ವಿಜಯಪುರ: ಮನಗೂಳಿ ಸಮೀಪದ ರಾಷ್ಟ್ರೀಯ ಹೆದ್ದಾರಿ 50ರ ಕೂಡಗಿ ಕ್ರಾಸ್ ಬಳಿ ಶುಕ್ರವಾರ ಬೆಳಗ್ಗೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ತಾಯಿ-ಮಕ್ಕಳು ಸೇರಿ ಒಂದೇ ಕುಟುಂಬದ ಮೂವರು ಸಾವನ್ನಪ್ಪಿರುವ ದಾರುಣ ಘಟನೆ ನಡೆದಿದೆ.
ಗಂಗಾವತಿ ತಾಲೂಕಿನ ಕಾರಟಗಿಯಿಂದ ಮಹಾರಾಷ್ಟ್ರದ ಶಿರಡಿಗೆ ತೆರಳುತ್ತಿದ್ದ ನೂತನ ಕ್ರೆಟಾ ಕಾರು ಬೆಳಗ್ಗೆ ಸುಮಾರು 8ಗಂಟೆಯ ವೇಳೆಗೆ ಚಾಲಕನ ನಿಯಂತ್ರಣ ತಪ್ಪಿ ಅಪಘಾತಕ್ಕೀಡಾಗಿದೆ.
ಅಪಘಾತದಲ್ಲಿ ಕಾರು ಚಲಾಯಿಸುತ್ತಿದ್ದ ಹರಿವೆಂಕಟರಾಮ್ (20) ಗಂಭೀರವಾಗಿ ಗಾಯಗೊಂಡು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಿದ ವೇಳೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಇನ್ನೋರ್ವ ಪ್ರಯಾಣಿಕರಾದ ಸತ್ಯವೇಣಿ (36) ಸ್ಥಳದಲ್ಲೇ ಮೃತಪಟ್ಟಿದ್ದು, ಪುತ್ರ ಜಶ್ವಂತ್ (18) ಅವರನ್ನು ಆಸ್ಪತ್ರೆಗೆ ಸಾಗಿಸುವ ವೇಳೆ ಮೃತರಾಗಿದ್ದಾರೆ.
ಗಂಭೀರ ಗಾಯಗೊಂಡಿರುವ ರಾಘವೇಂದ್ರ (41) ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದುಬಂದಿದೆ. ರಾಘವೇಂದ್ರ ಕುಟುಂಬದವರು ಶಿರಡಿ ದೇವಸ್ಥಾನಕ್ಜೆ ತೆರಳುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ.
ಈ ಕುರಿತು ಮನಗೂಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ.






















