ಉತ್ತರ ಕನ್ನಡ(ದಾಂಡೇಲಿ): ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ನಡೆದ ರಾಜ್ಯ ಮಟ್ಟದ ಲೋಕೋಪಯೋಗಿ ಗುತ್ತಿಗೆದಾರರ ಸಮಾವೇಶದಲ್ಲಿ ದಾಂಡೇಲಿಯ ಕೆನರಾ ಲೋಕೋಪಯೋಗಿ ಗುತ್ತಿಗೆದಾರರ ಸಂಘದ ಸದಸ್ಯರು ಬೇಡಿಕೆ ಫಲಕಗಳನ್ನು ಹಿಡಿದು ಪ್ರತಿಭಟನೆ ನಡೆಸಿದರು.
ಉತ್ತರ ಕನ್ನಡ ಜಿಲ್ಲೆಯ ವಿವಿಧ ಸರ್ಕಾರಿ ಇಲಾಖೆಗಳಲ್ಲಿ ಕಾಮಗಾರಿ ನಡೆಸಿದ ಗುತ್ತಿಗೆದಾರರಿಗೆ ಪಾವತಿಯಾಗದೆ ಉಳಿದಿರುವ ಬಿಲ್ಗಳನ್ನು ತಕ್ಷಣ ಬಿಡುಗಡೆ ಮಾಡುವಂತೆ ಆಗ್ರಹಿಸಿದರು. ಈ ಸಂದರ್ಭದಲ್ಲಿ ರಾಜ್ಯದ ವಿವಿದೆಡೆಗಳಿಂದ ಆಗಮಿಸಿದ್ದ ನೂರಾರು ಗುತ್ತಿಗೆದಾರರ ಬೆಂಬಲ ವ್ಯಕ್ತಪಡಿಸಿ ಸರ್ಕಾರದ ವಿರುದ್ಧ ಅಸಮಧಾನ ವ್ಯಕ್ತಪಡಿಸಿದರು.
ಕೆನರಾ ಗುತ್ತಿಗೆದಾರರ ಸಂಘದ ಅಧ್ಯಕ್ಷ ಎನ್.ಶಶಿಧರನ್, ಕಾರ್ಯದರ್ಶಿ ಆರ್.ಸಿ. ದೇವಾನಂದ, ಸುಧಾಕರ ರೆಡ್ಡಿ ಮಾತನಾಡಿ, ಹಲವು ವರ್ಷಗಳಿಂದ ವಿವಿಧ ಇಲಾಖೆಗಳ ಕಾಮಗಾರಿಗಳಿಗೆ ಸಂಬಂಧಿಸಿದಂತೆ ನಮ್ಮ ಜಿಲ್ಲೆಯಲ್ಲಿ ಕೋಟ್ಯಾಂತರ ರೂಪಾಯಿ ಬಾಕಿ ಬಿಲ್ಗಳು ಪಾವತಿಯಾಗದೇ ಉಳಿದಿದ್ದು, ಇದರಿಂದ ಗುತ್ತಿಗೆದಾರರು ತೀವ್ರ ಆರ್ಥಿಕ ಸಂಕಷ್ಟ ಎದುರಿಸುತ್ತಿದ್ದಾರೆ ಎಂದು ಆರೋಪಿಸಿದರು.
ಗುತ್ತಿಗೆದಾರರು ಬ್ಯಾಂಕ್ ಸಾಲ ಮಾಡಿಕೊಂಡು ಕಾಮಗಾರಿಗಳನ್ನು ಮಾಡಿದ್ದು ಬ್ಯಾಂಕಿನ ಬಡ್ಡಿ ತುಂಬಲಾಗದೇ ತೀವ್ರ ಆರ್ಥಿಕ ತೊಂದರೆಯಲ್ಲಿದ್ದಾರೆ. ಆದ್ದರಿಂದ ಕೂಡಲೇ ಬಾಕಿ ಇರುವ ಗುತ್ತಿಗೆದಾರರ ಬಿಲ್ ಹಣ ಪಾವತಿಸುವಂತೆ ಸರ್ಕಾರವನ್ನು ಒತ್ತಾಯಿಸಿದ್ದಾರೆ. ಕೆನರಾ ಗುತ್ತಿಗೆದಾರರ 21 ಸದಸ್ಯರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದು, ರಾಜ್ಯದ ವಿವಿಧಡೆಗಳಿಂದ ಬಂದ ಗುತ್ತಿಗೆದಾರರು ಬೆಂಬಲ ನೀಡಿದರು.























