ರಾಮನಗರ : ಬೆಂಗಳೂರು ದಕ್ಷಿಣ ಜಿಲ್ಲೆಯ ರಾಮನಗರ ವ್ಯಾಪ್ತಿಯಲ್ಲಿ ಬೆಳಗ್ಗಿನ ಜಾವ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ನಾಲ್ವರು ಮೃತಪಟ್ಟಿದ್ದು, ಹಲವರು ಗಾಯಗೊಂಡ ಘಟನೆ ಆತಂಕ ಮೂಡಿಸಿದೆ.
ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇಯ ಚನ್ನಪಟ್ಟಣ ತಾಲೂಕಿನ ಸಂಕಲಗೆರೆ ಗ್ರಾಮದ ಬಳಿ ಈ ದುರ್ಘಟನೆ ಸಂಭವಿಸಿದೆ. ಕೇರಳದಿಂದ ಬೆಂಗಳೂರಿನತ್ತ ಬರುತ್ತಿದ್ದ ಖಾಸಗಿ ಬಸ್ ಏಕಾಏಕಿ ನಿಯಂತ್ರಣ ತಪ್ಪಿ ರಸ್ತೆ ಬದಿಯ ಪೆನ್ಸಿಂಗ್ಗೆ ಡಿಕ್ಕಿ ಹೊಡೆದಿದೆ.
ಪ್ರಾಥಮಿಕ ಮಾಹಿತಿ ಪ್ರಕಾರ, ಚಾಲಕನ ನಿದ್ರೆ ಮಂಪರು ಅಪಘಾತಕ್ಕೆ ಕಾರಣವಾಗಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ.
ನಾಲ್ವರು ಸ್ಥಳದಲ್ಲೇ ಸಾವು: ಅಪಘಾತದಲ್ಲಿ ನಾಲ್ವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೃತರನ್ನು ಕೇರಳದ ಕಾಜಿಕೋಟೆಯ ಮೊಹಮ್ಮದ್ ಫರಾನ್ (22), ಸುಲ್ಫಿ (45), ಹಾಗೂ ಬೆಂಗಳೂರಿನ ಕಲಾಸಿಪಾಳ್ಯದ ರಶೀದ್ (45) ಮತ್ತು ಆಡುಗೋಡಿಯ ಸಾಕೇರ್ ಎಂದು ಗುರುತಿಸಲಾಗಿದೆ.
ಗಾಯಗೊಂಡಿರುವ ಕೇರಳದ ಅಬ್ದುಲ್ ಹಾಗೂ ಅಲೇನ್ ಅವರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.






















