ಮೈಸೂರು: ತಾಲ್ಲೂಕು ಮಟ್ಟದ ಅಧಿಕಾರಿಗಳು ಕೇಂದ್ರ ಸ್ಥಾನದಲ್ಲೇ ಇರಬೇಕು. ತಪ್ಪಿದವರ ವಿರುದ್ಧ ವರದಿ ನೀಡಲು ಡಿಸಿಗೆ ಸೂಚನೆ ನೀಡಿದ್ದೇನೆ. ಶಿಕ್ಷೆ ಪ್ರಮಾಣ ಹೆಚ್ಚಾಗಲು ಕ್ರಮ ವಹಿಸುವಂತೆ ಪೊಲೀಸ್ ಅಧಿಕಾರಿಗಳು, ಆಯುಕ್ತರು, ಐಜಿ ಅವರಿಗೆ ಸೂಚನೆ ನೀಡಿದ್ದೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನುಡಿದರು.
ಮೈಸೂರಿನ ತಪ್ಪ ನಿವಾಸದಲ್ಲಿ ಸೋಮವಾರ ನಡೆದ KDP ಸಭೆಯ ಕುರಿತು ಮಾಧ್ಯಮಗಳ ಜೊತೆ ಮಾತನಾಡಿ ಪೊಲೀಸ್ ಅಧಿಕಾರಿಗಳಿಗೆ ಗೊತ್ತಿಲ್ಲದೆ ಸಂಘಟಿತ ಅಪರಾಧಗಳು ನಡೆಯಲು ಸಾಧ್ಯವಿಲ್ಲ. ಆದ್ದರಿಂದ ಅಪರಾಧ ಪ್ರಮಾಣಗಳು ಹೆಚ್ಚಾದರೆ ಪೊಲೀಸ್ ಅಧಿಕಾರಿಗಳೇ ಹೊಣೆ ಆಗ್ತಾರೆ. ಮೈಸೂರು ಜಿಲ್ಲೆಯನ್ನು ಡ್ರಗ್ ಮುಕ್ತ ಜಿಲ್ಲೆ ಮಾಡಲು ಸೂಚನೆ ನೀಡಿದ್ದೇನೆ ಎಂದರು.
ಕೋಮುಗಲಭೆ ಪೀಡಿತ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಬ್ಬರು ಅಧಿಕಾರಿಗಳನ್ನು ಬದಲಾಯಿಸಿದ ತಕ್ಷಣ ಇಡೀ ಜಿಲ್ಲೆಯಲ್ಲಿ ಈಗ ಅನಾಗರಿಕ ಘಟನೆಗಳು ಬಂದ್ ಆಗಿವೆ. ಅಲ್ಲಿ ಇಬ್ಬರು ಅಧಿಕಾರಿಗಳಿಂದ ಇಷ್ಟೆಲ್ಲಾ ಸಾಧ್ಯ ಆಗುತ್ತೆ ಎನ್ನುವುದಾದರೆ ಉಳಿದ ಕಡೆಗಳಲ್ಲೂ ಸಾಧ್ಯವಿದೆ. ಪೊಲೀಸ್ ಅಧಿಕಾರಿಗಳು ಮನಸ್ಸು ಮಾಡಿ, ವೃತ್ತಿಪರವಾಗಿ ನಡೆದುಕೊಂಡರೆ ಸಾಕು ಎನ್ನುವ ಸೂಚನೆ ನೀಡಿದ್ದೇನೆ ಎಂದರು.
DC, AC, ತಹಶೀಲ್ದಾರ್ ನ್ಯಾಯಾಲಯಗಳಲ್ಲಿನ ಪ್ರಕರಣಗಳನ್ನು ಶೀರ್ಘ ಇತ್ಯರ್ಥ ಪಡಿಸಲು ಸೂಚನೆ ನೀಡಿದ್ದೇನೆ. ಮೈಸೂರು ಜಿಲ್ಲೆಯಲ್ಲಿ ಕಳೆದ ಎರಡೂ ವರ್ಷಗಳಲ್ಲಿ ಇದ್ದ 8 ಸಾವಿರ ಪ್ರಕರಣಗಳಲ್ಲಿ ಈಗಾಗಲೇ 7540 ರಷ್ಟು ಪ್ರಕಣಗಳು ಇತ್ಯರ್ಥ ಆಗಿವೆ. ಉಳಿದವೂ ಬೇಗ ಇತ್ಯರ್ಥ ಆಗಬೇಕು ಎನ್ನುವ ಸೂಚನೆ ನೀಡಿದ್ದೇನೆ ಎಂದರು.
ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳು ಹಾಸ್ಟೆಲ್ಗಳಿಗೆ ದಿಡೀರ್ ಭೇಟಿ ನೀಡಿ ಊಟ ಮತ್ತು ಹಾಸ್ಟೆಲ್ ಗುಣಮಟ್ಟ ಪರಿಶೀಲಿಸಬೇಕು ಎನ್ನುವ ಸೂಚನೆ ನೀಡಲಾಗಿದೆ ಎಂದರು.
ಚುನಾವಣೆ ವೇಳೆಯಲ್ಲೇ ಬಾಂಬ್ ಬ್ಲಾಸ್ಟ್ – ಕೇಂದ್ರವೇ ತನಿಖೆ ಮಾಡಲಿ: ಚುನಾವಣೆ ವೇಳೆಯ ಬಾಂಬ್ ಬ್ಲಾಸ್ಟ್ಗಳ ಬಗ್ಗೆ ಕೇಂದ್ರ ಸರ್ಕಾರವೇ ಹೇಳಬೇಕು. ಕೇಂದ್ರವೇ ತನಿಖೆ ನಡೆಸಿ ಉತ್ತರಿಸಲಿ. ನೆನ್ನೆಯ ದೆಹಲಿ ಬ್ಲಾಸ್ಟ್ ಇವತ್ತಿನ ಬಿಹಾರ ಚುನಾವಣೆಯ ಮೇಲೆ ಪ್ರಭಾವ ಬೀರಬಹುದು ಎಂದು ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದರು. ಬಾಂಬ್ ಬ್ಲಾಸ್ಟ್ಗಳು ಆಗಬಾರದು. ಅಮಾಯಕರ ಜೀವಹಾನಿ ಬೇಸರದ ಸಂಗತಿ.

























