ಚಾಮರಾಜನಗರ: ಜಿಲ್ಲೆಯ ಹನೂರು ತಾಲೂಕಿನ ಸುಳ್ಳಾಡಿ ಗ್ರಾಮದ ಕಿಚ್ಚುಗುತ್ತಿ ಮಾರಮ್ಮನ ದೇವಸ್ಥಾನದಲ್ಲಿ ನಡೆದ ವಿಷಪ್ರಸಾದ ದುರಂತ ಪ್ರಕರಣದಲ್ಲಿ ಬಂಧಿತರಾಗಿರುವ ಮೂವರು ಆರೋಪಿಗಳ ಜಾಮೀನು ಅರ್ಜಿಯನ್ನು ಜಿಲ್ಲಾ ನ್ಯಾಯಾಲಯ ತಿರಸ್ಕರಿಸಿದೆ.
ವಿಷಪ್ರಸಾದ ದುರಂತದಲ್ಲಿ 17 ಜನರು ಮೃತಪಟ್ಟ ಪ್ರಕರಣದಲ್ಲಿ ಕಳೆದ 7 ವರ್ಷಗಳಿಂದಲೂ ಜೈಲಿನಲ್ಲಿರುವ ಆರೋಪಿಗಳಾದ ಮಾದೇಶ, ಅಂಬಿಕಾ ಹಾಗೂ ದೊಡ್ಡಯ್ಯ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದರು.
ಜಾಮೀನು ಅರ್ಜಿಯನ್ನು ಪರಿಶೀಲಿಸಿದ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶರು ಜಾಮೀನು ಅರ್ಜಿಯನ್ನು ತಿರಸ್ಕರಿಸಿ ಆದೇಶ ಹೊರಡಿಸಿದ್ದಾರೆ.
ಇದನ್ನೂ ಓದಿ: ವಿಜಯನಗರ: ಐತಿಹಾಸಿಕ ಮೈಲಾರಲಿಂಗೇಶ್ವರನ ಈ ವರ್ಷದ ಕಾರ್ಣಿಕ
2018ರ ಡಿ. 14ರಂದು ಸುಳ್ಳಾಡಿ ಕಿಚ್ಚುಗುತ್ತಿ ಮಾರಮ್ಮನ ದೇವಸ್ಥಾನದಲ್ಲಿ ನಡೆದ ವಿಷ ಪ್ರಸಾದ ದುರಂತದಲ್ಲಿ 17 ಭಕ್ತರು ಮೃತಪಟ್ಟು 117ಕ್ಕೂ ಹೆಚ್ಚು ಮಂದಿ ಅಸ್ವಸ್ಥಗೊಂಡಿದ್ದರು. ದೇಗುಲದ ಆಡಳಿತ ಮಂಡಳಿಯ ಅಧಿಕಾರ ಹಿಡಿಯುವ ಸಲುವಾಗಿ ಒಂದು ಬಣದವರು ವಿಷಕಾರಿ ಸಂಚಿನಿಂದ ಘಟನೆ ನಡೆದಿತ್ತು.
ಸಾಲೂರು ಮಠದ ಅಂದಿನ ಕಿರಿಯ ಸ್ವಾಮೀಜಿ ಇಮ್ಮಡಿ ಮಹದೇವಸ್ವಾಮಿ, ಮಾದೇಶ, ಅಂಬಿಕಾ ಹಾಗೂ ದೊಡ್ಡಯ್ಯನನ್ನು ಪೊಲೀಸರು ಬಂಧಿಸಿ ಪ್ರಕರಣ ದಾಖಲಿಸಿ ದೋಷಾರೋಪಪಟ್ಟಿ ಸಲ್ಲಿಸಲಾಗಿತ್ತು.
ಗಂಭೀರ ಅನಾರೋಗ್ಯದ ಕಾರಣದಿಂದ ಪ್ರಮುಖ ಆರೋಪಿ ಇಮ್ಮಡಿ ಮಹದೇವಸ್ವಾಮಿಗೆ 2025ರ ನ. 12ರಂದು ಹೈಕೋರ್ಟ್ ಷರತ್ತುಬದ್ಧ ಜಾಮೀನು ಮಂಜೂರು ಮಾಡಿತ್ತು. ಅದರ ಬೆನ್ನಲ್ಲೇ ಉಳಿದ ಆರೋಪಿಗಳು ಜಾಮೀನಿಗಾಗಿ ಅರ್ಜಿ ಸಲ್ಲಿಸಿದ್ದರು. ಪ್ರಸ್ತುತ ಅರ್ಜಿಯನ್ನು ನ್ಯಾಯಾಲಯ ತಿರಸ್ಕೃತಗೊಳಿಸಿ ಆದೇಶ ಹೊರಡಿಸಿದ್ದಾರೆ.






















