ದಾಂಡೇಲಿ (ಉತ್ತರ ಕನ್ನಡ) : ಉತ್ತರ ಕನ್ನಡ ಜಿಲ್ಲೆಯಲ್ಲಿ ಪ್ರಸ್ತುತ ಮಳೆಯ ಪ್ರಮಾಣ ಕಡಿಮೆ ಇರುವುದರಿಂದ ರೈತರಿಗೆ ಕಡಿಮೆ ಅವಧಿಯಲ್ಲಿ ಇಳುವರಿ ನೀಡುವ ಬೆಳೆಗಳನ್ನು ಬೆಳೆಯಲು ಉತ್ತೇಜಿಸುವಂತೆ ಕೃಷಿ ಇಲಾಖೆಯ ಅಧಿಕಾರಿಗಳಿಗೆ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಸುಷ್ಮಾ ಗೋಡಬೋಲೆ ನಿರ್ದೇಶನ ನೀಡಿದರು.
ಅವರು ಶುಕ್ರವಾರ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ, ಜಿಲ್ಲೆಯ ಬರ ಪರಿಸ್ಥಿತಿ ನಿರ್ವಹಣೆ ಹಾಗೂ ಪೂರ್ವ ತಯಾರಿ ಕುರಿತ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಪ್ರಸಕ್ತ ಸಾಲಿನಲ್ಲಿ ಜಿಲ್ಲೆಯಲ್ಲಿ ಶೇ.24 ರಷ್ಟು ಮಳೆಯ ಕೊರತೆಯಿರುವುದರಿಂದ ರೈತರು ಹೆಚ್ಚು ನೀರಿನ ಅವಶ್ಯಕತೆ ಬೇಡುವ ಬೆಳೆಗಳನ್ನು ಬೆಳೆಯದೆ , ಕಡಿಮೆ ಪ್ರಮಾಣದ ನೀರನ್ನು ಬಳಸಿಕೊಂಡು ಬೆಳಯಬಹುದಾದ ಬೆಳೆಯ ತಳಿಗಳನ್ನು ಭಿತ್ತನೆ ಮಾಡಲು ಪ್ರೋತ್ಸಾಹಿಸುವಂತೆ ತಿಳಿಸಿದ ಅವರು ಈ ರೀತಿಯ ಬಿತ್ತನೆ ಬೀಜಗಳ ಕೊರತೆ ಮತ್ತು ರಸಗೊಬ್ಬರದ ಕೊರತೆ ಉಂಟಾಗದoತೆ ಮುನ್ನೆಚ್ಚರಿಕೆ ವಹಿಸುವಂತೆ ಸೂಚಿಸಿದರು.
ಜಿಲ್ಲೆಯಲ್ಲಿನ ಹೆಚ್ಚಿನ ಪ್ರಮಾಣದ ಕೃಷಿ ಭೂಮಿ ಹೊಂದಿರುವ ಮುಂಡಗೋಡು, ಹಳಿಯಾಳ ಮತ್ತು ಯಲ್ಲಾಪುರ ಭಾಗದಲ್ಲಿ ನೀರಿನ ಕೊರತೆಯನ್ನು ತಪ್ಪಿಸಲು ಕೃಷಿ ಹೊಂಡಗಳ ನಿರ್ಮಾಣ, ಬಾವಿ ಮತ್ತು ಬೋರ್ವೆಲ್ ಗಳಿಗೆ ಅಂತರ್ಜಲ ಮರುಪೂರಣ ವ್ಯವಸ್ಥೆಯನ್ನು ಕಲ್ಪ್ಪಿಸುವಂತೆ ತಿಳಿಸಿದರು.
ಸಣ್ಣ ನೀರಾವರಿ ಇಲಾಖೆಯಿಂದ ಜಿಲ್ಲೆಯಲ್ಲಿನ ಕೆರೆಗಳಲ್ಲಿನ ನೀರಿನ ಸಂರಕ್ಷಣೆಗೆ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು. ಕೆರೆ ನೀರಿನ ಸಂರಕ್ಷಣೆ ಕುರಿತು ಕೈಗೊಂಡಿರುವ ಕಾಮಗಾರಿಗಳನ್ನು ಶೀಘ್ರದಲ್ಲಿ ಮುಕ್ತಾಯಗೊಳಿಸುವಂತೆ ತಿಳಿಸಿದ ಅವರು ಗ್ರಾಮೀಣ ಭಾಗದಲ್ಲಿ ಕುಡಿಯುವ ನೀರಿನ ಕೊರತೆಯಾಗದಂತೆ ಸಿದ್ದತೆಗಳನ್ನು ಕೈಗೊಳ್ಳಬೇಕು , ಸಾಂಪ್ರದಾಯಿಕ ನೀರಿನ ಸಂರಕ್ಷಣಾ ವಿಧಾನಗಳನ್ನು ಉತ್ತೇಜಿಸಬೇಕು. ಎಲ್ಲಾ ಪಂಚಾಯತ್ ಕಟ್ಟಡಗಳು, ಹಾಸ್ಟೆಲ್ ಕಟ್ಟಡಗಳು, ಸರ್ಕಾರಿ ಕಟ್ಟಡಗಳಲ್ಲಿ ಮಳೇ ನೀರು ಸಂರಕ್ಷಣಾ ವಿಧಾನಗಳನ್ನು ಅಳವಡಿಸಿಕೊಳ್ಳಬೇಕು ಎಂದರು.
ರೈತರಿಗೆ ಹವಾಮಾನ ವೈಪರೀತ್ಯದಿಂದ ಬೆಳೆ ನಷ್ಠವಾದಲ್ಲಿ ಬೆಳೆ ವಿಮೆ ಹಾನಿಯ ಪರಿಹಾರ ಪಡೆಯಲು ಅನುಕೂಲವಾಗುವಂತೆ ಹೆಚ್ಚಿನ ಸಂಖ್ಯೆಯಲ್ಲಿ ಬೆಳೆ ವಿಮೆಗೆ ನೊಂದಾಯಿಸಲು ಮತ್ತು ವಿಮಾ ಕಂತು ಪಾವತಿಸುವ ಕುರಿತಂತೆ ಅರಿವು ಮೂಡಿಸಬೇಕು. ತೋಟಗಾರಿಕೆ ಬೆಳೆಗಳಿಗೆ ಹನಿ ನೀರಾವರಿ ವ್ಯವಸ್ಥೆ ಅಳವಡಿಸಿಕೊಳ್ಳಲು ತಿಳಿಸಬೇಕು. ಜಿಲ್ಲೆಯಲ್ಲಿರುವ ಮಳೆ ಮಾಪನ ಯಂತ್ರಗಳು ಸಮರ್ಪಕವಾಗಿ ಕಾರ್ಯನಿರ್ವಹಿಸುವ ಕುರಿತಂತೆ ಅಗತ್ಯ ದುರಸ್ತಿ ಕಾರ್ಯಗಳನ್ನು ಕೈಗೊಳ್ಳುವಂತೆ ಹಾಗೂ ಜಿಲ್ಲೆಯಲ್ಲಿ ಜಾನುವಾರುಗಳಿಗೆ ಮೇವಿನ ಕೊರತೆ ಆಗದಂತೆ ಎಚ್ಚರವಹಿಸಬೇಕು ಎಂದರು.
ಜಿಲ್ಲೆಯಲ್ಲಿ ಈಗಾಗಲೇ 5.01 ಲಕ್ಷ ಟನ್ ಮೇವು ದಾಸ್ತಾನು ಲಭ್ಯವಿದ್ದು, ಮುಂದಿನ 39 ವಾರಗಳಿಗೆ ಸಾಕಾಗಲಿದೆ ಎಂದು ಪಶುಪಾಲನಾ ಇಲಾಖೆಯ ಉಪ ನಿರ್ದೇಶಕರು ಮಾಹಿತಿ ನೀಡಿದರು.
ಸಭೆಯಲ್ಲಿ ಜಿಲ್ಲಾಧಿಕಾರಿ ಕೆ.ಲಕ್ಷಿಪ್ರಿಯಾ, ಜಿ.ಪಂ. ಸಿಇಓ ಡಾ.ದಿಲೀಷ್ ಶಶಿ, ಕಾರವಾರ ಡಿ.ಎಫ್.ಓ ಆಂಥೋಣಿ ಮರಿಯಪ್ಪ, ಅಪರ ಜಿಲ್ಲಾಧಿಕಾರಿ ಸಾಜಿದ್ ಮುಲ್ಲಾ ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಇದ್ದರು.





















