ದೀಪಾವಳಿ ಹಬ್ಬಕ್ಕೆ 500ಕ್ಕೂ ಹೆಚ್ಚು ವಿಶೇಷ ಬಸ್

0
39

ಹುಬ್ಬಳ್ಳಿ : ಬೆಳಕಿನ ಹಬ್ಬ ದೀಪಾವಳಿ ಆಚರಣೆಗೆ ರಾಜ್ಯದ ಹಾಗೂ ಹೊರ ರಾಜ್ಯಗಳ ವಿವಿಧ ಸ್ಥಳಗಳಿಂದ ಆಗಮಿಸುವ ಹಾಗೂ ಹಬ್ಬ ಮುಗಿಸಿಕೊಂಡು ಹಿಂದಿರುಗುವ ಸಾರ್ವಜನಿಕ ಪ್ರಯಾಣಿಕರ ಅನುಕೂಲಕ್ಕಾಗಿ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯಿಂದ 500ಕ್ಕೂ ಹೆಚ್ಚು ವಿಶೇಷ ಬಸ್ ಗಳ ವ್ಯವಸ್ಥೆ ಮಾಡಲಾಗಿದೆ ಎಂದು ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ತಿಳಿಸಿದೆ.
ನವೆಂಬರ್ 11ರಂದು ವಾರಾಂತ್ಯ ಶನಿವಾರ, 12 ರಂದು ಭಾನುವಾರ ನರಕ ಚತುರ್ದಶಿ, 13 ರಂದು ಸೋಮವಾರ ಅಮವಾಸ್ಯೆ, ಲಕ್ಷ್ಮೀ ಪೂಜೆ ಹಾಗೂ 14ರಂದು ಮಂಗಳವಾರ ಬಲಿಪಾಡ್ಯಮಿ ಇದೆ.
ಹಬ್ಬ ಆಚರಿಸಲು ನ. 10ರಂದು ಶುಕ್ರವಾರ ಮತ್ತು 11 ರಂದು ಶನಿವಾರ ಬೆಂಗಳೂರು, ಮಂಗಳೂರು,ಗೋವಾ, ಮಹಾರಾಷ್ಟ್ರದ ಪುಣೆ ಸೇರಿದಂತೆ ರಾಜ್ಯದ ಮತ್ತು ನೆರೆಯ ರಾಜ್ಯಗಳ ವಿವಿಧ ಭಾಗಗಳಿಂದ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ತಮ್ಮ ಸ್ವಂತ ಊರುಗಳಿಗೆ ಬರುವ ನಿರೀಕ್ಷೆ ಇದೆ.
ಹಬ್ಬಕ್ಕೆ ಆಗಮಿಸುವ ಪ್ರಯಾಣಿಕರಿಗೆ ಅನುಕೂಲವಾಗುವಂತೆ ನ.10 ಹಾಗೂ11ರಂದು ಬೆಂಗಳೂರು, ಮಂಗಳೂರು,ಪುಣೆ, ಗೋವಾ ಮತ್ತಿತರ ಸ್ಥಳಗಳಿಂದ ಹುಬ್ಬಳ್ಳಿ, ಧಾರವಾಡ, ಗದಗ, ಬೆಳಗಾವಿ,ಚಿಕ್ಕೋಡಿ, ಉತ್ತರ ಕನ್ನಡ, ಹಾವೇರಿ, ಬಾಗಲಕೋಟೆ ಮತ್ತಿತರ ಪ್ರಮುಖ ಸ್ಥಳಗಳಿಗೆ ಹೆಚ್ಚುವರಿ ಬಸ್ ಗಳನ್ನು ವ್ಯವಸ್ಥೆ ಮಾಡಲಾಗಿದೆ ಎಂದು ತಿಳಿಸಲಾಗಿದೆ.
ಇದಕ್ಕಾಗಿ ಮಲ್ಟಿ ಅ್ಯಕ್ಸಲ್ ವೋಲ್ವೊ, ಸ್ಲೀಪರ್, ರಾಜಹಂಸ ಮುಂತಾದ 50 ಪ್ರತಿಷ್ಠಿತ ಐಶಾರಾಮಿ ಬಸ್ಸುಗಳು ಹಾಗೂ 200 ವೇಗಧೂತ ಸಾರಿಗೆಗಳು ಸೇರಿದಂತೆ 250ಕ್ಕೂ ಹೆಚ್ಚು ಹೆಚ್ಚುವರಿ ಬಸ್ಸುಗಳನ್ನು ಕಾರ್ಯಾಚರಣೆ ಮಾಡಲು ಯೋಜಿಸಲಾಗಿದೆ. ಅಲ್ಲದೇ, ಸ್ಥಳೀಯ ಬಸ್ ನಿಲ್ದಾಣಗಳಿಂದ ಜಿಲ್ಲೆಯೊಳಗೆ ಹಾಗೂ ನೆರೆಯ ಜಿಲ್ಲೆಗಳಿಗೆ ಪ್ರಯಾಣಿಕರ ದಟ್ಟಣೆಗೆ ತಕ್ಕಂತೆ ಹೆಚ್ಚುವರಿ ಬಸ್ ಗಳನ್ನು ಓಡಿಸಲಾಗುತ್ತದೆ ಎಂದು ಸಂಸ್ಥೆ ತಿಳಿಸಿದೆ.
ಅದೇ ರೀತಿ ಹಬ್ಬ ಮುಗಿಸಿಕೊಂಡು ಸ್ವಂತ ಊರುಗಳಿಂದ ಹಿಂದಿರುವ ಪ್ರಯಾಣಿಕರ ಅನುಕೂಲಕ್ಕಾಗಿ ನ. 15 ರಿಂದ 19ರವರೆಗೆ ಸಂಸ್ಥೆಯ ವ್ಯಾಪ್ತಿಯ ಪ್ರಮುಖ ಬಸ್ ನಿಲ್ದಾಣಗಳಿಂದ ಬೆಂಗಳೂರು, ಮಂಗಳೂರು, ಗೋವಾ, ಮಹಾರಾಷ್ಟ್ರದ ಪುಣೆ ಸೇರಿದಂತೆ ರಾಜ್ಯದ ಮತ್ತು ನೆರೆಯ ರಾಜ್ಯಗಳ ಪ್ರಮುಖ ಸ್ಥಳಗಳಿಗೆ ಪ್ರಯಾಣಿಕರ ದಟ್ಟಣೆಗೆ ಅನುಗುಣವಾಗಿ 250 ಕ್ಕೂ ಹೆಚ್ಚು ವಿಶೇಷ ಬಸ್ಸುಗಳನ್ನು ಕಾರ್ಯಾಚರಣೆ ಮಾಡಲಾಗುತ್ತದೆ ಎಂದು ಸಂಸ್ಥೆಯ ಸಾರ್ವಜನಿಕ ಸಂಪರ್ಕಾಧಿಕಾರಿ ರಾಮನಗೌಡರ ತಿಳಿಸಿದ್ದಾರೆ.
ಮುಂಗಡ ಬುಕ್ಕಿಂಗ್ ರಿಯಾಯಿತಿ:
ಸಂಸ್ಥೆಯ ವೆಬ್ ಸೈಟ್ www.ksrtc.in ಅಥವಾ KSRTC Mobile App, ಪ್ರಮುಖ ಬಸ್ ನಿಲ್ದಾಣಗಳಲ್ಲಿರುವ ಟಿಕೆಟ್ ಬುಕ್ಕಿಂಗ್ ಕೌಂಟರ್‌ಗಳು ಹಾಗೂ ಖಾಸಗಿ ಫ್ರಾಂಚೈಸಿ ಕೌಂಟರ್ ಗಳಲ್ಲಿ ಮುಂಗಡ ಟಿಕೆಟ್ ಬುಕ್ಕಿಂಗ್ ಮಾಡಲು ಅವಕಾಶ ಕಲ್ಪಿಸಲಾಗಿದೆ. ನಾಲ್ಕು ಅಥವಾ ಹೆಚ್ಚು ಆಸನಗಳನ್ನು ಒಂದೇ ಟಿಕೆಟ್ ನಲ್ಲಿ ಕಾಯ್ದಿರಿಸಿದರೆ ಪ್ರಯಾಣದರದಲ್ಲಿ ಶೇಕಡ 5ರಷ್ಟು ರಿಯಾಯಿತಿ ನೀಡಲಾಗುತ್ತದೆ.
ಹೋಗುವ ಹಾಗೂ ಬರುವ ಪ್ರಯಾಣಕ್ಕೆ ಒಂದೇ ಟಿಕೆಟ್ ಪಡೆದರೆ ಹಿಂದಿರುಗುವ ಪ್ರಯಾಣ ದರದಲ್ಲಿ ಶೇಕಡ 10ರಷ್ಟು ರಿಯಾಯಿತಿ ನೀಡಲಾಗುತ್ತದೆ. ಕೊನೆಯ ಕ್ಷಣದ ರಷ್ ನಿಂದ ತಪ್ಪಿಸಿಕೊಳ್ಳಲು ಕೂಡಲೇ ಮುಂಗಡ ಬುಕ್ಕಿಂಗ್ ಮಾಡಿಕೊಳ್ಳುವುದು ಸೂಕ್ತ ಎಂದು ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

Previous articleಮೈದುನನಿಂದಲೇ ಅತ್ತಿಗೆ, ಇಬ್ಬರು ಮಕ್ಕಳ ಹತ್ಯೆ
Next articleಮುಂದಿನ ಐದು ವರ್ಷಗಳವರೆಗೆ ಉಚಿತ ಪಡಿತರ