ಶಿವಮೊಗ್ಗ: ಶಿಕ್ಷಕರಾಗಬೇಕೆಂದು ಕನಸು ಹೊತ್ತು ಕುಳಿತವರಿಗೆ ರಾಜ್ಯ ಸರ್ಕಾರ ಭಾರೀ ಖುಷಿ ಸುದ್ದಿಯೊಂದನ್ನು ನೀಡಿದೆ. ಶಿಕ್ಷಣ ಇಲಾಖೆಯಲ್ಲಿ ಖಾಲಿ ಇರುವ ಶಿಕ್ಷಕರ ಹುದ್ದೆಗಳನ್ನು ಭರ್ತಿ ಮಾಡಲು ಸರಕಾರ ಮುಂದಾಗಿದೆ.
ಒಳಮೀಸಲಾತಿ ಪ್ರಕ್ರಿಯೆಯು ಮುಗಿದಿದ್ದು, ರಾಜ್ಯ ಸರ್ಕಾರ ಐತಿಹಾಸಿಕ ನಿರ್ಧಾರ ತೆಗೆದುಕೊಂಡಿದೆ. ಶೀಘ್ರದಲ್ಲೇ ಶಿಕ್ಷಣ ಇಲಾಖೆಯಲ್ಲಿ ಖಾಲಿ ಇರುವ ಶಿಕ್ಷಕರ ಹುದ್ದೆಗಳನ್ನು ಭರ್ತಿ ಮಾಡಲಾಗುವುದು ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿರುವ ಅವರು, ಶಿಕ್ಷಕರ ನೇಮಕಾತಿ ಕುರಿತು ತಯಾರಿ ನಡೆಸಲು ಈಗಾಗಲೇ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ. ಬಹು ವರ್ಷಗಳಿಂದ ಭರ್ತಿಯಾಗದೇ ಖಾಲಿ ಇರುವ ಸುಮಾರು 5,800 ಅನುದಾನಿತ ಶಾಲೆಗಳಲ್ಲಿ ನೇಮಕಾತಿ ಪ್ರಕ್ರಿಯೆ ಆರಂಭಿಸುವ ಕುರಿತು ನಿರ್ಧಾರ ಕೈಗೊಳ್ಳಲಾಗುತ್ತಿದೆ ಎಂದರು.






















