ಕಲಬುರಗಿ: ಕಲಬುರಗಿ ವಿಮಾನ ನಿಲ್ದಾಣದ ಕಾರ್ಯಾಚರಣೆ ಕುರಿತು ಗ್ರಾಮೀಣಾಭಿವೃದ್ದಿ ಹಾಗೂ ಪಂಚಾಯತ್ ರಾಜ್ ಹಾಗೂ ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಶನಿವಾರ ವಿಮಾನ ನಿಲ್ದಾಣದ ನಿರ್ದೇಶಕ ಡಾ. ಮಹೇಶ್ ಅವರಿಂದ ಮಾಹಿತಿ ಪಡೆದುಕೊಂಡರು.
ಆ ಸಂದರ್ಭದಲ್ಲಿ ಕೆಲ ಸಮಸ್ಯೆಗಳನ್ನು ನಿರ್ದೇಶಕರು ಸಚಿವರ ಗಮನಕ್ಕೆ ತಂದು, ಮುಖ್ಯವಾಗಿ ವಿಮಾನ ಸೇವೆಗಳ ಸಂಖ್ಯೆಯಲ್ಲಿ ಕಡಿತವಾಗಿದ್ದು, ಇದನ್ನು ಹೆಚ್ಚಿಸುವಂತೆ ಮನವಿ ಮಾಡಿದರು. ಈ ಕುರಿತು ಕೇಂದ್ರ ವಿಮಾನಯಾನ ಸಚಿವರೊಂದಿಗೆ ಮಾತುಕತೆ ನಡೆಸುವುದಾಗಿ ಸಚಿವರು ತಿಳಿಸಿದರು.
ಕಲಬುರ್ಗಿ ವಿಮಾನ ನಿಲ್ದಾಣ ಪಂಚಾಯತಿ ವ್ಯಾಪ್ತಿಯಲ್ಲಿ ಬರುತ್ತದೆ. ನಿಲ್ದಾಣದ ಕಸ ವಿಲೇವಾರಿ ಸಮಸ್ಯೆ ಉಂಟಾಗುತ್ತಿದ್ದು, ಇದರಿಂದ ನಿಲ್ದಾಣದ ಕಾರ್ಯನಿರ್ವಹಣೆಗೆ ತೊಂದರೆಯಾಗುತ್ತಿದೆ ಎಂದು ನಿರ್ದೇಶಕರು ಸಚಿವರ ಗಮನಕ್ಕೆ ತಂದಾಗ ಕೂಡಲೇ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗೆ ದೂರವಾಣಿ ಕರೆ ಮಾಡಿ ಕೂಡಲೇ ಸಮಸ್ಯೆ ಪರಿಹರಿಸುವಂತೆ ಸೂಚಿಸಿದರು.
ಕಲ್ಯಾಣ ಕರ್ನಾಟಕ ಭಾಗದ ಬಹುಮುಖ್ಯ ಸಂಪರ್ಕ ಕೊಂಡಿಯಾಗಿರುವ ನಮ್ಮ ಕಲಬುರ್ಗಿ ವಿಮಾನ ನಿಲ್ದಾಣದ ಉಪಯುಕ್ತ ಬಳಕೆ ಹೆಚ್ಚಿಸಲು ಹಾಗೂ ಮತ್ತಷ್ಟು ಜನಸ್ನೇಹಿ ಹಾಗೂ ಜನಪಯೋಗಿಯಾಗಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರದ ಮತ್ತು ಜಿಲ್ಲಾಡಳಿತದ ವತಿಯಿಂದ ಆಗಬೇಕಾದ ಎಲ್ಲಾ ಕೆಲಸಗಳಲ್ಲಿ ರಾಜ್ಯ ಸರ್ಕಾರ ಸಂಪೂರ್ಣ ಸಹಕಾರ ನೀಡಲಿದೆ ಎಂದು ಸಚಿವರು ಭರವಸೆ ನೀಡಿದರು. ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣಪ್ರಕಾಶ್ ಪಾಟೀಲ್ ಇದ್ದರು.