ದಾಂಡೇಲಿ: ದಾಂಡೇಲಿ ಸಮೀಪದ ಹಳಿಯಾಳ ತಾಲ್ಲೂಕಿನ ಮುರ್ಕವಾಡ ಗ್ರಾಮದಲ್ಲಿ ಬಹುಗ್ರಾಮ ಕುಡಿಯುವ ನೀರಿನ ಯೋಜನೆಗೆ ಸಂಬಂಧಿಸಿದ ಸಮಸ್ಯೆಗೆ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಅಧಿಕಾರಿಗಳು ತ್ವರಿತವಾಗಿ ಸ್ಪಂದಿಸಿದ್ದಾರೆ.
12 ವರ್ಷಗಳಿಗೊಮ್ಮೆ ನಡೆಯುವ ಶ್ರೀ ಲಕ್ಷ್ಮೀ ದೇವಿ ಜಾತ್ರೆಯ ಹಿನ್ನೆಲೆಯಲ್ಲಿ ನೀರಿನ ಕೊರತೆ ಉಂಟಾಗದಂತೆ ಶಾಸಕ ಆರ್.ವಿ. ದೇಶಪಾಂಡೆ ಸೂಚನೆಯಂತೆ ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳಲಾಗಿತ್ತು. ಪೈಪ್ಲೈನ್ ಹಾನಿಯಿಂದ 20 ಮನೆಗಳಿಗೆ ಮಾತ್ರ ನೀರು ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಿದ್ದು, ಉಳಿದ ಮನೆಗಳಿಗೆ ಸಮಸ್ಯೆ ಆಗಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಇದನ್ನೂ ಓದಿ: ಕರಾವಳಿ ಜಿಲ್ಲೆಗಳ ಅಭಿವೃದ್ಧಿಗೆ ಬಜೆಟ್ನಲ್ಲಿ ವಿಶೇಷ ಅನುದಾನಕ್ಕೆ ಆಗ್ರಹ
ಪೀಡಿತ ಪ್ರದೇಶಗಳಿಗೆ ಐದು ಟ್ಯಾಂಕರ್ಗಳ ಮೂಲಕ ಪರ್ಯಾಯ ನೀರಿನ ವ್ಯವಸ್ಥೆ ಮಾಡಲಾಗಿದೆ. ಜಾತ್ರೆ ಮುಗಿದ ಬಳಿಕ ಹಾನಿಗೊಳಗಾದ ಪೈಪ್ಲೈನ್ ದುರಸ್ತಿ ಮಾಡಲಾಗುವುದು. ನೀರಿನ ಗುಣಮಟ್ಟ ಪರೀಕ್ಷೆಯಲ್ಲಿ ನೀರು ಕುಡಿಯಲು ಯೋಗ್ಯವಾಗಿದೆ ಎಂದು ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಉಪ ವಿಭಾಗ, ಹಳಿಯಾಳ ತಿಳಿಸಿದ್ದಾರೆ.






















