ರಾಯಚೂರು: ಕರ್ನಾಟಕ ಲೋಕಸೇವಾ ಆಯೋಗ (ಕೆಪಿಎಸ್ಸಿ) ನೇಮಕಾತಿಗೆ ಸಂಬಂಧಿಸಿದ ಅಕ್ರಮದ ಆರೋಪಗಳ ಹಿನ್ನೆಲೆಯಲ್ಲಿ ಜಾರಿ ನಿರ್ದೇಶನಾಲಯ (ಇಡಿ) ಅಧಿಕಾರಿಗಳು ಕೆಪಿಎಸ್ಸಿ ಮಾಜಿ ಅಧ್ಯಕ್ಷರಾದ ಶಿವಶಂಕರಪ್ಪ ಸಾಹುಕಾರ ಸ್ವಗ್ರಾಮ ಜಿಲ್ಲೆಯ ದೇವದುರ್ಗ ತಾಲೂಕಿನ ಶಾವಂತಗೇರಾ ಮನೆ ಮೇಲೆ ದಾಳಿ ನಡೆಸಿ ದಾಖಲೆಗಳನ್ನು ಪರಿಶೀಲಿಸಿದರು.
ಕೆಪಿಎಸ್ಸಿ ಅಧ್ಯಕ್ಷರಾಗಿದ್ದ ಶಿವಶಂಕರಪ್ಪ ಸಾಹುಕಾರ ಅವರ ಅವಧಿಯಲ್ಲಿ ಕೆಪಿಎಸ್ಸಿ ಮೂಲಕ ಪಶುವೈದ್ಯಾಧಿಕಾರಿಯಾಗಿ ನೇಮಕಗೊಂಡಿದ್ದ ಹೇಮನಾಳ ಗ್ರಾಮದ ಸೂಗೂರೇಶ ಅವರ ಮನೆಯನ್ನು ಇಡಿ ಅಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆ.
ಶಿವಶಂಕರಪ್ಪ ಸಾಹುಕಾರ ಅವರ ಅಧಿಕಾರಾವಧಿಯಲ್ಲಿ ನಡೆದ ಅಕ್ರಮ ನೇಮಕಾತಿಗಳ ಕುರಿತು ತನಿಖೆ ನಡೆಸುತ್ತಿರುವ ಅಧಿಕಾರಿಗಳು, ಪಶುವೈದ್ಯಾಧಿಕಾರಿಗಳಾಗಿ ನೇಮಕಗೊಂಡ ಅಭ್ಯರ್ಥಿಗಳ ಬ್ಯಾಂಕ್ ಖಾತೆಗಳ ವಹಿವಾಟು, ಹಣಕಾಸಿನ ದಾಖಲೆಗಳು ಹಾಗೂ ಇತರ ಸಂಬಂಧಿತ ದಾಖಲೆಗಳನ್ನು ಪರಿಶೀಲಿನೆ ನಡೆಸಿದ್ದಾರೆ.
ಬೆಂಗಳೂರಿನಿಂದ ಆಗಮಿಸಿದ ಇಡಿ ಅಧಿಕಾರಿಗಳು ಅರೆಸೇನಾ ಸಿಬ್ಬಂದಿ ಭದ್ರತೆಯಲ್ಲಿ ಶಿವಶಂಕರಪ್ಪ ಸಾಹುಕಾರ ಅವರಿಗೆ ಸಂಬಂಧಿಸಿದ ಚರ ಮತ್ತು ಸ್ಥಿರಾಸ್ತಿಗಳ ವಿವರಗಳು, ಜಮೀನು ದಾಖಲೆಗಳು, ಬ್ಯಾಂಕ್ ಖಾತೆಗಳು ಹಾಗೂ ಕುಟುಂಬ ಸದಸ್ಯರಿಗೆ ಸಂಬಂಧಿಸಿದ ಆರ್ಥಿಕ ಮಾಹಿತಿಯನ್ನು ಸಹ ಸಂಗ್ರಹಿಸುತ್ತಿದ್ದಾರೆಂದು ತಿಳಿದುಬಂದಿದೆ.






















