ಮಂಗಳೂರು: ಬ್ಯಾನರ್ಗೆ ಚಪ್ಪಲಿ ಹಾಕಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಪುತ್ತೂರು ಡಿವೈಎಸ್ಪಿ ಸೇರಿ ಮೂವರು ಪೊಲೀಸರ ವಿರುದ್ಧ ಎಫ್ಐಆರ್ ದಾಖಲಾಗಿದ್ದು, ಪಿಎಸ್ಐ ಮತ್ತು ಪೇದೆ ಸೇರಿದಂತೆ ಇಬ್ಬರನ್ನು ಅಮಾನತುಗೊಳಿಸಲಾಗಿದೆ ಎಂದು ಪೊಲೀಸ್ ವರಿಷ್ಠಾಧಿಕಾರಿ ವಿಕ್ರಮ್ ಅಮಟೆ ತಿಳಿಸಿದ್ದಾರೆ.
ರಾಜ್ಯ ವಿಧಾನಸಭೆ ಚುನಾವಣೆಯ ಫಲಿತಾಂಶದಲ್ಲಿ ಬಿಜೆಪಿ ಹೀನಾಯವಾಗಿ ಸೋತ ಬಳಿಕ ಪುತ್ತೂರು ಬಸ್ ನಿಲ್ದಾಣದ ಬಳಿ ನಳಿನ್ ಕುಮಾರ್ ಕಟೀಲ್ ಹಾಗೂ ಸಂಸದ ಡಿವಿ ಸದಾನಂದ ಗೌಡ ಅವರ ಭಾವಚಿತ್ರ ಇರುವ ಶ್ರದ್ಧಾಂಜಲಿ ಬ್ಯಾನರ್ ಹಾಕಲಾಗಿತ್ತು. ಆ ಬ್ಯಾನರ್ಗೆ ಚಪ್ಪಲಿ ಹಾರ ಹಾಕಲಾಗಿತ್ತು. ಈ ಬಗ್ಗೆ ಪುತ್ತೂರು ನಗರಸಭಾ ಆಯುಕ್ತ ಮಧು ಮನೋಹರ್ ಹಾಗೂ ಇತರರು ಪೊಲೀಸರಿಗೆ ದೂರು ನೀಡಿ ತಪ್ಪಿತಸ್ಥರನ್ನು ಬಂಧಿಸುವಂತೆ ಆಗ್ರಹಿಸಿದ್ದರು.
ಬಳಿಕ ಘಟನೆಗೆ ಸಂಬಂಧಿಸಿದಂತೆ 9 ಜನರನ್ನು ವಶಕ್ಕೆ ಪಡೆದಿದ್ದ ಪೊಲೀಸರು ಆರೋಪಿಗಳಿಗೆ ಥರ್ಡ್ ಡಿಗ್ರಿ ಟ್ರೀಟ್ಮೆಂಟ್ ನೀಡಿದ್ದಾರೆ. ಅವರ ಮೇಲೆ ತೀವ್ರ ಹಲ್ಲೆ ನಡೆಸಿದ್ದಾರೆ ಎಂಬ ಆರೋಪಗಳು ಕೇಳಿಬಂದಿದ್ದವು. ಈ ಕುರಿತು ದ.ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಿಕ್ರಮ್ ಅಮಟೆ ಅವರು ಪುತ್ತೂರು ಪೊಲೀಸ್ ಠಾಣೆಗೆ ಭೇಟಿ ನೀಡಿ ವಿಚಾರಣೆ ನಡೆಸಿ ಕ್ರಮ ಕೈಗೊಂಡಿದ್ದಾರೆ.