Home Advertisement
Home ತಾಜಾ ಸುದ್ದಿ ಜುಲೈನಲ್ಲಿ ಧಾರವಾಡ – ಬೆಂಗಳೂರು ವಂದೇ ಭಾರತ್ ರೈಲಿಗೆ ಚಾಲನೆ

ಜುಲೈನಲ್ಲಿ ಧಾರವಾಡ – ಬೆಂಗಳೂರು ವಂದೇ ಭಾರತ್ ರೈಲಿಗೆ ಚಾಲನೆ

0
157

ನವದೆಹಲಿ : ಬಹು ನಿರೀಕ್ಷೆಯ ಧಾರವಾಡ – ಬೆಂಗಳೂರು ಮಧ್ಯದ ವಂದೇ ಭಾರತ್ ರೈಲು ಸಂಚಾರ ಸೇವೆ ಇನ್ನು ಕೆಲವೇ ದಿನಗಳಲ್ಲಿ ವಿದ್ಯುಕ್ತವಾಗಿ ಆರಂಭವಾಗಲಿದೆ. ಇಂದು ದೆಹಲಿಯಲ್ಲಿ ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರನ್ನು ಭೇಟಿ ಮಾಡಿ ಈ ಕುರಿತು ಚರ್ಚೆ ನಡೆಸಿದ್ದು, ರೈಲು ಸೇವೆಯ ಆರಂಭಕ್ಕೆ ಅಗತ್ಯವಿರುವ ಎಲ್ಲಾ ಸಿದ್ಧತೆಗಳು ಪೂರ್ಣಗೊಂಡಿವೆ. ಜುಲೈ ವೇಳೆಗೆ ರಾಜ್ಯದ ಎರಡನೇ ವಂದೇ ಭಾರತ್ ರೈಲಿಗೆ ಚಾಲನೆ ನೀಡುವ ಭರವಸೆಯನ್ನು ಸಚಿವರು ನೀಡಿದ್ದಾರೆ ಎಂದು ಕೇಂದ್ರ ಸಂಸದೀಯ ವ್ಯವಹಾರ ಸಚಿವ ಪ್ರಲ್ಹಾದ ಜೋಶಿ ತಿಳಿಸಿದ್ದಾರೆ.
ಹುಬ್ಬಳ್ಳಿ – ಧಾರವಾಡ ಮಹಾನಗರದ ಜನರು ಬಹು ನಿರೀಕ್ಷಿತ ಈ ಉತ್ಕೃಷ್ಟ ರೈಲಿನ ಪ್ರಯಾಣದ ಅನುಭವವನ್ನು ಶೀಘ್ರದಲ್ಲಿಯೇ ಆಸ್ವಾದಿಸಬಹುದಾಗಿದೆ ಎಂದೂ ಜೋಶಿ ಹೇಳಿದ್ದಾರೆ.


ಈ ರೈಲಿನ ವಿಶೇಷತೆ ಏನು?
ದೇಶದ ಅತಿ ವೇಗದ ರೈಲು ಇದಾಗಿದ್ದು, ಗಂಟೆಗೆ ಗರಿಷ್ಠ 160 ಕಿ.ಮೀ. ವೇಗದಲ್ಲಿ ಸಂಚರಿಸುವ ಸಾಮರ್ಥ್ಯ ಹೊಂದಿದೆ.
ಐಶಾರಾಮಿ ವ್ಯವಸ್ಥೆ, ಸೀಟುಗಳನ್ನು ವಿಮಾನದಲ್ಲಿನ ಪ್ರಯಾಣಿಕರಿಗೆ ಇರುವ ಆಸನದ ರೀತಿ ನಿರ್ಮಿಸಲಾಗಿದ್ದು, ಇದು ವಿಶ್ವದರ್ಜೆಯ ಪ್ರಯಾಣಿಕರ ಸೌಕರ್ಯಗಳನ್ನು ಹೊಂದಿದೆ.
ಹವಾನಿಯಂತ್ರಿತ, ಎಕಾನಮಿ ಮತ್ತು ಪ್ರೀಮಿಯಂ ಕ್ಲಾಸ್‌ಗಳನ್ನು ಈ ರೈಲು ಹೊಂದಿದೆ. ವಂದೇ ಭಾರತ್‌ ರೈಲಿನಲ್ಲಿ ಆನ್‌ಬೋರ್ಡ್‌ ಉಪಾಹಾರದ ವ್ಯವಸ್ಥೆ ಇದೆ. ರೀಡಿಂಗ್‌ ಲೈಟ್‌ ವ್ಯವಸ್ಥೆ, ಸ್ವಯಂ ಚಾಲಿತ ಬಾಗಿಲು, ವೈಫೈ, ಮಾಹಿತಿ ವ್ಯವಸ್ಥೆ, ಚಾರ್ಜಿಂಗ್‌ ಪಾಯಿಂಟ್‌, ಸಿಸಿ ಟಿವಿ, ಬಯೋ ಶೌಚಾಲಯ ವ್ಯವಸ್ಥೆ ಇದೆ