Home Advertisement
Home ನಮ್ಮ ಜಿಲ್ಲೆ ಗದಗ ಕಬ್ಬಿಣದ ಸಲಾಕೆಯಿಂದ ಹೊಡೆದು ಪತಿಯ ಪ್ರಾಣ ತೆಗೆದ ಪತ್ನಿ

ಕಬ್ಬಿಣದ ಸಲಾಕೆಯಿಂದ ಹೊಡೆದು ಪತಿಯ ಪ್ರಾಣ ತೆಗೆದ ಪತ್ನಿ

0
8

ಗದಗ: ದಾಂಪತ್ಯಕಲಹ ಕೊಲೆಯಲ್ಲಿ ಅಂತ್ಯಗೊಂಡಿರುವ ಭೀಕರ ಘಟನೆ ಗದಗ ಜಿಲ್ಲೆಯ ನರಗುಂದ ತಾಲೂಕಿನ ರಡ್ಡೇರ ನಾಗನೂರು ಗ್ರಾಮದಲ್ಲಿ ನಡೆದಿದೆ. ಪತ್ನಿಯೇ ಕಬ್ಬಿಣದ ಸಲಾಕೆಯಿಂದ ಪತಿಯನ್ನು ಹೊಡೆದು ಹತ್ಯೆ ಮಾಡಿರುವ ಆರೋಪ ಕೇಳಿಬಂದಿದೆ.

ವಿಶ್ವನಾಥ ಹಾದಿಮನಿ (29) ಕೊಲೆಯಾದ ಯುವಕ. ಪತ್ನಿ ಕವಿತಾಳನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

ವಿಶ್ವನಾಥ ಹಾಗೂ ಕವಿತಾ 2022ರಲ್ಲಿ ಪ್ರೀತಿಸಿ ಮದುವೆಯಾಗಿದ್ದರು. ಆದರೆ ಮದುವೆಯಾದ ದಿನದಿಂದಲೇ ಇಬ್ಬರ ನಡುವೆ ನಿರಂತರ ವೈಮನಸ್ಸು ಹಾಗೂ ಕಲಹ ನಡೆಯುತ್ತಿತ್ತು ಎನ್ನಲಾಗಿದೆ. ಕೆಲ ದಿನಗಳಿಂದ ದೂರವಾಗಿದ್ದ ಕವಿತಾ, 15 ದಿನಗಳ ಹಿಂದಷ್ಟೇ ಗಂಡನ ಮನೆಗೆ ಮರಳಿದ್ದಳು.

ನಿನ್ನೆ ರಾತ್ರಿ ದಂಪತಿ ನಡುವೆ ಮತ್ತೆ ಜಗಳ ನಡೆದಿದ್ದು, ಅದು ವಿಕೋಪಕ್ಕೆ ತಿರುಗಿದೆ ಎನ್ನಲಾಗಿದೆ. ಜಗಳದ ವೇಳೆ ಕಬ್ಬಿಣದ ಸಲಾಕೆಯಿಂದ ವಿಶ್ವನಾಥನ ಮೇಲೆ ಹಲ್ಲೆ ನಡೆಸಲಾಗಿದ್ದು, ಗಂಭೀರವಾಗಿ ಗಾಯಗೊಂಡ ಆತ ಸ್ಥಳದಲ್ಲೇ ಮೃತಪಟ್ಟಿದ್ದಾನೆ ಎಂದು ತಿಳಿದುಬಂದಿದೆ.

ಇಂದು ಮಧ್ಯಾಹ್ನ ಘಟನೆ ಬೆಳಕಿಗೆ ಬಂದಿದ್ದು, ಗ್ರಾಮದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ. ಸ್ಥಳಕ್ಕೆ ಭೇಟಿ ನೀಡಿದ ನರಗುಂದ ಪೊಲೀಸರು ಪರಿಶೀಲನೆ ನಡೆಸಿ, ಆರೋಪಿ ಪತ್ನಿ ಕವಿತಾಳನ್ನು ವಶಕ್ಕೆ ಪಡೆದು ವಿಚಾರಣೆ ಮುಂದುವರಿಸಿದ್ದಾರೆ.

ಈ ಕುರಿತು ನರಗುಂದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಕೊಲೆಗೆ ನಿಖರ ಕಾರಣವೇನು ಎಂಬುದನ್ನು ಪೊಲೀಸರು ತನಿಖೆ ಮೂಲಕ ಪತ್ತೆಹಚ್ಚುತ್ತಿದ್ದಾರೆ.