Home ನಮ್ಮ ಜಿಲ್ಲೆ ಶಿವಮೊಗ್ಗ ಶಿವಮೊಗ್ಗ: ಹಿಂದೂ ಮಹಾಸಭಾ ಗಣಪತಿ ಮೆರವಣಿಗೆ ಆರಂಭ

ಶಿವಮೊಗ್ಗ: ಹಿಂದೂ ಮಹಾಸಭಾ ಗಣಪತಿ ಮೆರವಣಿಗೆ ಆರಂಭ

0

ಶಿವಮೊಗ್ಗ ನಗರದ ಹಿಂದೂ ಮಹಾಸಭಾ ಗಣಪತಿ 2025ರ ವಿಸರ್ಜನಾ ಮೆರವಣಿಗೆ ಶನಿವಾರ ಆರಂಭವಾಗಿದೆ. ಶಿವಮೊಗ್ಗ ನಗರದಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡಲು ಅಗತ್ಯ ಪೊಲೀಸ್ ಬಂದೋಬಸ್ತ್‌ ಮಾಡಿಕೊಳ್ಳಲಾಗಿದೆ.

ಹಿಂದೂ ಮಹಾಸಭಾ ಗಣಪತಿ ವಿಸರ್ಜನಾ ಮೆರವಣಿಗೆಯು ಕೋಟೆ ರಸ್ತೆಯ ಭೀಮೇಶ್ವರ ದೇವಸ್ಥಾನದಿಂದ ಪ್ರಾರಂಭವಾಗಿದೆ. ನೂರಾರು ಜನರು ಬಂದು ಸೇರುತ್ತಿದ್ದಾರೆ. ಗಣೇಶನ ದರ್ಶನ ಪಡೆದು ಪುನೀತರಾಗುತ್ತಿದ್ದಾರೆ.

ಎನ್ ಪಿ ಎಂ ಮುಖ್ಯ ರಸ್ತೆ-ರಾಮಣ್ಣ ಶ್ರೇಷ್ಠಿ ಪಾರ್ಕ್-ಗಾಂಧಿ ಬಜಾರ್ ಮುಖ್ಯ ರಸ್ತೆ, ಎಸ್ ಎನ್ ಸರ್ಕಲ್ -ಎ.ಎ.ಸರ್ಕಲ್-ನೆಹರು ರಸ್ತೆ-ಗೋಪಿ ಸರ್ಕಲ್-ದುರ್ಗಿಗುಡಿ ಮಾರ್ಗವಾಗಿ ಮಹಾವೀರ ಸರ್ಕಲ್-ಡಿವಿಎಸ್ ಸರ್ಕಲ್ –ಕಾನ್ವೆಂಟ್ ರಸ್ತೆ-ಕೋಟೆ ರಸ್ತೆ ಮಾರ್ಗವಾಗಿ ಮೆರವಣಿಗೆ ಸಾಗಲಿದೆ.

ಅಂತಿಮವಾಗಿ ಭೀಮೇಶ್ವರ ದೇವಸ್ಥಾನದ ಹತ್ತಿರದ ತುಂಗಾ ನದಿಯಲ್ಲಿ ಗಣಪತಿ ವಿಸರ್ಜನೆ ಮಾಡಲಾಗುತ್ತದೆ. ಮೆರವಣಿಗೆ ಮಾರ್ಗದಲ್ಲಿ ಮತ್ತು ಮಾರ್ಗದ ಸುತ್ತಮುತ್ತ 100 ಮೀಟರ್ ಅಂತರದಲ್ಲಿ ಎಲ್ಲಾ ವಾಹನಗಳ ಸಂಚಾರ ಹಾಗೂ ನಿಲುಗಡೆಯನ್ನು ನಿಷೇಧಿಸಲಾಗಿದೆ.

ಹಿಂದೂ ಮಹಾಸಭಾ ಗಣಪತಿ ವಿಸರ್ಜನೆ ಹಿನ್ನಲೆಯಲ್ಲಿ ಶಿವಮೊಗ್ಗ ನಗರ ಕೇಸರಿ ಮಯವಾಗಿದೆ. ಹಿಂದೂ ಕೇಸರಿ 0ಅಲಂಕಾರ ಸಮಿತಿ ವತಿಯಿಂದ ನಗರದಲ್ಲಿ ವಿವಿಧ ಮಾದರಿ ಅಲಂಕಾರಗಳನ್ನು ಮಾಡಲಾಗಿದೆ.

ನಗರದ ಗಾಂಧಿ ಬಜಾರ್ ಪ್ರವೇಶ ದ್ವಾರ ಎಲ್ಲರ ಗಮನ ಸೆಳೆಯುತ್ತಿದೆ. ಸಮುದ್ರ ಮಂಥನದ ಕತೆ ಆಧಾರಿತವಾಗಿ ಮಹಾದ್ವಾರ ನಿರ್ಮಾಣ ಮಾಡಲಾಗಿದೆ.

ಶಿವಪ್ಪನಾಯಕ ಪ್ರತಿಮೆ ಮುಂಭಾಗ ಧರ್ಮಸ್ಥಳ ಮಾದರಿಯ ಮಹಾದ್ವಾರ ನಿರ್ಮಿಸಲಾಗಿದ್ದು, ಶ್ರೀ ಕ್ಷೇತ್ರ ಧರ್ಮಸ್ಥಳ ಮಹಾದ್ವಾರ ಎಂದು ನಾಮಕರಣ ಮಾಡಲಾಗಿದೆ.

ನೆಹರೂ ರಸ್ತೆಯ ಪ್ರವೇಶ ದ್ವಾರಕ್ಕೆ ಆಪರೇಷನ್ ಸಿಂಧೂರ ಎಂದು ನಾಮಕರಣ ಮಾಡಲಾಗಿದೆ. ಬಿಎಚ್ ರಸ್ತೆಯನ್ನು ಕೇಸರಿ ಧ್ವಜಗಳು, ವಿದ್ಯುತ್ ದೀಪಗಳಿಂದ ಅಲಂಕಾರ ಮಾಡಲಾಗಿದೆ.

ಹಿಂದೂ ಮಹಾಸಭಾ ಗಣಪತಿ ವಿಸರ್ಜನಾ ಮೆರವಣಿಗೆ ಹಿನ್ನೆಲೆಯಲ್ಲಿ ಸಂಚಾರ ವ್ಯವಸ್ಥೆ ಸುಗಮಗೊಳಿಸುವ ನಿಟ್ಟಿನಲ್ಲಿ ವಾಹನಗಳ ಸಂಚಾರ ನಿಷೇಧ, ನಿಲುಗಡೆ ಹಾಗೂ ವಾಹನಗಳ ಮಾರ್ಗ ಬದಲಾವಣೆ ಮಾಡಿ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಅಧಿಸೂಚನೆ ಹೊರಡಿಸಿದ್ದಾರೆ.

ಸಾರ್ವಜನಿಕ ಹಿತದೃಷ್ಟಿಯಿಂದ ಹಾಗೂ ಸಂಚಾರ ವ್ಯವಸ್ಥೆ ಸುಗಮಗೊಳಿಸುವ ನಿಟ್ಟಿನಲ್ಲಿ ಮೋಟಾರು ವಾಹನ ಕಾಯ್ದೆ 1988 ಕಲಂ 115 & 117ರ ಅನ್ವಯ ಬೆಳಿಗ್ಗೆ 6 ರಿಂದ ರಾತ್ರಿ 12 ಗಂಟೆವರೆಗೆ ವಾಹನ ಸಂಚಾರ ನಿಷೇಧ, ನಿಲುಗಡೆ ಮತ್ತು ಮಾರ್ಗ ಬದಲಾವಣೆ ಮಾಡಲಾಗಿದೆ.

ಶಿವಮೊಗ್ಗ ಪೊಲೀಸ್ ವರಿಷ್ಠಾಧಿಕಾರಿ ಜಿ.ಕೆ.ಮಿಥುನ್ ಕುಮಾರ್ ನೇತೃತ್ವದಲ್ಲಿ ನಗರದಲ್ಲಿ ಭದ್ರತೆ ಕೈಗೊಳ್ಳಲಾಗಿದೆ. ಗಲಾಟೆ ಮಾಡುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ. ಹೆಚ್ಚುವರಿ ಪೊಲೀಸ್ ಭದ್ರತೆ ಮತ್ತು ಸಿಸಿಟಿವಿ ಕಣ್ಗಾವಲುಗಳೊಂದಿಗೆ ನಗರದಲ್ಲಿ ಅಗತ್ಯ ಭದ್ರತಾ ವ್ಯವಸ್ಥೆ ಕೈಗೊಳ್ಳಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.

NO COMMENTS

LEAVE A REPLY

Please enter your comment!
Please enter your name here

Exit mobile version