ಇಬ್ಬರ ಬಲಿ ಪಡೆದ ಕಾಡಾನೆ ಸಾವು

0
25
ಕಾಡಾನೆ

ಮಂಗಳೂರು: ಕಡಬ ತಾಲೂಕಿನ ರೆಂಜಿಲಾಡಿಯಲ್ಲಿ ಇಬ್ಬರನ್ನು ಬಲಿ ಪಡೆದ ಹಿನ್ನೆಲೆಯಲ್ಲಿ ಕಡಬ ತಾಲೂಕಿನ ಕೊಂಬಾರು ಸಮೀಪ ಸೆರೆ ಹಿಡಿಯಲಾಗಿದ್ದ ಕಾಡಾನೆಯೊಂದು ಕೊಡಗಿನ ಮತ್ತಿಗೋಡು ಆನೆ ಶಿಬಿರದಲ್ಲಿ ಮೃತಪಟ್ಟಿದೆ.
ಕಡಬದಲ್ಲಿ ಸೆರೆ ಹಿಡಿಯಲಾಗಿದ್ದ ಕಾಡಾನೆಯನ್ನು ಕೊಡಗಿನ ಮತ್ತಿಗೋಡು ಆನೆ ಶಿಬಿರಕ್ಕೆ ಸೇರಿಸಲಾಗಿತ್ತು. ಆದರೆ ಆ.೧೧ರಂದು ಈ ಆನೆ ಮೃತಪಟ್ಟಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಶನಿವಾರ ಅದರ ಮರಣೋತ್ತರ ಪರೀಕ್ಷೆ ನಡೆಸುವ ಕಾರ್ಯ ಮಾಡಲಾಯಿತು.
ಕಡಬ ತಾಲೂಕಿನ ರೆಂಜಿಲಾಡಿ ಗ್ರಾಮದ ಮೀನಾಡಿ ಸಮೀಪದ ನೈಲದಲ್ಲಿ ಫೆ. ೨೦ರಂದು ಬೆಳ್ಳಂ ಬೆಳಗ್ಗೆ ಕಾಡಾನೆ ದಾಳಿಗೆ ರಂಜಿತಾ (೨೪) ಹಾಗೂ ರಮೇಶ್ ರೈ (೫೮) ಎಂಬವರು ಮೃತಪಟ್ಟಿದ್ದರು.
ಘಟನೆಯಿಂದ ಆಕ್ರೋಶಗೊಂಡಿದ್ದ ಸಾರ್ವಜನಿಕರು ಕಾಡಾನೆ ಸೆರೆ ಹಿಡಿದು ಸ್ಥಳಾಂತರಿಸುವಂತೆ ಒತ್ತಾಯಿಸಿದ್ದರು. ಬಳಿಕದ ಬೆಳವಣಿಗೆಯಲ್ಲಿ ಘಟನಾ ಸ್ಥಳಕ್ಕೆ ಅಂದಿನ ಜಿಲ್ಲಾಧಿಕಾರಿ ರವಿಕುಮಾರ್ ಹಾಗೂ ಡಿಸಿಎಫ್ ದಿನೇಶ್ ಕುಮಾರ್ ಅವರು ಭೇಟಿ ನೀಡಿ ಕಾಡಾನೆ ಸೆರೆ ಹಿಡಿಯುವ ಭರವಸೆ ನೀಡಿದ್ದರು.
ಮರುದಿನವೇ ಕಾಡಾನೆ ಸೆರೆ ಹಿಡಿಯಲು ಕಾರ್ಯಾಚರಣೆ ಆರಂಭಿಸಲಾಗಿತ್ತು. ದುಬಾರೆ ಮತ್ತು ತಿತಿಮತಿಯಿಂದ ಐದು ಸಾಕಾನೆಗಳನ್ನು ತರಿಸಿ ಕಾರ್ಯಾಚರಣೆ ಆರಂಭಿಸಿ, ಮೂರನೇ ದಿನ ಕಡಬ ತಾಲೂಕಿನ ಕೊಂಬಾರು ಸಮೀಪದ ಮಂಡೆಕರ ಎಂಬಲ್ಲಿ ಕಾಡಾನೆಯನ್ನು ಸೆರೆಹಿಡಿಯಲಾಗಿತ್ತು. ಬಳಿಕ ಅದನ್ನು ಕೊಡಗಿನ ಆನೆ ಶಿಬಿರಕ್ಕೆ ಕೊಂಡೊಯ್ಯಲಾಗಿತ್ತು.

Previous articleಆನ್‌ಲೈನ್ ಗೇಮ್ ಆ‌್ಯಪ್‌ಗಳಿಂದ ವಂಚನೆಗೊಳಗಾದ ಯುವಕ
Next articleಕಾಂಗ್ರೆಸ್ ಸರಕಾರದಿಂದ ಕತ್ತಲೆ ಗ್ಯಾರಂಟಿ