ಕಲಬುರಗಿ: ಆಳಂದ ಪಟ್ಟಣದ ಲಾಡ್ಲೆ ಮಶಾಕ್ ದರ್ಗಾದಲ್ಲಿನ ಶಿವಲಿಂಗಕ್ಕೆ ಮಹಾಶಿವರಾತ್ರಿಯಂದು ಪೂಜೆ ಸಲ್ಲಿಸಲು ಅವಕಾಶ ನೀಡಿದ್ದ ಕಲಬುರಗಿ ವಿಭಾಗೀಯ ಹೈಕೋರ್ಟ್ ಆದೇಶವನ್ನು ಸುಪ್ರೀಂ ಕೋರ್ಟ್ ಎತ್ತಿ ಹಿಡಿದಿದೆ.
ಪೂಜೆಗೆ ತಡೆ ನೀಡುವಂತೆ ದರ್ಗಾ ಸಮಿತಿ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ತಿರಸ್ಕರಿಸಿದ್ದು, ಹೈಕೋರ್ಟ್ ಆದೇಶವೇ ಮುಂದುವರಿಯಲಿದೆ ಎಂದು ಸುಪ್ರೀಂ ಕೋರ್ಟ್ ಸ್ಪಷ್ಟಪಡಿಸಿದೆ.
ಹಿಂದು ಮುಖಂಡ ಸಿದ್ದರಾಮಯ್ಯ ಹಿರೇಮಠ ಅವರು ಕಲಬುರಗಿ ಹೈಕೋರ್ಟ್ಗೆ ಅರ್ಜಿ ಸಲ್ಲಿಸಿ, 15ರಂದು ನಿರ್ದಿಷ್ಟ ಸಮಯದಲ್ಲಿ ಪೂಜೆ ಸಲ್ಲಿಸಲು ಅನುಮತಿ ಕೋರಿದ್ದರು. ಅರ್ಜಿ ಪರಿಗಣಿಸಿದ ಹೈಕೋರ್ಟ್, ಅರ್ಜಿದಾರರಿಗೆ ಮಾತ್ರ ಮಧ್ಯಾಹ್ನ 2 ರಿಂದ ಸಂಜೆ 6ರವರೆಗೆ ಪೂಜೆ ಸಲ್ಲಿಸಲು ಅವಕಾಶ ನೀಡಿತ್ತು.
ಇದನ್ನು ಪ್ರಶ್ನಿಸಿ ದರ್ಗಾ ಸಮಿತಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದರೂ, ಸಂವಿಧಾನದ 32ನೇ ವಿಧಿಯನ್ನು ಈ ಉದ್ದೇಶಕ್ಕೆ ಬಳಸಲು ಸಾಧ್ಯವಿಲ್ಲ ಎಂದು ಕೋರ್ಟ್ ಅಭಿಪ್ರಾಯ ವ್ಯಕ್ತಪಡಿಸಿ ಅರ್ಜಿಯನ್ನು ತಳ್ಳಿ ಹಾಕಿದೆ. ಸುಪ್ರೀಂ ಕೋರ್ಟ್ ತೀರ್ಪಿನಿಂದ ಈ ವರ್ಷದ ಮಹಾಶಿವರಾತ್ರಿ ಪೂಜೆಗೆ ಕಾನೂನು ಸ್ಪಷ್ಟತೆ ದೊರೆತಿದೆ.























