ಬೆಂಗಳೂರು: ಗಾಲಿ ಜನಾರ್ದನ ರೆಡ್ಡಿ ಅವರು ಚುನಾವಣಾ ಆಯೋಗಕ್ಕೆ ಸಲ್ಲಿಸಿರುವ ಪ್ರಮಾಣ ಪತ್ರದಲ್ಲಿ ಸುಳ್ಳು ಮಾಹಿತಿ ನೀಡಿದ್ದಾರೆಂಬ ವಿಷಯಕ್ಕೆ ಸಂಬಂಧಿಸಿದಂತೆ ಕರ್ನಾಟಕ ಹೈಕೋರ್ಟ್ ನೋಟಿಸ್ ಜಾರಿಗೊಳಿಸಿದೆ.
ಆಂಧ್ರಪ್ರದೇಶ ಅನಂತಪುರದ ಟಪಾಲ್ ಶ್ಯಾಮ್ ಪ್ರಸಾದ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಕರ್ನಾಟಕ ಹೈಕೋರ್ಟ್, ಕೇಂದ್ರ ಚುನಾವಣಾ ಆಯೋಗ, ರಾಜ್ಯ ಮುಖ್ಯ ಚುನಾವಣಾಧಿಕಾರಿ ಮತ್ತು ಜನಾರ್ದನ ರೆಡ್ಡಿ ಅವರಿಗೆ ನೋಟಿಸ್ ಜಾರಿಗೊಳಿಸಿದೆ.
ನ್ಯಾಯಮೂರ್ತಿ ಎಸ್. ಸುನೀಲ್ ದತ್ ಯಾದವ್ ಅವರ ಏಕಸದಸ್ಯ ಪೀಠವು ಅರ್ಜಿ ವಿಚಾರಣೆಯನ್ನು ನೋಟಿಸ್ ಜಾರಿಗೊಳಿಸಿ, ವಿಚಾರಣೆಯನ್ನು ಮುಂದೂಡಿದೆ.
ಜನಾರ್ದನ ರೆಡ್ಡಿ ಅವರು ಕಲ್ಯಾಣ ರಾಜ್ಯ ಪ್ರಗತಿ ಪಕ್ಷ (ಕೆಆರ್ಪಿಪಿ) ದಿಂದ ಕಳೆದ ವಿಧಾನಸಭಾ ಚುನಾವಣೆಯಲ್ಲಿ ಗಂಗಾವತಿ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ನ ಇಕ್ಬಾಲ್ ಅನ್ಸಾರಿ ಅವರ ವಿರುದ್ಧ 8,266 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದರು.
ಫಾರ್ಮ್ 25 ಮತ್ತು 26ರಲ್ಲಿ ಆಸ್ತಿ ಮಾಹಿತಿ, ವಾಹನಗಳ ವಿವರ, ಕರ್ನಾಟಕ ಮತ್ತು ಆಂಧ್ರಪ್ರದೇಶದಲ್ಲಿ ಅವರ ವಿರುದ್ಧ ಬಾಕಿ ಇರುವ ಪ್ರಕರಣಗಳ ವಿವರ, ಇತ್ಯರ್ಥವಾಗಿರುವ ಮತ್ತು ಶಿಕ್ಷೆಯಾಗಿರುವ ಪ್ರಕರಣಗಳ ವಿವರಗಳನ್ನು ಸಲ್ಲಿಸಿಲ್ಲ. ಈ ಕುರಿತಂತೆ ಜೂನ್ 14, 2023 ಮತ್ತು ಜೂನ್ 12, 2023ರಂದು ಕೇಂದ್ರ ಚುನಾವಣಾ ಆಯೋಗ, ಮುಖ್ಯ ಚುನಾವಣಾಧಿಕಾರಿ ಮತ್ತು ಕ್ಷೇತ್ರದ ಚುನಾವಣಾಧಿಕಾರಿಗೆ ಮನವಿ ನೀಡಿ, ಜನಾರ್ದನ ರೆಡ್ಡಿ ಅವರ ವಿರುದ್ಧ ಸೂಕ್ತ ಕ್ರಮಕ್ಕೆ ಕೋರಲಾಗಿತ್ತು. ಈ ಕುರಿತಂತೆ ಯಾವುದೇ ಕ್ರಮವನ್ನು ಸಕ್ಷಮ ಪ್ರಾಧಿಕಾರಗಳು ಕೈಗೊಂಡಿಲ್ಲ. ಈ ಹಿನ್ನೆಲೆಯಲ್ಲಿ ನ್ಯಾಯಾಲಯವು ದಾಖಲೆಗಳನ್ನು ತರಿಸಿ ಪರಿಶೀಲಿಸಬೇಕು ಎಂದು ಅರ್ಜಿದಾರರು ಕೋರಿದ್ದಾರೆ.