ದಾಂಡೇಲಿ: ಉತ್ತರ ಕನ್ನಡ ಜಿಲ್ಲೆಯ ದಾಂಡೇಲಿ ಹಾಗೂ ಹಳಿಯಾಳ ಭಾಗದಲ್ಲಿ ಪ್ರವಾಸೋದ್ಯಮ ಅಭಿವೃದ್ಧಿಗೆ ಸರ್ಕಾರದಿಂದ ಮತ್ತಷ್ಟು ಉತ್ತೇಜನ ನೀಡಲಾಗುತ್ತಿದೆ. ರಾಜ್ಯದ ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ಉಡುಪಿ ಮತ್ತು ದಕ್ಷಿಣ ಕನ್ನಡ ಪ್ರದೇಶಗಳು ಪ್ರವಾಸೋದ್ಯಮ ಕ್ಷೇತ್ರಕ್ಕೆ ಪ್ರಮುಖ ಬಲ ತುಂಬುತ್ತಿರುವುದಾಗಿ ಕಾನೂನು, ನ್ಯಾಯ, ಮಾನವ ಹಕ್ಕುಗಳು ಹಾಗೂ ಪ್ರವಾಸೋದ್ಯಮ ಸಚಿವ ಹೆಚ್.ಕೆ. ಪಾಟೀಲ್ ತಿಳಿಸಿದ್ದಾರೆ.
ಹಳಿಯಾಳದಲ್ಲಿ ಲೋಕೋಪಯೋಗಿ ಮತ್ತು ಪ್ರವಾಸೋದ್ಯಮ ಇಲಾಖೆಗಳ ಸಹಯೋಗದಲ್ಲಿ ಸುಮಾರು ₹7.98 ಕೋಟಿ ವೆಚ್ಚದಲ್ಲಿ ನಿರ್ಮಿಸಲಾದ ಸಮಾವೇಶ ಕೇಂದ್ರ ಕಟ್ಟಡವನ್ನು ಭಾನುವಾರ ಉದ್ಘಾಟಿಸಿ ಮಾತನಾಡಿದ ಅವರು, ಕರಾವಳಿ ಭಾಗದಲ್ಲಿ ಪ್ರವಾಸೋದ್ಯಮಕ್ಕೆ ಅಪಾರ ಅವಕಾಶಗಳಿದ್ದು, ಹೆಚ್ಚಿನ ಪ್ರಚಾರ ಮತ್ತು ಯೋಜಿತ ಅಭಿವೃದ್ಧಿಯ ಅಗತ್ಯವಿದೆ ಎಂದರು.
ಪ್ರವಾಸೋದ್ಯಮ – ಆದಾಯ ಮತ್ತು ಸಂಸ್ಕೃತಿಯ ಸೇತುವೆ : ಪ್ರವಾಸೋದ್ಯಮವು ರಾಜ್ಯಕ್ಕೆ ಆರ್ಥಿಕವಾಗಿ ಲಾಭ ತರುವುದಷ್ಟೇ ಅಲ್ಲ, ಕಲೆ, ಸಂಸ್ಕೃತಿ ಹಾಗೂ ಇತಿಹಾಸದ ಅರಿವು ಮೂಡಿಸುವ ಮಹತ್ವದ ಕ್ಷೇತ್ರವಾಗಿದೆ. ಈ ಹಿನ್ನೆಲೆಯಲ್ಲಿ ಸರ್ಕಾರವು ಈ ಬಾರಿಯ ಬಜೆಟ್ನಲ್ಲಿ ಪ್ರಮುಖ ಪ್ರವಾಸಿ ತಾಣಗಳಲ್ಲಿ 100 ಸುಸಜ್ಜಿತ ಡಾರ್ಮಿಟರಿಗಳನ್ನು ನಿರ್ಮಿಸಲು ಅನುದಾನ ಮೀಸಲಿಟ್ಟಿದೆ ಎಂದು ತಿಳಿಸಿದರು.
ಉತ್ತರ ಕನ್ನಡ ಜಿಲ್ಲೆಗೆ ವಿಶೇಷ ಯೋಜನೆಗಳು : ಜಿಲ್ಲೆಯ ಪ್ರವಾಸೋದ್ಯಮ ಅಭಿವೃದ್ಧಿಗೆ ಅಧ್ಯಯನ ಸಮಿತಿಯ ವರದಿಯನ್ನು ಸರ್ಕಾರ ಒಪ್ಪಿಕೊಂಡಿದ್ದು, ಮುಂದಿನ ಮೂರು ವರ್ಷಗಳಲ್ಲಿ ಹಂತ ಹಂತವಾಗಿ ಅನುಷ್ಠಾನಗೊಳಿಸಲು ಯೋಜನೆ ರೂಪಿಸಲಾಗಿದೆ. ಹಳಿಯಾಳ ಮತ್ತು ದಾಂಡೇಲಿ ಭಾಗದಲ್ಲಿ ಗಾರ್ಡನ್ ನಿರ್ಮಾಣಕ್ಕೆ ₹1 ಕೋಟಿ ಮೀಸಲು. ಸಂಚಾರಿ ರಾಕ್ ಪ್ರವಾಸೋದ್ಯಮ ಅಭಿವೃದ್ಧಿಗೆ ₹50 ಲಕ್ಷ. ಕ್ಯಾಸಲ್ ರಾಕ್ ನೇಚರ್ ಕ್ಯಾಂಪ್ ಅಭಿವೃದ್ಧಿಗೆ ₹50 ಲಕ್ಷ ಅನುದಾನ ಹಾಗೂ ಮುರುಡೇಶ್ವರ, ಗೋಕರ್ಣ ಮತ್ತು ಕಾರವಾರ ಕಡಲತೀರಗಳಲ್ಲಿ ಜಲಸಾಹಸ ಕ್ರೀಡೆಗಳನ್ನು ಆರಂಭಿಸಲು ಟೆಂಡರ್ಗಳನ್ನು ಆಹ್ವಾನಿಸಲಾಗಿದ್ದು, ಅರಣ್ಯ ಪ್ರದೇಶಗಳಲ್ಲಿಯೂ ಅಭಿವೃದ್ಧಿ ಕಾರ್ಯಗಳು ನಡೆಯಲಿವೆ.
ಉದ್ಯೋಗ ಸೃಷ್ಟಿಗೆ ಪ್ರವಾಸೋದ್ಯಮವೇ ಕೀಲಿಕೈ : ಶಾಸಕ ಆರ್.ವಿ. ದೇಶಪಾಂಡೆ ಮಾತನಾಡಿ, ಪ್ರವಾಸೋದ್ಯಮ ಮತ್ತು ಕೈಗಾರಿಕೆಗಳ ಅಭಿವೃದ್ಧಿ ಮೂಲಕ ಉದ್ಯೋಗಾವಕಾಶಗಳು ಹೆಚ್ಚುತ್ತವೆ. ನಿರುದ್ಯೋಗ ಮತ್ತು ಬೆಲೆ ಏರಿಕೆ ಸಮಸ್ಯೆಗೆ ಈ ಕ್ಷೇತ್ರಗಳು ಪರಿಣಾಮಕಾರಿ ಪರಿಹಾರ ಒದಗಿಸಬಹುದು ಎಂದು ಹೇಳಿದರು. ಹೊಸ ಸಮಾವೇಶ ಕೇಂದ್ರವು ಸಾಂಸ್ಕೃತಿಕ ಹಾಗೂ ಶೈಕ್ಷಣಿಕ ಕಾರ್ಯಕ್ರಮಗಳಿಗೆ ವೇದಿಕೆಯಾಗಬೇಕು ಎಂದು ಸಲಹೆ ನೀಡಿದರು.
ಸಮಗ್ರ ಸೌಲಭ್ಯಗಳ ಸಮಾವೇಶ ಕೇಂದ್ರ : ಜಿಲ್ಲಾಧಿಕಾರಿ ಕೆ. ಲಕ್ಷ್ಮೀ ಪ್ರಿಯಾ ಮಾಹಿತಿ ನೀಡಿ, ಸುಮಾರು ₹8 ಕೋಟಿ ವೆಚ್ಚದಲ್ಲಿ ಎರಡು ಹಂತಗಳಲ್ಲಿ ನಿರ್ಮಿಸಲಾದ ಈ ಸಮಾವೇಶ ಕೇಂದ್ರವು ಆಧುನಿಕ ಸೌಲಭ್ಯಗಳನ್ನು ಹೊಂದಿದ್ದು, ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಕರೆ ನೀಡಿದರು.
ಕಾರ್ಯಕ್ರಮದ ಬಳಿಕ ಸಾಂಸ್ಕೃತಿಕ ಕಾರ್ಯಕ್ರಮಗಳು ಹಾಗೂ ಮ್ಯಾಜಿಕ್ ಶೋ ಆಯೋಜಿಸಲಾಯಿತು. ಜೊತೆಗೆ, ಕೆಲವು ಶಾಲೆಗಳಿಗೆ ಸ್ಮಾರ್ಟ್ ಕ್ಲಾಸ್ ರೂಮ್ಗಳನ್ನು ಹಸ್ತಾಂತರಿಸಲಾಯಿತು.






















