ಕೊಪ್ಪಳ: ಅ.6ಕ್ಕೆ ಸಿದ್ದರಾಮಯ್ಯ ಆಗಮನ, ಜನರನ್ನು ಕರೆತರಲು 1,500 ಬಸ್

0
49

ಕೊಪ್ಪಳ ಜಿಲ್ಲೆಗೆ ಅಕ್ಟೋಬರ್ 6ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆಗಮಿಸುತ್ತಿದ್ದಾರೆ. ಜಿಲ್ಲೆಯ ವಿವಿಧ ಕಾರ್ಯಕ್ರಮಗಳ ಉದ್ಘಾಟನೆ ಹಾಗೂ ಶಂಕುಸ್ಥಾಪನೆ ಮತ್ತು ಫಲಾನುಭವಿಗಳಿಗೆ ಸೌಲಭ್ಯಗಳನ್ನು ವಿತರಿಸುವ ಕಾರ್ಯಕ್ರಮಕ್ಕೆ ನಡೆಯಲಿದೆ. ಈ ಸಮಾವೇಶದಲ್ಲಿ ಸಾವಿರಾರು ಜನರು ಪಾಲ್ಗೊಳ್ಳುವ ನಿರೀಕ್ಷೆ ಇದೆ.

ಹಿಂದುಳಿದ ವರ್ಗಗಳ ಕಲ್ಯಾಣ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ್ ಎಸ್. ತಂಗಡಗಿ ಮುಖ್ಯಮಂತ್ರಿಗಳ ಕಾರ್ಯಕ್ರಮಕ್ಕೆ ಹೆಚ್ಚಿನ ಜನರನ್ನು ಸೇರಿಸಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಕಾರ್ಯಕ್ರಮದ ಪೂರ್ವಭಾವಿ ಸಭೆಯನ್ನು ನಡೆಸಿದ್ದಾರೆ.

ಕೊಪ್ಪಳ ಜಿಲ್ಲಾಧಿಕಾರಿ ಡಾ.ಸುರೇಶ ಬಿ. ಇಟ್ನಾಳ ಮಾತನಾಡಿ, “ಕಾಮಗಾರಿಗಳ ಪಟ್ಟಿಯನ್ನು ತಯಾರಿಸಲಾಗಿದೆ. 2 ಸಾವಿರ 5 ಕೋಟಿ ರೂ.ಗಳ ಕಾಮಗಾರಿಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ನಡೆಯಲಿವೆ. ಪ್ರತಿ ತಾಲ್ಲೂಕುವಾರು ತಹಶೀಲ್ದಾರ್ ಮತ್ತು ಇಓಗಳನ್ನು ಒಳಗೊಂಡ ಸಮಿತಿ ಮಾಡಲಾಗಿದೆ. ಪ್ರತಿ ಭೂತಿಗೆ ಒಂದು ಬಸ್ ವ್ಯವಸ್ಥೆ ಮಾಡಲಾಗುತ್ತಿದೆ” ಎಂದರು.

“ಒಟ್ಟು 1500 ಸರ್ಕಾರಿ ಬಸ್ಸುಗಳು ಮತ್ತು 100 ಖಾಸಗಿ ಬಸ್ಸುಗಳನ್ನು ಕಾರ್ಯಕ್ರಮಕ್ಕೆ ಜನರನ್ನು ಕರೆದುಕೊಂಡು ಬರಲು ವ್ಯವಸ್ಥೆ ಮಾಡಲಾಗಿದೆ. 83,655 ಫಲಾನುಭವಿಗಳ ಪಟ್ಟಿ ಮಾಡಲಾಗಿದೆ. ಗೃಹಲಕ್ಷ್ಮೀ, ನರೇಗಾ, ಅನ್ನಭಾಗ್ಯ ಸೇರಿದಂತೆ ವಿವಿಧ ಫಲಾನುಭವಿಗಳ ಪಟ್ಟಿ ತಯಾರಿಸಲಾಗಿದೆ. ಊಟದ ಟೆಂಡರ್ ಕರೆದು ವ್ಯವಸ್ಥೆ ಮಾಡಲಾಗಿದೆ ಜನರಿಗೆ ತೊಂದರೆಯಾಗದಂತೆ 100 ಊಟದ ಕೌಂಟರಗಳನ್ನು ಮಾಡಲಾಗುತ್ತಿದೆ. ವೇದಿಕೆ ಕೆಲಸ ನಡೆಯುತ್ತಿದೆ” ಎಂದು ಹೇಳಿದ್ದಾರೆ.

ಸಚಿವ ಶಿವರಾಜ್ ಎಸ್. ತಂಗಡಗಿ ಮಾತನಾಡಿ, “ಜನರ ಅಭಿವೃದ್ಧಿಗಾಗಿ ನಮ್ಮ ಸರ್ಕಾರ ಕಳೆದ ಎರಡೂವರೆ ವರ್ಷಗಳ ಅವಧಿಯಲ್ಲಿ ಜನಪರ ಕಾರ್ಯಕ್ರಮಗಳನ್ನು ರೂಪಿಸಿದ್ದು, ಶಕ್ತಿಯೋಜನೆ, ಗೃಹಜ್ಯೋತಿ, ಗೃಹಲಕ್ಷ್ಮೀ, ಅನ್ನಭಾಗ್ಯ ಮತ್ತು ಯುವನಿಧಿ ಯೋಜನೆಯನ್ನು ಜಾರಿಗೊಳಿಸಿ, ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನೇರವಾಗಿ ಗ್ಯಾರಂಟಿ ಯೋಜನೆಗಳ ಲಾಭಸಿಗುವಂತೆ ಮಾಡಿದೆ” ಎಂದು ತಿಳಿಸಿದರು.

“ಹಲವಾರು ಅಭಿವೃದ್ಧಿ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ. ಈ ದಿಶೆಯಲ್ಲಿ ಕೊಪ್ಪಳ ಜಿಲ್ಲೆಯ ವಿವಿಧ ಕಾಮಗಾರಿಗಳ ಉದ್ಘಾಟನೆ ಹಾಗೂ ಶಂಕುಸ್ಥಾಪನೆ ಮತ್ತು ಫಲಾನುಭವಿಗಳಿಗೆ ಸೌಲಭ್ಯಗಳನ್ನು ವಿತರಿಸಲು ಮುಖ್ಯಮಂತ್ರಿಗಳು ಕೊಪ್ಪಳಕ್ಕೆ ಆಗಮಿಸುತ್ತಿದ್ದು, ಈ ಕಾರ್ಯಕ್ರಮ ಅಚ್ಚುಕಟ್ಟಾಗಿ ನೆರವೇರಿಸಲು ಈಗಾಗಲೇ ರಚಿಸಲ್ಪಟ್ಟ ಸಮಿತಿಗಳು ತಮಗೆ ವಹಿಸಲಾಗಿರುವ ಜವಾಬ್ದಾರಿಯನ್ನು ಸಮರ್ಪಕವಾಗಿ ನಿರ್ವಹಿಸಬೇಕು” ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.

“ಕಾರ್ಯಕ್ರಮಕ್ಕೆ ನುರಿತ ಕಲಾವಿದರು ಮತ್ತು ಉತ್ತಮ ಕಲಾ ತಂಡದ ವ್ಯವಸ್ಥೆ ಮಾಡಬೇಕು. ವಿವಿಧ ಯೋಜನೆಗಳ ಫಲಾನುಭವಿಗಳನ್ನು ಕರೆತರಲು ಅಗತ್ಯ ಸಾರಿಗೆ ವ್ಯವಸ್ಥೆಯನ್ನು ಮಾಡಬೇಕು. ಸಾರ್ವಜನಿಕರಿಗೆ ಕೂರಲು ಆಸನಗಳ ವ್ಯವಸ್ಥೆ, ಕುಡಿಯುವ ನೀರು, ಊಟದ ವ್ಯವಸ್ಥೆ ಮತ್ತು ತಾತ್ಕಾಲಿಕ ಶೌಚಾಲಯದ ವ್ಯವಸ್ಥೆಗೂ ಕ್ರಮ ಕೈಗೊಳ್ಳಿ. ದೊಡ್ಡ ಕಾರ್ಯಕ್ರಮ ಆಗಿರುವುದರಿಂದ ಯಾವುದೇ ಸಮಸ್ಯೆಗಳಾಗದಂತೆ ಅಧಿಕಾರಿಗಳು ನೋಡಿಕೊಳ್ಳಬೇಕು” ಎಂದರು.

“ಕೊಪ್ಪಳ ಜಿಲ್ಲೆಯ 7 ತಾಲ್ಲೂಕುಗಳು ಹಾಗೂ 5 ವಿಧಾನಸಭಾ ಕ್ಷೇತ್ರಗಳಿಂದ ಹೆಚ್ಚು ಜನರು ಪಾಲ್ಗೊಳ್ಳುವಂತಾಗಬೇಕು. ಪ್ರಸ್ತುತ ಜಿಲ್ಲೆಯಲ್ಲಿ ನಿರಂತರವಾಗಿ ಮಳೆಯಾಗುತ್ತಿದ್ದು, ಹಾನಿಯಾದ ಬೆಳೆಗಳಿಗೆ ತಕ್ಷಣ ಪರಿಹಾರ ನೀಡಲು ಆಯಾ ತಾಲ್ಲೂಕುಗಳ ತಹಶೀಲ್ದಾರ್ ಮತ್ತು ಸಂಬಂಧಪಟ್ಟ ಇಲಾಖಾಧಿಕಾರಿಗಳು ಕ್ರಮ ಕೈಗೊಳ್ಳಬೇಕು” ಎಂದು ಸಚಿವರು ಸೂಚನೆ ಕೊಟ್ಟರು.

ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರ ಹಾಗೂ ಯಲಬುರ್ಗಾ ಶಾಸಕ ಬಸವರಾಜ ರಾಯರಡ್ಡಿ ಮಾತನಾಡಿ, “ಸರಕಾರದ ಕಾರ್ಯಕ್ರಮ ಆಗಿರುವುದರಿಂದ ಜಿಲ್ಲಾಧಿಕಾರಿಗಳು ಕಾರ್ಯಕ್ರಮದ ಕುರಿತು ಏನೇನು ವ್ಯವಸ್ಥೆ ಮಾಡಲಾಗಿದೆ ಎಂಬ ಮಾಹಿತಿ ನೀಡಿ. ಎಷ್ಟು ಜನ ಬರುತ್ತಾರೆ. ಸಾರಿಗೆ, ಪೆಂಡಾಲ, ಆಹಾರದ ವ್ಯವಸ್ಥೆಯನ್ನು ಅಚ್ಚುಕಟ್ಟಾಗಿ ಮಾಡಬೇಕು. ಕಾರ್ಯಕ್ರಮಕ್ಕೆ ಜನರನ್ನು ಕರೆತರಲು ಅಧಿಕಾರಿಗಳಿಗೆ ಜವಾಬ್ದಾರಿ ನೀಡಿ ಗ್ರಾಮವಾರು ಕಮಿಟಿ ಮಾಡಿ ಜನರನ್ನು ಕಾರ್ಯಕ್ರಮಕ್ಕೆ ಕರೆತರುವ ವ್ಯವಸ್ಥೆ ಆಗಬೇಕು” ಎಂದು ಹೇಳಿದರು.

Previous articleಮಹಿಳಾ ವಿಶ್ವಕಪ್: ಟೀಮ್‌ ಇಂಡಿಯಾ ಡ್ರೆಸಿಂಗ್ ರೂಮ್‌ನಲ್ಲಿ ಶ್ರೇಯಾ ಘೋಷಾಲ್
Next articleಕಲಬುರಗಿಯಲ್ಲಿ ಸಿಎಂ ವೈಮಾನಿಕ ಸಮೀಕ್ಷೆ

LEAVE A REPLY

Please enter your comment!
Please enter your name here