SK Home Ad
Home ನಮ್ಮ ಜಿಲ್ಲೆ ಯಾದಗಿರಿ BSY ಕೊಡುಗೆ ಸ್ಮರಿಸಿದ ಸೀತಾರಾಮನ್: ರೈತರ CFC ಕೇಂದ್ರಕ್ಕೆ ಚಾಲನೆ

BSY ಕೊಡುಗೆ ಸ್ಮರಿಸಿದ ಸೀತಾರಾಮನ್: ರೈತರ CFC ಕೇಂದ್ರಕ್ಕೆ ಚಾಲನೆ

0
136

ಕಲ್ಯಾಣ ಕರ್ನಾಟಕದ ರೈತರಿಗೆ ಹೊಸ ಶಕ್ತಿ: ಯಾದಗಿರಿಯಲ್ಲಿ ₹2.19 ಕೋಟಿ ವೆಚ್ಚದ ಶೇಂಗಾ ಸಂಸ್ಕರಣಾ ಘಟಕ ಉದ್ಘಾಟಿಸಿದ ನಿರ್ಮಲಾ ಸೀತಾರಾಮನ್

ಯಾದಗಿರಿ: ಕಲ್ಯಾಣ ಕರ್ನಾಟಕ ಭಾಗದ ರೈತರ ಆರ್ಥಿಕ ಸಬಲೀಕರಣ ಮತ್ತು ಕೃಷಿ ಮೌಲ್ಯವರ್ಧನೆಗೆ ಉತ್ತೇಜನ ನೀಡುವ ಮಹತ್ವದ ಹೆಜ್ಜೆಯಾಗಿ, ಕೇಂದ್ರ ಹಣಕಾಸು ಮತ್ತು ಕಾರ್ಪೊರೇಟ್ ವ್ಯವಹಾರಗಳ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಗುರುವಾರ ಯಾದಗಿರಿ ಜಿಲ್ಲೆಯ ಗುರುಮಿಠಕಲ್ ತಾಲ್ಲೂಕಿನ ಬದ್ದೇಪಲ್ಲಿ ಗ್ರಾಮದಲ್ಲಿ ನಿರ್ಮಿಸಲಾದ ರೈತ ತರಬೇತಿ ಹಾಗೂ ಸಾಮಾನ್ಯ ಸೌಲಭ್ಯ ಕೇಂದ್ರ (ಸಿಎಫ್‌ಸಿ) ಮತ್ತು ಶೇಂಗಾ ಸಂಸ್ಕರಣಾ ಘಟಕವನ್ನು ಉದ್ಘಾಟಿಸಿದರು.

₹2.19 ಕೋಟಿ ವೆಚ್ಚದಲ್ಲಿ ನಿರ್ಮಾಣಗೊಂಡಿರುವ ಈ ಯೋಜನೆಗೆ ಸಂಸತ್ ಸದಸ್ಯರ ಸ್ಥಳೀಯ ಪ್ರದೇಶಾಭಿವೃದ್ಧಿ ನಿಧಿ ಯೋಜನೆ (ಎಂಪಿಎಲ್‌ಎಡಿಎಸ್) ಅಡಿಯಲ್ಲಿ ₹50 ಲಕ್ಷ ಅನುದಾನ ಒದಗಿಸಲಾಗಿದ್ದು, ಉಳಿದ ಮೊತ್ತವನ್ನು ರಾಷ್ಟ್ರೀಯ ಕೃಷಿ ಮತ್ತು ಗ್ರಾಮೀಣಾಭಿವೃದ್ಧಿ ಬ್ಯಾಂಕ್ (ನಬಾರ್ಡ್) ಸಹಾಯಧನದ ಮೂಲಕ ನೀಡಲಾಗಿದೆ.

ಉದ್ಘಾಟನೆ ಬಳಿಕ ನಿರ್ಮಲಾ ಸೀತಾರಾಮನ್ ಅವರು ಶೇಂಗಾ ಸಂಸ್ಕರಣಾ ಘಟಕಕ್ಕೆ ಚಾಲನೆ ನೀಡಿ, ಸಂಸ್ಕರಣಾ ಪ್ರಕ್ರಿಯೆ, ಪ್ರಯೋಗಾಲಯ, ಪ್ಯಾಕೇಜಿಂಗ್ ವಿಭಾಗ ಹಾಗೂ ಮೌಲ್ಯವರ್ಧಿತ ಉತ್ಪನ್ನಗಳ ತಯಾರಿಕಾ ಘಟಕವನ್ನು ವೀಕ್ಷಿಸಿದರು. ಅಧಿಕಾರಿಗಳು ಮತ್ತು ಸಿಬ್ಬಂದಿಯಿಂದ ಘಟಕದ ಕಾರ್ಯವೈಖರಿ ಕುರಿತು ಮಾಹಿತಿ ಪಡೆದರು.

ರೈತರ ಆದಾಯ ಹೆಚ್ಚಳಕ್ಕೆ ನೆರವು : ಈ ಕೇಂದ್ರವು ರೈತರಿಗೆ ಆಧುನಿಕ ಕೃಷಿ ತಂತ್ರಜ್ಞಾನ, ಸಂಸ್ಕರಣಾ ಕೌಶಲ್ಯ, ಮೌಲ್ಯವರ್ಧನೆ ಹಾಗೂ ಮಾರುಕಟ್ಟೆ ಸಂಪರ್ಕದ ಬಗ್ಗೆ ತರಬೇತಿ ನೀಡುವ ಉದ್ದೇಶ ಹೊಂದಿದೆ. ಶೇಂಗಾ ಸೇರಿದಂತೆ ವಿವಿಧ ಕೃಷಿ ಉತ್ಪನ್ನಗಳ ಸಂಸ್ಕರಣೆ ಮೂಲಕ ರೈತರು ಹೆಚ್ಚಿನ ಆದಾಯ ಗಳಿಸಲು ಸಾಧ್ಯವಾಗಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಕೇಂದ್ರದಲ್ಲಿ ರೈತರಿಗೆ ತರಬೇತಿ ನೀಡುವುದರ ಜೊತೆಗೆ ಕೃಷಿ ಉತ್ಪನ್ನಗಳ ಗುಣಮಟ್ಟ ಪರೀಕ್ಷೆ, ಸಂಸ್ಕರಣೆ, ಪ್ಯಾಕೇಜಿಂಗ್ ಹಾಗೂ ಮಾರುಕಟ್ಟೆ ವ್ಯವಸ್ಥೆಗಳ ಕುರಿತೂ ಮಾರ್ಗದರ್ಶನ ನೀಡಲಾಗುತ್ತದೆ.

ಮಹಿಳಾ ಸ್ವಸಹಾಯ ಸಂಘಗಳ ಉತ್ಪನ್ನಗಳ ವೀಕ್ಷಣೆ : ಕಾರ್ಯಕ್ರಮದ ವೇಳೆ ಸಚಿವೆ ಮಹಿಳಾ ಸ್ವಸಹಾಯ ಸಂಘಗಳು ಸ್ಥಾಪಿಸಿದ್ದ ಮಳಿಗೆಗಳಿಗೆ ಭೇಟಿ ನೀಡಿ ವಿವಿಧ ಉತ್ಪನ್ನಗಳನ್ನು ವೀಕ್ಷಿಸಿದರು. ಉತ್ಪನ್ನಗಳ ತಯಾರಿಕೆ, ಗುಣಮಟ್ಟ ಹಾಗೂ ಮಾರುಕಟ್ಟೆ ಅವಕಾಶಗಳ ಬಗ್ಗೆ ಮಹಿಳೆಯರೊಂದಿಗೆ ಚರ್ಚಿಸಿದರು. ಸ್ಥಳೀಯ ಉತ್ಪನ್ನಗಳಿಗೆ ಹೆಚ್ಚಿನ ಮಾರುಕಟ್ಟೆ ಸೌಲಭ್ಯ ಕಲ್ಪಿಸುವ ಅಗತ್ಯವಿದೆ ಎಂದು ಅಭಿಪ್ರಾಯಪಟ್ಟರು.

ರೈತರು, ರೈತ ಮುಖಂಡರು ಮತ್ತು ಘಟಕದ ಸಿಬ್ಬಂದಿಯೊಂದಿಗೆ ಸಂವಾದ ನಡೆಸಿದ ಸಚಿವೆ, ಕೃಷಿ ಕ್ಷೇತ್ರದಲ್ಲಿ ಮೌಲ್ಯವರ್ಧನೆ ಮತ್ತು ಸಂಸ್ಕರಣೆಗೆ ಹೆಚ್ಚಿನ ಆದ್ಯತೆ ನೀಡಬೇಕೆಂದು ಹೇಳಿದರು.

B S ಯಡಿಯೂರಪ್ಪರ ಕೊಡುಗೆಯ ಉಲ್ಲೇಖ : ಕಾರ್ಯಕ್ರಮದಲ್ಲಿ ಮಾತನಾಡಿದ ನಿರ್ಮಲಾ ಸೀತಾರಾಮನ್, ಕರ್ನಾಟಕದ ಕೃಷಿ ಹಾಗೂ ಗ್ರಾಮೀಣ ಅಭಿವೃದ್ಧಿ ಕ್ಷೇತ್ರದಲ್ಲಿ ಮಾಜಿ ಮುಖ್ಯಮಂತ್ರಿ ಬಿ. ಎಸ್‌. ಯಡಿಯೂಪ್ಪ ಅವರ ಕೊಡುಗೆಯನ್ನು ಸ್ಮರಿಸಿದರು. ರೈತರ ಪರವಾದ ನೀತಿಗಳು ಮತ್ತು ಕಲ್ಯಾಣ ಕರ್ನಾಟಕ ಭಾಗದ ಅಭಿವೃದ್ಧಿಗೆ ಅವರು ನೀಡಿದ ಆದ್ಯತೆಯು ಇಂತಹ ಯೋಜನೆಗಳ ಅನುಷ್ಠಾನಕ್ಕೆ ಪೂರಕವಾಗಿದೆ ಎಂದು ಹೇಳಿದರು. ಕೃಷಿ ಕ್ಷೇತ್ರದಲ್ಲಿ ಮೌಲ್ಯವರ್ಧನೆ, ನೀರಾವರಿ, ರೈತರ ಸಬಲೀಕರಣ ಮತ್ತು ಗ್ರಾಮೀಣ ಮೂಲಸೌಕರ್ಯ ಅಭಿವೃದ್ಧಿಗೆ ಯಡಿಯೂರಪ್ಪ ಅವರು ಕೈಗೊಂಡ ಕ್ರಮಗಳನ್ನು ಅವರು ಶ್ಲಾಘಿಸಿದರು.

ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ ಉತ್ತೇಜನ : ನಬಾರ್ಡ್ ಮಾರ್ಗದರ್ಶನದಲ್ಲಿ ಸ್ಥಾಪಿಸಲಾದ ಈ ಯೋಜನೆಯು ಕಲ್ಯಾಣ ಕರ್ನಾಟಕ ಪ್ರದೇಶದ ರೈತರಿಗೆ ತರಬೇತಿ, ಕೃಷಿ ಸಂಸ್ಕರಣೆ ಮತ್ತು ಸಾಮರ್ಥ್ಯವರ್ಧನೆ ಅವಕಾಶಗಳನ್ನು ಒದಗಿಸಲಿದೆ. ಇದರಿಂದ ಕೃಷಿ ಉತ್ಪನ್ನಗಳಿಗೆ ಹೆಚ್ಚಿನ ಮೌಲ್ಯ ಸಿಗುವ ಜೊತೆಗೆ ಗ್ರಾಮೀಣ ಉದ್ಯೋಗಾವಕಾಶಗಳು ಹೆಚ್ಚಾಗುವ ನಿರೀಕ್ಷೆಯಿದೆ.

ಈ ಕೇಂದ್ರವು ಜ್ಞಾನ ಹಂಚಿಕೆ, ಕೌಶಲ್ಯ ಅಭಿವೃದ್ಧಿ ಮತ್ತು ಆಧುನಿಕ ಕೃಷಿ ಪದ್ಧತಿಗಳ ಅಳವಡಿಕೆಗೆ ವೇದಿಕೆಯಾಗಲಿದ್ದು, ರೈತರ ಆದಾಯ ವೃದ್ಧಿ ಹಾಗೂ ದೀರ್ಘಕಾಲೀನ ಗ್ರಾಮೀಣ ಅಭಿವೃದ್ಧಿಗೆ ನೆರವಾಗಲಿದೆ.

ಯಾದಗಿರಿ ಜಿಲ್ಲೆಯಲ್ಲಿ ಕೃಷಿ ಮೂಲಸೌಕರ್ಯ ಬಲಪಡಿಸುವ ನಿಟ್ಟಿನಲ್ಲಿ ಈ ಯೋಜನೆ ಮಹತ್ವದ ಮೈಲಿಗಲ್ಲಾಗಿದ್ದು, ಮುಂದಿನ ದಿನಗಳಲ್ಲಿ ಇನ್ನಷ್ಟು ರೈತರಿಗೆ ಇದರ ಪ್ರಯೋಜನ ದೊರೆಯುವ ನಿರೀಕ್ಷೆಯಿದೆ.