಚಿಕ್ಕಣ್ಣ ನೀಡಿದ ದೂರಿನ ಆಧಾರದ ಮೇಲೆ ಈ ವಿಚಾರ ಬೆಳಕಿಗೆ ಬಂದಿದ್ದು, ಪ್ರಕರಣದಲ್ಲಿ ಸ್ವಾಮೀಜಿಯೇ ಎ1 ಆರೋಪಿಯಾಗಿದ್ದಾರೆಂದು ತಿಳಿದುಬಂದಿದೆ.
ಮಂಗಳವಾರ ಬೆಂಗಳೂರಿನಲ್ಲಿ ನಡೆದ ವಾಲ್ಮೀಕಿ ಜಯಂತಿ ಕಾರ್ಯಕ್ರಮಕ್ಕೆ ಪ್ರಸನ್ನಾನಂದಪುರಿ ಸ್ವಾಮೀಜಿ ಗೈರಾಗಿದ್ದರು. ದಾವಣಗೆರೆ ನಗರದಲ್ಲಿ ಹಮ್ಮಿಕೊಂಡಿದ್ದ ಕಾರ್ಯಕ್ರಮಕ್ಕೂ ಕೂಡ ಹಾಜರಾಗಿರಲಿಲ್ಲ. ಸ್ವಾಮೀಜಿ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಭಕ್ತರು ಆಕ್ರೋಶ ವ್ಯಕ್ತಪಡಿಸಿ, ಕಾರ್ಯಕ್ರಮದಲ್ಲಿ ಭಾಗವಹಿಸದಂತೆ ಒತ್ತಾಯಿಸಿದ್ದರು. ಹಾಗಾಗಿಯೇ ಪ್ರಸನ್ನಾನಂದಪುರಿ ಸ್ವಾಮೀಜಿಯವರು ಯಾವುದೇ ವಾಲ್ಮೀಕಿ ಜಯಂತಿ ಕಾರ್ಯಕ್ರಮಗಳಿಗೆ ಹಾಜರಾಗಿಲ್ಲ ಎಂದು ಹೇಳಲಾಗಿದೆ.