ರಾಯಚೂರು ಜಿಲ್ಲೆಯಲ್ಲಿ ಶಾಕಿಂಗ್ ಘಟನೆ : ಯುವಕನಿಗೆ ಕೊಡಲಿಯಿಂದ ಹೊಡೆದು ಕೊಲೆ
ರಾಯಚೂರು: ರಾಯಚೂರು ತಾಲೂಕಿನ ಬುಳ್ಳಾಪುರ ಗ್ರಾಮದಲ್ಲಿ ಅನೈತಿಕ ಸಂಬಂಧದ ಹಿನ್ನೆಲೆ ಯುವಕನನ್ನು ಕೊಡಲಿಯಿಂದ ಹೊಡೆದು ಕೊಲೆ ಮಾಡಿದ ಘಟನೆ ಬೆಳಕಿಗೆ ಬಂದಿದೆ.
ಮೃತನನ್ನು ಪ್ರಾಣೇಶ್ (23) ಎಂದು ಗುರುತಿಸಲಾಗಿದೆ. ಆರೋಪಿಗಳಾಗಿ ದಿನ್ನಿ ಗ್ರಾಮದ ಪ್ರಸಾದ್, ಮಲ್ಲೇಶ್, ಮಲ್ಲಿಕಾರ್ಜುನ ಮತ್ತು ಅಮರೇಶ್ ಎಂಬವರ ಹೆಸರು ಕೇಳಿಬಂದಿದೆ.
ಮಾಹಿತಿಯ ಪ್ರಕಾರ, ಪ್ರಸಾದ್ ಅವರ ಪತ್ನಿ ಮತ್ತು ಪ್ರಾಣೇಶ್ ನಡುವೆ ಅನೈತಿಕ ಸಂಬಂಧವಿತ್ತು ಎಂಬ ಶಂಕೆಯಿಂದ ಈ ವೈಷಮ್ಯ ಉಂಟಾಗಿದೆ ಎನ್ನಲಾಗಿದೆ. ಈ ಹಿನ್ನೆಲೆ ಆರೋಪಿಗಳು ಕಳೆದ ಮೂರು ತಿಂಗಳಿನಿಂದ ಪ್ರಾಣೇಶ್ ಮೇಲೆ ಕಣ್ಣಿಟ್ಟಿದ್ದರು ಎಂದು ತಿಳಿದುಬಂದಿದೆ.
ಗ್ರಾಮದಲ್ಲಿ ಜಾಗದ ವಿಚಾರವಾಗಿ ನ್ಯಾಯ ಪಂಚಾಯಿತಿ ನಡೆಯುತ್ತಿದ್ದ ವೇಳೆ ಘಟನೆ ನಡೆದಿದೆ. ಈ ವೇಳೆ ಪ್ರಾಣೇಶ್ ಇದ್ದುದನ್ನು ಖಚಿತಪಡಿಸಿಕೊಂಡ ಆರೋಪಿಗಳು ಸ್ಥಳಕ್ಕೆ ಬಂದು ತಾಯಿ ಎದುರಲ್ಲೇ ಪ್ರಸಾದ್ ಕೊಡಲಿಯಿಂದ ತಲೆಗೆ ಹೊಡೆದಿದ್ದಾನೆ ಎನ್ನಲಾಗಿದೆ.
ಗಂಭೀರವಾಗಿ ಗಾಯಗೊಂಡ ಪ್ರಾಣೇಶ್ ಅವರನ್ನು ತಕ್ಷಣ ಆಸ್ಪತ್ರೆಗೆ ಸಾಗಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆ.
ಘಟನೆಯ ನಂತರ ಆರೋಪಿಗಳು ಸ್ಥಳದಿಂದ ಪರಾರಿಯಾಗಿದ್ದು, ಈ ಸಂಬಂಧ ಇಡಪನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ಆರೋಪಿಗಳ ಬಂಧನಕ್ಕಾಗಿ ಶೋಧ ಕಾರ್ಯಾಚರಣೆ ಆರಂಭಿಸಿದ್ದಾರೆ.
ಈ ಘಟನೆ ಗ್ರಾಮದಲ್ಲಿ ಆತಂಕ ಮತ್ತು ಉದ್ವಿಗ್ನತೆ ಉಂಟುಮಾಡಿದ್ದು, ಹೆಚ್ಚಿನ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದೆ.























