ಕಾರವಾರ: ಕರಾವಳಿ ಭಾಗದ ಅಭಿವೃದ್ಧಿಗೆ ಮುನ್ನುಡಿ ಬರೆಯುವ ನಿಟ್ಟಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಭಾನುವಾರ ಉತ್ತರ ಕನ್ನಡ ಜಿಲ್ಲೆಗೆ ಆಗಮಿಸಿದ್ದು, ಬಹುನಿರೀಕ್ಷಿತ ಮಂಜಗುಣಿ – ಗಂಗಾವಳಿ ಸೇತುವೆಯನ್ನು ಲೋಕಾರ್ಪಣೆ ಮಾಡಿದ್ದಾರೆ.
ಹುಬ್ಬಳ್ಳಿಯಿಂದ ವಿಶೇಷ ಹೆಲಿಕಾಪ್ಟರ್ ಮೂಲಕ ಅಂಕೋಲಾ ತಾಲೂಕಿನ ಮಂಜಗುಣಿಗೆ ಬಂದಿಳಿದ ಸಿಎಂ ಹಾಗೂ ಡಿಸಿಎಂ ಅವರನ್ನು ಜಿಲ್ಲೆಯ ಜನಪ್ರತಿನಿಧಿಗಳು ಅದ್ದೂರಿಯಾಗಿ ಬರಮಾಡಿಕೊಂಡರು. ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳ ವೈದ್ಯ, ಕಾರವಾರ ಶಾಸಕ ಸತೀಶ್ ಸೈಲ್, ಕುಮಟಾ ಶಾಸಕ ದಿನಕರ್ ಶೆಟ್ಟಿ ಹಾಗೂ ಮಾಜಿ ಶಾಸಕಿ ಶಾರದಾ ಶೆಟ್ಟಿ ಅವರು ನಾಯಕರಿಗೆ ಆತ್ಮೀಯ ಸ್ವಾಗತ ಕೋರಿದರು.
ಇದನ್ನೂ ಓದಿ: ಗೆಲುವಿನ ಓಟ ಮುಂದುವರಿಸುವ ವಿಶ್ವಾಸದಲ್ಲಿ ಭಾರತ
ಅಂಕೋಲಾ ತಾಲೂಕಿನ ಮಂಜಗುಣಿ ಗ್ರಾಮದಿಂದ ಕುಮಟಾ ತಾಲೂಕಿನ ಗಂಗಾವಳಿ ಗ್ರಾಮಗಳಿಗೆ ನೇರ ಸಂಪರ್ಕ ಕಲ್ಪಿಸುವ ಉದ್ದೇಶದಿಂದ ಗಂಗಾವಳಿ ನದಿಗೆ ಅಡ್ಡಲಾಗಿ ಈ ಬೃಹತ್ ಸೇತುವೆಯನ್ನು ನಿರ್ಮಿಸಲಾಗಿದೆ. ಬರೋಬ್ಬರಿ 34.21 ಕೋಟಿ ರೂಪಾಯಿ ವೆಚ್ಚದಲ್ಲಿ ತಲೆ ಎತ್ತಿರುವ ಈ ಸೇತುವೆಯನ್ನು ಉದ್ಘಾಟಿಸುವ ಮೂಲಕ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಈ ಭಾಗದ ಜನರ ದಶಕಗಳ ಕನಸನ್ನು ನನಸು ಮಾಡಿದ್ದಾರೆ.
ಈ ನೂತನ ಸೇತುವೆಯಿಂದಾಗಿ ಅಂಕೋಲಾ ಮತ್ತು ಕುಮಟಾ ತಾಲೂಕುಗಳ ನಡುವಿನ ಸಂಪರ್ಕ ಮತ್ತಷ್ಟು ಸುಗಮವಾಗಲಿದ್ದು, ಸ್ಥಳೀಯರ ಆರ್ಥಿಕ ಹಾಗೂ ಸಾಮಾಜಿಕ ಬೆಳವಣಿಗೆಗೆ ಇದು ಪ್ರಮುಖ ಕೊಡುಗೆಯಾಗಲಿದೆ.





















