ಮಂಗಳೂರು: ತುಳುನಾಡಿನ ದೈವಾರಾಧನೆ ಮತ್ತು ಮಹಿಳೆಯರ ಬಗ್ಗೆ ಅಶ್ಲೀಲ ಸಂದೇಶಗಳನ್ನು ಪೋಸ್ಟ್ ಮಾಡಿದ್ದ ಆರೋಪಿಯನ್ನು ಮಂಗಳೂರಿನ ಸೆನ್ ಠಾಣೆಯ ಪೊಲೀಸರು ಬಂಧಿಸಿರುವ ಬಗ್ಗೆ ವರದಿಯಾಗಿದೆ.
ಬಂಧಿತ ಆರೋಪಿಯನ್ನು ಬೆಂಗಳೂರು ಉತ್ತರ ಜಿಲ್ಲೆಯ ಶಿವರಾಜ್ ಹೆಚ್.ಕೆ. (೩೭) ಎಂದು ಗುರುತಿಸಲಾಗಿದೆ. ೨೦೨೨ರಲ್ಲಿ ನಕಲಿ ಟ್ವೀಟ್ ಖಾತೆಯೊಂದರಲ್ಲಿ ತುಳುನಾಡಿನ ದೈವರಾಧನೆ ಮತ್ತು ಮಹಿಳೆಯರ ಬಗ್ಗೆ ಅಶ್ಲೀಲವಾಗಿ ಪೋಸ್ಟ್ ಮಾಡಲಾಗಿತ್ತು. ಈ ಬಗ್ಗೆ ತುಳುನಾಡಿನ ದೈವಾರಾಧನೆ ಸಂರಕ್ಷಣಾ ಯುವ ವೇದಿಕೆಯು ಮಂಗಳೂರು ಸೆನ್ ಠಾಣೆಯಲ್ಲಿ ಪ್ರಕರಣ ದಾಖಲಿಸಿತ್ತು.
ಮಂಗಳೂರು ಪೊಲೀಸ್ ಆಯುಕ್ತ ಕುಲದೀಪ್ ಕುಮಾರ್ ಜೈನ್ ಮಾರ್ಗದರ್ಶನದಂತೆ ಸಿಸಿಬಿ, ಎಸಿಪಿ ಪಿ.ಎ.ಹೆಗಡೆ ನೇತೃತ್ವದಲ್ಲಿ ಇನ್ಸ್ಪೆಕ್ಟರ್ ಸತೀಶ್ ಎಂ.ಪಿ. ಮತ್ತಿತರರು ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಬೆಂಗಳೂರಿನಿಂದ ಬಂಧಿಸಿ ಮಂಗಳೂರು ಜೆಂಎಫ್ಸಿ ೭ನೇ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.