ಹುಬ್ಬಳ್ಳಿ: ಹುಬ್ಬಳ್ಳಿಯಿಂದ ವಿಜಯಪುರಕ್ಕೆ ತೆರಳುತ್ತಿದ್ದ ಕೆಎಸ್ಆರ್ಟಿಸಿ ಬಸ್ (KA-28 F 2263) ನವಲಗುಂದದ ಗೊಬ್ಬರಗುಂಪಿ ಕ್ರಾಸ್ ಹತ್ತಿರ ನಿಯಂತ್ರಣ ತಪ್ಪಿ ಉರುಳಿದ ಘಟನೆ ಭಾನುವಾರ ಸಂಭವಿಸಿದೆ.
ಅಪಘಾತದ ವೇಳೆ ಬಸ್ನಲ್ಲಿ ಸುಮಾರು 30 ಪ್ರಯಾಣಿಕರು ಇದ್ದರು ಎಂದು ತಿಳಿದುಬಂದಿದ್ದು, ಕೆಲವರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲವೆಂದು ಅಧಿಕಾರಿಗಳು ತಿಳಿಸಿದ್ದಾರೆ. ತಕ್ಷಣವೇ ಪೊಲೀಸರು ಹಾಗೂ ಸ್ಥಳೀಯರು ಘಟನಾ ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯಾಚರಣೆ ನಡೆಸಿದರು.
ಗಾಯಾಳುಗಳನ್ನು ಹತ್ತಿರದ ನರಗುಂದ ತಾಲೂಕು ಆಸ್ಪತ್ರೆಗೆ ಸಾಗಿಸಿ ಚಿಕಿತ್ಸೆ ನೀಡಲಾಗಿದ್ದು, ನವಲಗುಂದ ಪೊಲೀಸ್ ಠಾಣೆಯ ಪಿಎಸ್ಐ ಜನಾರ್ಧನ್ ಭಟ್ರಳ್ಳಿ ಆಸ್ಪತ್ರೆಗೆ ಭೇಟಿ ನೀಡಿ ಗಾಯಾಳುಗಳ ಆರೋಗ್ಯ ವಿಚಾರಿಸಿದರು.
ಅಪಘಾತಕ್ಕೆ ಚಾಲಕರ ನಿಯಂತ್ರಣ ತಪ್ಪಿರುವುದು ಕಾರಣವಾಗಿರಬಹುದೆಂದು ಶಂಕಿಸಲಾಗಿದ್ದು, ಹೆಚ್ಚಿನ ತನಿಖೆ ಮುಂದುವರೆದಿದೆ. ಘಟನೆ ಸ್ಥಳದಲ್ಲಿ ಕೆಲ ಕಾಲ ಆತಂಕದ ವಾತಾವರಣ ನಿರ್ಮಾಣವಾಗಿತ್ತು.





















