ವಿಜಯನಗರ ಜಿಲ್ಲೆಯ ಕೂಡ್ಲಿಗಿ ತಾಲೂಕಿನ ಅಮ್ಮನಕೇರಿ ಕ್ರಾಸ್ ಬಳಿ ಕೇರಳದಿಂದ ಹಂಪಿಗೆ ಪ್ರವಾಸಕ್ಕೆ ತೆರಳುತ್ತಿದ್ದ ವಿದ್ಯಾರ್ಥಿಗಳಿದ್ದ ಟೂರಿಸ್ಟ್ ಮಿನಿ ಬಸ್ ಪಲ್ಟಿಯಾದ ಘಟನೆ ನಡೆದಿದೆ. ಚಾಲಕನ ನಿಯಂತ್ರಣ ತಪ್ಪಿದ ಪರಿಣಾಮ ಬಸ್ ಡಿವೈಡರ್ಗೆ ಡಿಕ್ಕಿ ಹೊಡೆದು ಪಲ್ಟಿಯಾಗಿದ್ದು, ಮೂವರು ವಿದ್ಯಾರ್ಥಿಗಳು ಹಾಗೂ ಓರ್ವ ಶಿಕ್ಷಕಿ ಗಂಭೀರವಾಗಿ ಗಾಯಗೊಂಡಿದ್ದಾರೆ.
ಪೊಲೀಸರ ಮಾಹಿತಿ ಪ್ರಕಾರ, ಕೇರಳದಿಂದ ಬಂದ ವಿದ್ಯಾರ್ಥಿಗಳ ತಂಡ ಹಂಪಿ ಪ್ರವಾಸಕ್ಕೆ ತೆರಳುತ್ತಿದ್ದು, ಈ ವೇಳೆ ಮಿನಿ ಬಸ್ ಅಮ್ಮನಕೇರಿ ಕ್ರಾಸ್ ಬಳಿ ತಲುಪುತ್ತಿದ್ದಾಗ ಏಕಾಏಕಿ ಚಾಲಕನ ನಿಯಂತ್ರಣ ತಪ್ಪಿದೆ. ಪರಿಣಾಮ ರಸ್ತೆ ಮಧ್ಯದ ಡಿವೈಡರ್ಗೆ ಡಿಕ್ಕಿ ಹೊಡೆದು ಬಸ್ ಪಲ್ಟಿಯಾಗಿದೆ. ಡಿಕ್ಕಿಯ ರಭಸಕ್ಕೆ ಬಸ್ ಸಂಪೂರ್ಣವಾಗಿ ಉರುಳಿಬಿದ್ದು ವಿದ್ಯಾರ್ಥಿಗಳು ಭಯಭೀತರಾಗಿದ್ದಾರೆ.
ಇದನ್ನೂ ಓದಿ: ಕೇರಳದ ಪ್ರವಾಸಿ ವಿದ್ಯಾರ್ಥಿಗಳಿಂದ ಹುಚ್ಚಾಟ: ವಿಡಿಯೋ ವೈರಲ್
ಘಟನೆಯ ನಂತರ ಸ್ಥಳೀಯರು ತಕ್ಷಣ ಧಾವಿಸಿ ರಕ್ಷಣಾ ಕಾರ್ಯಾಚರಣೆ ನಡೆಸಿದ್ದು, ಗಾಯಾಳುಗಳನ್ನು ಸಮೀಪದ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ನಂತರ ಹೆಚ್ಚಿನ ಚಿಕಿತ್ಸೆಗಾಗಿ ಬಳ್ಳಾರಿಯ ವಿಜಯನಗರ ವೈದ್ಯಕೀಯ ವಿಜ್ಞಾನ ಸಂಸ್ಥೆ (ವಿಮ್ಸ್) ಆಸ್ಪತ್ರೆಗೆ ರವಾನೆ ಮಾಡಲಾಗಿದೆ.
ಅದೃಷ್ಟವಶಾತ್ ಈ ಅಪಘಾತದಲ್ಲಿ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಆದರೆ ಕೆಲ ವಿದ್ಯಾರ್ಥಿಗಳು ಮತ್ತು ಶಿಕ್ಷಕಿ ಗಂಭೀರ ಗಾಯಗೊಂಡಿರುವುದರಿಂದ ವೈದ್ಯರು ನಿಗಾ ವಹಿಸಿ ಚಿಕಿತ್ಸೆ ನೀಡುತ್ತಿದ್ದಾರೆ.
ಇದನ್ನೂ ಓದಿ: ಬೆಳಗಾವಿ: ಸಿಗರೇಟ್ ವಿಚಾರಕ್ಕೆ ಅಂಗಡಿ ಮಾಲೀಕನ ಹತ್ಯೆ
ಅಪಘಾತದ ಹಿನ್ನೆಲೆಯಲ್ಲಿ ಕೆಲಕಾಲ ವಾಹನ ಸಂಚಾರ ಅಸ್ತವ್ಯಸ್ತಗೊಂಡಿದ್ದು, ಪೊಲೀಸರು ಸ್ಥಳಕ್ಕೆ ಆಗಮಿಸಿ ಸಂಚಾರವನ್ನು ಸುಗಮಗೊಳಿಸಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಕೂಡ್ಲಿಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಅಪಘಾತದ ನಿಖರ ಕಾರಣ ಪತ್ತೆ ಹಚ್ಚಲು ತನಿಖೆ ನಡೆಸಲಾಗುತ್ತಿದೆ.























