
ಕಲಬುರಗಿ : ಅಫಜಲಪುರ ಪೊಲೀಸ್ ಠಾಣೆಯಿಂದ ಪರಾರಿಯಾಗಿ ಪೊಲೀಸರಿಗೆ ತಲೆನೋವಾಗಿದ್ದ ಪೋಕ್ಸೋ (POCSO) ಪ್ರಕರಣದ ಆರೋಪಿ ಮಂಜುನಾಥ್ ಕೊನೆಗೂ ಮತ್ತೆ ಪೊಲೀಸರ ಬಲೆಗೆ ಬಿದ್ದಿದ್ದಾನೆ. ಮಹಾರಾಷ್ಟ್ರಕ್ಕೆ ಪರಾರಿಯಾಗಲು ಯತ್ನಿಸುತ್ತಿದ್ದ ಆರೋಪಿಯನ್ನು ತೆಲ್ಲೂರು ಬಳಿ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ ಎಂದು ಎಸ್. ಪಿ. ಆಡೂರು ಶ್ರೀನಿವಾಸಲು ತಿಳಿಸಿದ್ದಾರೆ.
16 ವರ್ಷದ ಅಪ್ರಾಪ್ತ ಬಾಲಕಿಯ ಅಪಹರಣ ಹಾಗೂ ಪೋಕ್ಸೋ ಪ್ರಕರಣದಲ್ಲಿ ಆರೋಪಿಯಾಗಿದ್ದ ಮಂಜುನಾಥ್ನ್ನು ಇತ್ತೀಚೆಗೆ ಮಹಾರಾಷ್ಟ್ರದ ಪುಣೆಯಲ್ಲಿ ಬಂಧಿಸಿ ಅಫಜಲಪುರಕ್ಕೆ ಕರೆತರಲಾಗಿತ್ತು. ಆದರೆ ಠಾಣೆಯಲ್ಲಿ ಕಾನೂನು ಪ್ರಕ್ರಿಯೆ ನಡೆಯುತ್ತಿದ್ದ ವೇಳೆ ಆತ ಪೊಲೀಸರ ಕಣ್ತಪ್ಪಿಸಿ ಪರಾರಿಯಾಗಿದ್ದನು.
ಇದನ್ನೂ ಓದಿ: ರಾಜ್ಯದ 8 ಜಿಲ್ಲೆಗಳಲ್ಲಿ ಹೊಸ ಪೊಲೀಸ್ ಠಾಣೆ ಕಟ್ಟಡ ನಿರ್ಮಾಣಕ್ಕೆ ಅನುಮೋದನೆ
ವಿಶೇಷ ಕಾರ್ಯಾಚರಣೆ ಫಲ : ಆರೋಪಿ ಪರಾರಿಯಾದ ತಕ್ಷಣ ಕಲಬುರಗಿ ಜಿಲ್ಲಾ ಪೊಲೀಸರು ವಿಶೇಷ ತಂಡಗಳನ್ನು ರಚಿಸಿ ವ್ಯಾಪಕ ಶೋಧ ಕಾರ್ಯ ಆರಂಭಿಸಿದ್ದರು. ಗಡಿ ಪ್ರದೇಶಗಳು, ಪ್ರಮುಖ ರಸ್ತೆಗಳು ಹಾಗೂ ಮಹಾರಾಷ್ಟ್ರಕ್ಕೆ ಸಂಪರ್ಕ ಕಲ್ಪಿಸುವ ಮಾರ್ಗಗಳಲ್ಲಿ ಕಟ್ಟುನಿಟ್ಟಿನ ನಿಗಾ ವಹಿಸಲಾಗಿತ್ತು. ಗುಪ್ತ ಮಾಹಿತಿ ಆಧರಿಸಿ ಕಾರ್ಯಾಚರಣೆ ನಡೆಸಿದ ಪೊಲೀಸರು, ಮಹಾರಾಷ್ಟ್ರಕ್ಕೆ ಪರಾರಿಯಾಗಲು ಯತ್ನಿಸುತ್ತಿದ್ದ ಮಂಜುನಾಥ್ನನ್ನು ತೆಲ್ಲೂರು ಪ್ರದೇಶದಲ್ಲಿ ವಶಕ್ಕೆ ಪಡೆದಿದ್ದಾರೆ.
ಮತ್ತೊಂದು ಪ್ರಕರಣ ದಾಖಲು : ಪೊಲೀಸ್ ಠಾಣೆಯಿಂದ ಪರಾರಿಯಾದ ಹಿನ್ನೆಲೆಯಲ್ಲಿ, ಪೋಕ್ಸೋ ಪ್ರಕರಣದ ಜೊತೆಗೆ ಪೊಲೀಸ್ ವಶದಿಂದ ತಪ್ಪಿಸಿಕೊಂಡ ಆರೋಪದಡಿ ಮಂಜುನಾಥ್ ವಿರುದ್ಧ ಮತ್ತೊಂದು ಪ್ರತ್ಯೇಕ ಪ್ರಕರಣ ದಾಖಲಿಸಲಾಗಿದೆ.
ಇದನ್ನೂ ಓದಿ: ಬಾಗಲಕೋಟೆಯ BTDA ಕಚೇರಿಯಲ್ಲಿ ಲೋಕಾಯುಕ್ತ ದಾಳಿ
ಭದ್ರತೆ ಮತ್ತಷ್ಟು ಬಿಗಿ : ಆರೋಪಿಯನ್ನು ಮರುಬಂಧಿಸಿದ ಬಳಿಕ ಕಾನೂನು ಪ್ರಕ್ರಿಯೆಗಳನ್ನು ಕಟ್ಟುನಿಟ್ಟಿನ ಭದ್ರತೆಯಲ್ಲಿ ನಡೆಸಲಾಗುತ್ತಿದೆ. ಠಾಣೆಯಿಂದ ಆರೋಪಿ ಹೇಗೆ ತಪ್ಪಿಸಿಕೊಂಡ, ಈ ಪ್ರಕರಣದಲ್ಲಿ ಯಾವುದೇ ನಿರ್ಲಕ್ಷ್ಯ ನಡೆದಿದೆಯೇ ಎಂಬ ಬಗ್ಗೆ ಇಲಾಖಾ ಮಟ್ಟದಲ್ಲೂ ತನಿಖೆ ನಡೆಯುವ ಸಾಧ್ಯತೆ ಇದೆ.
ಪೊಲೀಸರು ಆರೋಪಿಯನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಿ ಮುಂದಿನ ಕಾನೂನು ಕ್ರಮ ಕೈಗೊಳ್ಳಲಿದ್ದಾರೆ.





















