Home ನಮ್ಮ ಜಿಲ್ಲೆ ವಿಜಯಪುರ ಅಧಿವೇಶನದ ಮೊದಲ ಅವಧಿಯಲ್ಲೇ ಉ.ಕ. ಚರ್ಚೆಗೆ ಸಮಯ ಕಲ್ಪಿಸಿ

ಅಧಿವೇಶನದ ಮೊದಲ ಅವಧಿಯಲ್ಲೇ ಉ.ಕ. ಚರ್ಚೆಗೆ ಸಮಯ ಕಲ್ಪಿಸಿ

0

ವಿಜಯಪುರ: ಬರುವ ಡಿಸೆಂಬರ್ 8 ರಿಂದ ಬೆಳಗಾವಿಯ ಚಳಿಗಾಲ ಅಧಿವೇಶನದಲ್ಲಿ ಉತ್ತರ ಕರ್ನಾಟಕ ಭಾಗದ ಸಮಗ್ರ ಅಭಿವೃದ್ಧಿ ವಿಷಯ ಕುರಿತು ಚರ್ಚೆಗೆ ಅಧಿವೇಶನದ ಮೊದಲ ಅವಧಿಯಲ್ಲೇ ಹೆಚ್ಚಿನ ಸಮಯಾವಕಾಶ ಕಲ್ಪಿಸುವಂತೆ ನಗರ ಶಾಸಕರಾದ ಬಸನಗೌಡ ಪಾಟೀಲ ಯತ್ನಾಳ ವಿನಂತಿಸಿದ್ದಾರೆ.

ಈ ಕುರಿತು ವಿಧಾನಸಭಾಧ್ಯಕ್ಷ ಯು.ಟಿ. ಖಾದರ್ ಅವರಿಗೆ ಪತ್ರ ಸಲ್ಲಿಸಿರುವ ಅವರು, ಉತ್ತರ ಕರ್ನಾಟಕ ಮತ್ತು ದಕ್ಷಿಣ ಕರ್ನಾಟಕ ಭಾಗಗಳ ಅಭಿವೃದ್ಧಿ ಹಾಗೂ ಸ್ಥಾನಮಾನಗಳ ಹಂಚಿಕೆಯಲ್ಲಿ ಪ್ರಾದೇಶಿಕ ತಾರತಮ್ಯವನ್ನು ನಿವಾರಿಸುವುದು ಅತೀ ಅವಶ್ಯವಿದೆ. ಆದರೆ, ಪ್ರತಿ ಭಾರಿ ಅಧಿವೇಶನ ಜರುಗಿದಾಗ ಉತ್ತರ ಕರ್ನಾಟಕದ ಸಮಗ್ರ ಅಭಿವೃದ್ಧಿ ಕುರಿತು ಅಧಿವೇಶನದ ಕೊನೆಯ ದಿನಗಳಲ್ಲಿ ಚರ್ಚೆಗೆ ಅವಕಾಶ ನೀಡುತ್ತಿರುವುದರಿಂದ, ಕೊನೆಯ ದಿನಗಳಲ್ಲಿ ಶಾಸಕರು, ಸಚಿವರ ಹಾಜರಾತಿ ಕಡಿಮೆಯಾಗಿ ಚರ್ಚೆಯೇ ನಡೆಯುವುದಿಲ್ಲ ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

ಈ ಹಿನ್ನೆಲೆಯಲ್ಲಿ ಉತ್ತರ ಕರ್ನಾಟಕ ಭಾಗದ ಸಮಗ್ರ ಅಭಿವೃದ್ಧಿ ದೃಷ್ಟಿಯಿಂದ ಇದೇ ಡಿಸೆಂಬರ್ 8ರಿಂದ ಬೆಳಗಾವಿಯಲ್ಲಿ ನಡೆಯುವ ಚಳಿಗಾಲ ಅಧಿವೇಶನದಲ್ಲಿ ಉತ್ತರ ಕರ್ನಾಟಕ ಭಾಗದ ಕೃಷ್ಣಾ ಮೇಲ್ದಂಡೆ ಯೋಜನೆ ಸೇರಿದಂತೆ ಇನ್ನಿತರೆ ನೀರಾವರಿ ಯೋಜನೆಗಳ ಅನುಷ್ಠಾನ, ನೀರಾವರಿ ಯೋಜನೆಗಾಗಿ ಜಮೀನು ಕಳೆದುಕೊಂಡ ರೈತರಿಗೆ ಭೂ ಪರಿಹಾರ, ಪುನರ್ವಸತಿ ಹಾಗೂ ಪುನರ್ ವ್ಯವಸ್ಥೆ, ಉದ್ಯೋಗ ಸೃಷ್ಟಿಗಾಗಿ ಕೈಗಾರಿಕೆಗಳ ಸ್ಥಾಪನೆ, ತ್ವರಿತಗತಿಯಲ್ಲಿ ಕೆಲಸವಾಗಲು ಮುಖ್ಯ ಕಚೇರಿಗಳ ಸ್ಥಾಪನೆ, ಶಿಥಿಲಾವಸ್ಥೆಯಲ್ಲಿರುವ ಕನ್ನಡ ಶಾಲೆಗಳ ಪುನರ್ ನಿರ್ಮಾಣ, ವಿಮಾನ ನಿಲ್ದಾಣಗಳ ಅಭಿವೃದ್ಧಿ, ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿ, ತೋಟಗಾರಿಕಾ ಹಾಗೂ ಕೃಷಿ ಬೆಳೆಗಳಿಗೆ ಉತ್ತೇಜನ, ಕಬ್ಬು ಬೆಳೆಗಾರರ ಸಮಸ್ಯೆಗಳು ಹೀಗೆ ಜ್ವಲಂತ ಸಮಸ್ಯೆಗಳ ಕುರಿತಂತೆ ಚರ್ಚಿಸಲು ಚಳಿಗಾಲ ಅಧಿವೇಶನದ ಮೊದಲ ಅವಧಿಯಲ್ಲಿಯೇ ಹೆಚ್ಚಿನ ಸಮಯಾವಕಾಶ ಕಲ್ಪಿಸಲು ಉತ್ತರ ಕರ್ನಾಟಕ ಭಾಗದ ಜನರ ಪರವಾಗಿ ಯತ್ನಾಳ ಪತ್ರದಲ್ಲಿ ವಿನಂತಿಸಿದ್ದಾರೆ.

NO COMMENTS

LEAVE A REPLY

Please enter your comment!
Please enter your name here

Exit mobile version