ವಿಜಯನಗರ: ವಿಜಯನಗರ ಜಿಲ್ಲೆಯ ಹೂವಿನಹಡಗಲಿಯಲ್ಲಿ ದುರ್ಘಟನೆ ಸಂಭವಿಸಿದ್ದು, ಹುಬ್ಬಳ್ಳಿ ಮೂಲದ ಗುತ್ತಿಗೆದಾರ ಹಾಗೂ ಹೋಟೆಲ್ ಉದ್ಯಮಿ ಆನಂದ ಉಮೇಶ್ ಹೆಗಡೆ (40) ಅವರು ದಾಕ್ಷಾಯಿಣಿ ಲಾಡ್ಜ್ನ ಕೊಠಡಿಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಳಕಿಗೆ ಬಂದಿದೆ.
ಪೊಲೀಸ್ ಮೂಲಗಳ ಪ್ರಕಾರ, ಭಾನುವಾರ ಬೆಳಗ್ಗೆ ಆನಂದ ಹೆಗಡೆ ಅವರು ಟೆಂಡರ್ ಸಂಬಂಧಿತ ಕೆಲಸಕ್ಕಾಗಿ ಹುಬ್ಬಳ್ಳಿಯಿಂದ ಹೂವಿನಹಡಗಲಿ ಪಟ್ಟಣಕ್ಕೆ ಆಗಮಿಸಿದ್ದರು. ಅವರು ದಾಕ್ಷಾಯಿಣಿ ಲಾಡ್ಜ್ನ 17ನೇ ಕೊಠಡಿಯಲ್ಲಿ ತಂಗಿದ್ದು, ರಾತ್ರಿ ವೇಳೆ ಕಿಟಕಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆಂದು ಪ್ರಾಥಮಿಕ ಮಾಹಿತಿ ತಿಳಿಸಿದೆ.
ಸೋಮವಾರ ಬೆಳಗ್ಗೆ ಆನಂದ ಹೆಗಡೆ ಅವರ ಕುಟುಂಬದವರು ಹಲವಾರು ಬಾರಿ ಕರೆ ಮಾಡಿದರೂ ಅವರು ಕರೆ ಸ್ವೀಕರಿಸದ ಕಾರಣ ಶಂಕೆಗೊಂಡು ಲಾಡ್ಜ್ ಸಿಬ್ಬಂದಿಗೆ ಮಾಹಿತಿ ನೀಡಿದರು. ಬಳಿಕ ಸಿಬ್ಬಂದಿ ಕೊಠಡಿ ಬಾಗಿಲು ತೆರೆಯುವಾಗ ಕಿಟಕಿಗೆ ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ ಶವ ಪತ್ತೆಯಾಯಿತು.
ಘಟನಾ ಸ್ಥಳಕ್ಕೆ ಹೂವಿನಹಡಗಲಿ ಪೊಲೀಸ್ ಠಾಣೆಯ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಆತ್ಮಹತ್ಯೆಯ ನಿಖರ ಕಾರಣ ಇನ್ನೂ ಸ್ಪಷ್ಟವಾಗಿಲ್ಲ.
ಮೃತ ಆನಂದ ಹೆಗಡೆ ಅವರು ಹುಬ್ಬಳ್ಳಿಯ ಭವಾನಿ ನಗರದ ನಿವಾಸಿಯಾಗಿದ್ದು, ಪತ್ನಿ, ಪುತ್ರ ಮತ್ತು ಪುತ್ರಿಯನ್ನು ಹೊಂದಿದ್ದರು ಎನ್ನಲಾಗಿದೆ. ಅವರು ಹೂವಿನಹಡಗಲಿಯ ತಾಲ್ಲೂಕು ಕ್ರೀಡಾಂಗಣ ಅಭಿವೃದ್ಧಿ ಮತ್ತು ನವೀಕರಣ ಕಾಮಗಾರಿಯ ಗುತ್ತಿಗೆ ಪಡೆದಿದ್ದರು. ಜೊತೆಗೆ, ತಮ್ಮ ಸ್ನೇಹಿತರಾದ ಸುಧೀಂದ್ರ ಮತ್ತು ಗೌರೀಶರೊಂದಿಗೆ ಪಾಲುದಾರಿಕೆಯಲ್ಲಿ ಕಂಪನಿಯೊಂದನ್ನು ಸ್ಥಾಪಿಸಿ ವಿವಿಧ ಟೆಂಡರ್ ಕಾಮಗಾರಿಗಳನ್ನು ನಿರ್ವಹಿಸುತ್ತಿದ್ದರು ಎಂದು ತಿಳಿದುಬಂದಿದೆ.
ಹೂವಿನಹಡಗಲಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಆತ್ಮಹತ್ಯೆಯ ಹಿಂದಿನ ನಿಖರ ಕಾರಣ ಪತ್ತೆಹಚ್ಚಲು ತನಿಖೆ ಮುಂದುವರೆಸಿದ್ದಾರೆ.


























