Home Advertisement
Home ತಾಜಾ ಸುದ್ದಿ ಉದ್ದಟತನ ಮುಂದುವರೆಸಿದರೆ ಮಹಾರಾಷ್ಟ್ರದಲ್ಲಿರುವ ಕನ್ನಡಿಗರ ರಕ್ಷಣೆಗೆ ವಿಮೆ

ಉದ್ದಟತನ ಮುಂದುವರೆಸಿದರೆ ಮಹಾರಾಷ್ಟ್ರದಲ್ಲಿರುವ ಕನ್ನಡಿಗರ ರಕ್ಷಣೆಗೆ ವಿಮೆ

0
130
CM

ಬೆಂಗಳೂರು: ಕರ್ನಾಟಕ ಮಹಾರಾಷ್ಟ್ರ ಗಡಿ ವಿವಾದ ಸುಪ್ರೀಂ ಕೋರ್ಟ್‌‌ನಲ್ಲಿ ಇದ್ದರೂ ಮಹಾರಾಷ್ಟ್ರ ಸರ್ಕಾರ ಎರಡೂ ರಾಜ್ಯಗಳ ಗಡಿ ಭಾಗದಲ್ಲಿ ಗೊಂದಲ ಸೃಷ್ಟಿಸುವ ಕೆಲಸ ಮಾಡುತ್ತಿದೆ. ಮಹಾರಾಷ್ಟ್ರ ಸರ್ಕಾರ ಇದೇ ರೀತಿ ಉದ್ದಟತನ ಮುಂದುವರೆಸಿದರೆ ಕರ್ನಾಟಕ ಸರ್ಕಾರವೂ ಕೂಡ ಮಹಾರಾಷ್ಟ್ರ ಗಡಿಯಲ್ಲಿರುವ ಕನ್ನಡಿಗರ ರಕ್ಷಣೆಗೆ ಇದೇ ರೀತಿಯ ವಿಮೆ ಜಾರಿಗೊಳಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಎಚ್ಚರಿಕೆ ನೀಡಿದ್ದಾರೆ‌.
ಮಹಾರಾಷ್ಟ್ರ ಸರ್ಕಾರ ಕರ್ನಾಟಕದ ಗಡಿಯಲ್ಲಿರುವ ಕೆಲವರಿಗೆ ವಿಮೆ ನೀಡುವ ಆದೇಶ ಮಾಡಿರುವುದನ್ನು ಖಂಡಿಸಿ ಟ್ವೀಟ್ ಮಾಡಿರುವ ಅವರು, ಕರ್ನಾಟಕದ ಗಡಿಯಲ್ಲಿ ಇರುವವರಿಗೆ ಮಹಾರಾಷ್ಟ್ರ ಸರ್ಕಾರ ವಿಮೆ ಜಾರಿ ಮಾಡಿರುವುದು ಉದ್ದಟತನದ ಪರಮಾವಧಿಯಾಗಿದ್ದು, ಇದು ಎರಡು ರಾಜ್ಯಗಳ ನಡುವಿನ ಬಾಂಧವ್ಯ ಕದಡುವ ಪ್ರಯತ್ನವಾಗಿದೆ.
ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ ಸಿಂಧೆ ಹಾಗೂ ಉಪ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಗಡಿ ವಿಚಾರದಲ್ಲಿ ಯಾವುದೇ ರೀತಿಯ ಗೊಂದಲ ಸೃಷ್ಟಿಸುವುದಿಲ್ಲ ಎಂದು ಒಪ್ಪಿಕೊಂಡಿದ್ದರು.
ಈಗ ಕರ್ನಾಟಕದ 865 ಗ್ರಾಮಗಳ ಜನತೆಗೆ ಜ್ಯೋತಿರಾವ್ ಫುಲೆ ಜನ ಆರೋಗ್ಯ ವಿಮೆ ಯೋಜನೆ ಜಾರಿಗೆ ಆದೇಶ ಮಾಡಿರುವುದು ಒಕ್ಕೂಟ ವ್ಯವಸ್ಥೆಗೆ ಧಕ್ಕೆ ತರುವ ಕೆಲಸವಾಗಿದೆ. ಮಹಾರಾಷ್ಟ್ರ ಸರ್ಕಾರ ತಕ್ಷಣ ತನ್ನ ಆದೇಶವನ್ನು ವಾಪಸ್ ಪಡೆದು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಸೂಚನೆಗೆ ಗೌವರ ಕೊಡುವ ಮೂಲಕ ಎರಡೂ ರಾಜ್ಯಗಳ ನಡುವಿನ ಬಾಂಧವ್ಯ ಕಾಪಾಡುವ ಕೆಲಸ ಮಾಡಬೇಕು.
ಕರ್ನಾಟಕ ಗಡಿಯಲ್ಲಿರುವ ಜನರಿಗೆ ವಿಮೆ ನೀಡುವ ಹೆಸರಿನಲ್ಲಿ ಮಹಾರಾಷ್ಟ್ರ ಸರ್ಕಾರ, ಅವರಿಂದ ಮಹಾರಾಷ್ಟ್ರಕ್ಕೆ ಸೇರಿದವರೆಂದು ಘೋಷಣಾ ಪತ್ರ ತೆಗೆದುಕೊಳ್ಳುವುದು ಖಂಡನೀಯ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

Previous articleಬಂಡೀಪುರ ಟೈಗರ್‌ ಸಫಾರಿ ಬಂದ್‌: ಹೋಂ ಸ್ಟೇ, ರೆಸಾರ್ಟ್‌ಗೂ ನಿಷೇಧ
Next articleಹಾಸ್ಟೆಲ್‌ಗೆ ಬೀಗ: ಮೂವರ ಅಮಾನತು