ಕಲಬುರಗಿ: ನಗರದಲ್ಲಿ ಹಗಲು ರಾತ್ರಿಯೆನ್ನದೆ ಅಪರಾಧ ಕೃತ್ಯಗಳು ಹೆಚ್ಚಾಗುತ್ತಿದ್ದು, ಇದೀಗ ಕಬ್ಬಿಣದ ರಾಡ್ನಿಂದ ತಲೆಗೆ ಹೊಡೆದು ನಿವೃತ್ತ ಸೈನಿಕನನ್ನು ಬರ್ಬರ ಕೊಲೆ ಮಾಡಿರುವ ಘಟನೆ ಕಲಬುರಗಿ ನಗರದ ರಾಮ ಮಂದಿರ ಬಳಿ ಭಾನುವಾರ ನಡೆದಿದೆ.
ಆಳಂದ ತಾಲೂಕಿನ ಹಡಲಗಿ ಗ್ರಾಮದ ನಿವಾಸಿ ರವಿಚಂದ್ರ ಖೇಡ್ (45) ಕೊಲೆಯಾದ ದುರ್ದೈವಿ. ಇವರು ಕಳೆದ ನಾಲ್ಕು ವರ್ಷಗಳ ಹಿಂದಷ್ಟೇ ಬಿಎಸ್ಎಫ್ (BSF) ಪಡೆಯಿಂದ ನಿವೃತ್ತರಾಗಿದ್ದರು. ಸದ್ಯ ಕಲಬುರಗಿಯ ಇಂಡಿಯನ್ ಆಯಿಲ್ ಡಿಪೋದಲ್ಲಿ ಸೆಕ್ಯೂರಿಟಿ ಗಾರ್ಡ್ ಆಗಿ ಕೆಲಸ ಮಾಡುತ್ತಿದ್ದರು.
ನಗರದ ರಾಮ ಮಂದಿರದ ಬಳಿ ಇರುವ ವಿವಾದಿತ ಖಾಸಗಿ ಜಾಗವೊಂದರಲ್ಲಿ ಈ ಭೀಕರ ಕೊಲೆ ನಡೆದಿದೆ. ದುಷ್ಕರ್ಮಿಗಳು ರವಿಚಂದ್ರ ಅವರ ತಲೆಗೆ ಕಬ್ಬಿಣದ ರಾಡ್ನಿಂದ ಬಲವಾಗಿ ಜಜ್ಜಿ ಕೊಲೆ ಮಾಡಿದ್ದಾರೆ ಎಂದು ತಿಳಿದು ಬಂದಿದೆ.
ಜಾಗದ ವಿವಾದವೇ ಈ ಕೊಲೆಗೆ ಪ್ರಮುಖ ಕಾರಣವೇ ಅಥವಾ ಇದರ ಹಿಂದೆ ಬೇರೆನಾದರೂ ವೈಷಮ್ಯ ಅಡಗಿದೆಯೇ ಎಂಬ ಶಂಕೆ ವ್ಯಕ್ತವಾಗಿದ್ದು, ತನಿಖೆಯಿಂದ ಸತ್ಯಾಸತ್ಯತೆ ಹೊರ ಬರಬೇಕಿದೆ. ಘಟನಾ ಸ್ಥಳಕ್ಕೆ ಸ್ಟೇಷನ್ ಬಜಾರ್ ಪೊಲೀಸ್ ಠಾಣೆಯ ಅಧಿಕಾರಿಗಳು ಹಾಗೂ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.






















