ಕಾರವಾರ: ಬೆಲೆಕೇರಿ ಅದಿರು ನಾಪತ್ತೆ ಪ್ರಕರಣದಲ್ಲಿ ಅಕ್ರಮ ಹಣ ವರ್ಗಾವಣೆ ವಿಚಾರಕ್ಕೆ ಸಂಬಂಧಿಸಿದಂತೆ ಶಾಸಕ ಸತೀಶ್ ಸೈಲ್ ಅವರನ್ನು ಜಾರಿ ನಿರ್ದೇಶನಾಲಯದ (ಇಡಿ) ಅಧಿಕಾರಿಗಳು ಬಂಧಿಸಿದ್ದಾರೆ.
ಬೇಲೆಕೇರಿ ಅದಿರು ನಾಪತ್ತೆ ಪ್ರಕರಣದಲ್ಲಿ ಈಗಾಗಲೇ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಿಂದ ಶಿಕ್ಷೆಗೆ ಗುರಿಯಾಗಿದ್ದ ಸೈಲ್, ಇದೀಗ ಇಡಿ ದಾಳಿಯ ನಂತರ ಬಂಧನಕ್ಕೊಳಗಾಗಿದ್ದು, ರಾಜಕೀಯ ವಲಯದಲ್ಲಿ ತೀವ್ರ ಸಂಚಲನ ಮೂಡಿಸಿದೆ.
ಕಳೆದ ಆಗಸ್ಟ್ 13 ಮತ್ತು 14ರಂದು ಇಡಿ ಅಧಿಕಾರಿಗಳು ಶಾಸಕ ಸೈಲ್ ಅವರ ಮನೆ ಮತ್ತು ಕಚೇರಿಗಳ ಮೇಲೆ ದಾಳಿ ನಡೆಸಿ, ಪ್ರಮುಖ ದಾಖಲೆಗಳನ್ನು ಮತ್ತು ಸಂಪತ್ತನ್ನು ವಶಪಡಿಸಿಕೊಂಡಿದ್ದರು. ಈ ದಾಳಿಯ ವೇಳೆ ಸೈಲ್ ಅವರು ಅನಾರೋಗ್ಯದಿಂದ ಚಿಕಿತ್ಸೆ ಪಡೆಯಲು ದೆಹಲಿಗೆ ತೆರಳಿದ್ದರು ಎನ್ನಲಾಗಿದೆ.
ದಾಳಿಯಲ್ಲಿ ಪತ್ತೆಯಾದ ಅಪಾರ ಸಂಪತ್ತು: ಇಡಿ ಅಧಿಕಾರಿಗಳು ಕಾರವಾರದಲ್ಲಿ ಎರಡು ದಿನಗಳ ಶೋಧ ಕಾರ್ಯಾಚರಣೆ ನಡೆಸಿದ್ದರು. ಈ ವೇಳೆ ಮನೆಯಲ್ಲಿ 1.68 ಕೋಟಿ ರೂ. ನಗದು ಮತ್ತು 6.75 ಕೆಜಿ ಚಿನ್ನಾಭರಣಗಳನ್ನು ವಶಕ್ಕೆ ಪಡೆಯಲಾದ ಬಗ್ಗೆ ಇಡಿ ಸಾಮಾಜಿಕ ಜಾಲತಾಣದಲ್ಲಿ ಪ್ರಕಟಿಸಿತ್ತು. ಅಲ್ಲದೆ ಶಾಸಕ ಸೈಲ್ ಅವರ ಬ್ಯಾಂಕ್ ಖಾತೆಗಳಲ್ಲಿದ್ದ 14.13 ಕೋಟಿ ರೂ. ಹಣವನ್ನು ತಡೆಹಿಡಿಯಲಾಗಿತ್ತು ಎನ್ನಲಾಗಿದೆ.
ಪ್ರಕರಣದ ಹಿನ್ನೆಲೆ: ಸತೀಶ್ ಸೈಲ್ ಅವರು ಮಲ್ಲಿಕಾರ್ಜುನ ಶಿಪ್ಪಿಂಗ್ ಕಂಪನಿಯ ಮಾಲೀಕರಾಗಿದ್ದು, ಅಕ್ರಮವಾಗಿ ಅದಿರು ಸಾಗಾಟ ಮಾಡಿದ ಆರೋಪವನ್ನು ಎದುರಿಸುತ್ತಿದ್ದರು. ಈ ಪ್ರಕರಣದಲ್ಲಿ ನಿವೃತ್ತ ಲೋಕಾಯುಕ್ತ ನ್ಯಾ. ಸಂತೋಷ್ ಹೆಗ್ಡೆ ಅವರ ತಂಡ ಸೈಲ್ ವಿರುದ್ಧ ದೂರು ದಾಖಲಿಸಿತ್ತು. ಈ ಪ್ರಕರಣದಲ್ಲಿ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಸೈಲ್ ಅವರಿಗೆ ಏಳು ವರ್ಷಗಳ ಜೈಲು ಶಿಕ್ಷೆ ಮತ್ತು ಸುಮಾರು 44 ಕೋಟಿ ರೂ. ದಂಡ ವಿಧಿಸಿತ್ತು. ಈ ತೀರ್ಪನ್ನು ಪ್ರಶ್ನಿಸಿ ಸೈಲ್ ಹೈಕೋರ್ಟ್ನಿಂದ ಜಾಮೀನು ಪಡೆದಿದ್ದರು.
ಇದೀಗ, ಇದೇ ಪ್ರಕರಣಕ್ಕೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಆರೋಪದ ಮೇಲೆ ಇಡಿ ಅಧಿಕಾರಿಗಳು ತನಿಖೆ ತೀವ್ರಗೊಳಿಸಿದ್ದು, ಸೋಮವಾರ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಿದ್ದರು. ಮಂಗಳವಾರ ವಿಚಾರಣೆ ನಡೆಸಿದ ನಂತರ, ಸೈಲ್ ಅವರನ್ನು ಬಂಧಿಸಿ ಬೆಂಗಳೂರಿಗೆ ಕರೆದೊಯ್ಯಲಾಗಿದೆ. ಸದ್ಯ, ಕೆ.ಎಸ್.ಎಂ.ಸಿ ಅಧ್ಯಕ್ಷರಾಗಿರುವ ಸೈಲ್ ಅವರ ಬಂಧನ, ರಾಜಕೀಯ ವಲಯದಲ್ಲಿ ಮತ್ತಷ್ಟು ಬೆಳವಣಿಗೆಗಳಿಗೆ ಕಾರಣವಾಗುವ ಸಾಧ್ಯತೆಯಿದೆ.