ಬೆಂಗಳೂರು: ಬಿಜೆಪಿ ಮತ್ತು ಜೆಡಿಎಸ್ ಇಬ್ಬರೂ ಅನವಶ್ಯಕ ರಾಜಕಾರಣ ಮಾಡುತ್ತಿದ್ದಾರೆ, ಕಾವೇರಿ ನೀರಿನ ವಿಚಾರವಾಗಿ ಪ್ರಧಾನಮಂತ್ರಿಗಳ ಕಚೇರಿಗೆ ಸರ್ವಪಕ್ಷ ನಿಯೋಗ ಕರೆದುಕೊಂಡು ಹೋಗಲು ಪತ್ರ ಬರೆಯುತ್ತಲೇ ಇದ್ದೇವೆ, ಯಾವುದೇ ಪ್ರತಿಕ್ರಿಯೆ ಬಂದಿಲ್ಲ ಎಂದು ಉಪಮುಖ್ಯ ಮಂತ್ರಿ ಡಿ. ಕೆ. ಶಿವಕುಮಾರ ಹೇಳಿದ್ದಾರೆ, ವಿಧಾನಸೌಧದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು,ಕಾವೇರಿ ಜಲವಿವಾದಕ್ಕೆ ಸಂಬಂಧಿಸಿದಂತೆ ಸರ್ವ ಪಕ್ಷ ನಿಯೋಗ ಭೇಟಿಗೆ ಪ್ರಧಾನಿ ಕಚೇರಿಯಿಂದ ಇದುವರೆಗೂ ಸಮಯಾವಕಾಶ ನಿಗದಿ ಮಾಡಿ ಪತ್ರ ಬಂದಿಲ್ಲ. ಅಧಿಕಾರ ಸಿಗದೇ ಇರುವುದರಿಂದ ಬಿಜೆಪಿ ಮತ್ತು ಜೆಡಿಎಸ್ ಹತಾಶರಾಗಿ ಸಹಿಸಿಕೊಳ್ಳಲಾಗದೆ ನಮ್ಮ ಮೇಲೆ ಆರೋಪ ಮಾಡುತ್ತಿದ್ದಾರೆ. ಇದಕ್ಕೆಲ್ಲ ತಲೆ ಕೆಡಿಸಿಕೊಳ್ಳುವುದಿಲ್ಲ. ತಮಗೆ ರಾಜ್ಯದ ಹಿತ ಮುಖ್ಯ ಎಂದರು. ನಮ್ಮ ಬಳಿ ಕೇವಲ ಕುಡಿಯಲು ಮತ್ತು ನಮ್ಮ ರೈತರ ಬೆಳೆಗಳಿಗೆ ಸಾಕಾಗುವಷ್ಟು ಮಾತ್ರ ನೀರಿದೆ. ಕಾವೇರಿ ಅಚ್ಚುಕಟ್ಟು ಪ್ರದೇಶದ ಅಣೆಕಟ್ಟುಗಳಲ್ಲಿ ನೀರಿಲ್ಲ ಎಂದು ಸ್ಪಷ್ಟವಾಗಿ ಕಾವೇರಿ ಪ್ರಾಧಿಕಾರಕ್ಕೆ ಮಾಹಿತಿ ನೀಡಿದ್ದೇವೆ ಎಂದು ಹೇಳಿದರು.
