ಮಂಗಳೂರು: ಅಪ್ರಾಪ್ತ ವಯಸ್ಸಿನವರಿಗೆ ವಾಹನ ನೀಡಿದರೆ ವಾಹನದ ಮಾಲೀಕರ ವಿರುದ್ಧ ಕಠಿಣ ಕ್ರಮ ಜರುಗಿಸಲಾಗುವುದು ಎಂದು ಪೊಲೀಸ್ ಆಯುಕ್ತ ಕುಲದೀಪ್ ಕುಮಾರ್ ಜೈನ್ ಎಚ್ಚರಿಸಿದ್ದಾರೆ.
ಪೊಲೀಸ್ ಆಯುಕ್ತರ ಕಚೇರಿಯಲ್ಲಿ ಶನಿವಾರ ನಡೆದ ಪೊಲೀಸ್ ಫೋನ್ಇನ್ ಕಾರ್ಯಕ್ರಮದ ಬಳಿಕ ಸುದ್ದಿಗಾರರ ಜತೆ ಮಾತನಾಡಿದ ಅವರು, ಕಾಟಿಪಳ್ಳ ಪ್ರದೇಶದಲ್ಲಿ ಅಪ್ರಾಪ್ತ ವಯಸ್ಸಿನವರು ಹೆಲ್ಮೆಟ್ ಧರಿಸದೆ ಮೂರು ಜನ ಕುಳಿತುಕೊಂಡು ಅತಿ ವೇಗವಾಗಿ ದ್ವಿಚಕ್ರ ವಾಹನಗಳನ್ನು ಚಲಾಯಿಸುವ ಪ್ರಕರಣ ಹೆಚ್ಚಾಗುತ್ತಿದೆ. ಪೊಲೀಸರು ಈ ಬಗ್ಗೆ ನಿಗಾ ಇಟ್ಟು ಕ್ರಮ ಜರುಗಿಸಬೇಕು ಎಂದು ಸ್ಥಳೀಯರು ಒತ್ತಾಯಿಸಿದ್ದಾರೆ.
ಸುರತ್ಕಲ್ ಪರಿಸರದಲ್ಲಿ ಗುಣಮಟ್ಟದ ಸಿಸಿ ಕ್ಯಾಮರಾ ಅಳವಡಿಸಲಾಗಿದೆ. ಸಂಚಾರ ನಿಯಮ ಉಲ್ಲಂಘಿಸುವುದರ ವಿರುದ್ಧ ಗಮನ ವಹಿಸಲಾಗುತ್ತಿದೆ. ಕಾನೂನು ಉಲ್ಲಂಘಿಸಿ ವಾಹನ ಚಲಾಯಿಸುವ ಅಪ್ರಾಪ್ತರ ಹೆತ್ತವರನ್ನು ಕರೆಸಿ ಎಚ್ಚರಿಕೆ ನೀಡಲಾಗುತ್ತಿದೆ. ಶಾಲೆಗಳಲ್ಲೂ ಜಾಗೃತಿ ಮೂಡಿಸಲಾಗುತ್ತಿದೆ ಎಂದು ಹೇಳಿದರು.
ಕೆಪಿಟಿ-ಕಾವೂರು ವಿಮಾನ ನಿಲ್ದಾಣ ರಸ್ತೆಯಲ್ಲಿ ಅಪಘಾತ ಪ್ರಕರಣಗಳು ಹೆಚ್ಚಾಗುತ್ತಿದೆ. ೧೦ ವರ್ಷದಲ್ಲಿ ೩೦ಕ್ಕಿಂತಲೂ ಅಧಿಕ ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ಕೇರಳದ ವಿದ್ಯಾರ್ಥಿಗಳು ಸಂಚಾರ ನಿಯಮ ಉಲ್ಲಂಘಿಸಿ ಸಂಚರಿಸುತ್ತಿರುವುದು ಹೆಚ್ಚಾಗಿ ಕಂಡು ಬರುತ್ತಿದೆ. ವಿಮಾನ ನಿಲ್ದಾಣ ರಸ್ತೆ, ಹೆಚ್ಚಾಗಿ ವಿಐಪಿಗಳು ಸಂಚರಿಸುವುದರಿಂದ ಅಲ್ಲಿ ಹಂಪ್ಸ್ ಹಾಕಲು ಅವಕಾಶ ಇಲ್ಲ. ವೇಗ ನಿಯಂತ್ರಣಕ್ಕೆ ಪರ್ಯಾಯ ವ್ಯವಸ್ಥೆ ಏನಾದರೂ ಕೈಗೊಳ್ಳುವಂತೆ ಸಾಮಾಜಿಕ ಕಾರ್ಯಕರ್ತ ಜಿ.ಕೆ.ಭಟ್ ಒತ್ತಾಯಿಸಿದರು.
ನಗರದಲ್ಲಿ ಕೆಲವೊಂದು ಬಾರ್ ಮತ್ತು ವೈನ್ಶಾಪ್ಗಳು ಸಮಯ ಪಾಲನೆ ಮಾಡುತ್ತಿಲ್ಲ ಎಂದು ಸಾರ್ವಜನಿಕರೊಬ್ಬರು ದೂರಿದರು. ಇದಕ್ಕೆ ಪ್ರತಿಕ್ರಿಯಿಸಿದ ಆಯುಕ್ತರು, ನಗರದ ಎಲ್ಲಾ ಬಾರ್ ಹಾಗೂ ವೈನ್ಶಾಪ್ಗಳ ಸಿಸಿ ಕ್ಯಾಮರಾ ಪರಿಶೀಲನೆ ನಡೆಸುತ್ತಿವೆ. ಈಗಾಗಲೇ ಕೆಲವೊಂದು ವೈನ್ಶಾಪ್, ಬಾರ್ಗಳು ನಿಯಮ ಮೀರಿರುವುದು ಕಂಡು ಬಂದಿದೆ. ಸೂಕ್ತ ಕ್ರಮಕ್ಕೆ ಅಬಕಾರಿ ಇಲಾಖೆಗೆ ಮನವಿ ಮಾಡಿವೆ. ಅವರು ದಂಡ ಕೂಡಾ ವಿಧಿಸಿದ್ದಾರೆ ಎಂದರು.ಬಸ್ಗಳಲ್ಲಿ ಕರ್ಕಶ ಹಾರ್ನ್ ಮಿತಿ ಮೀರಿದೆ. ಇದರಿಂದ ಸಾರ್ವಜನಿಕರು ತೊಂದರೆ ಅನುಭವಿಸುತ್ತಿದ್ದಾರೆ ಎಂದು ಬಿಜೈ ನಿವಾಸಿಯೊಬ್ಬರು ದೂರಿದರು. ಈಗಾಗಲೇ ಬಸ್ ಮಾಲೀಕರ ಸಭೆ ನಡೆಸಿದ್ದು, ಸೂಚನೆ ನೀಡಲಾಗಿದೆ. ಪೊಲೀಸರು ಕೂಡಾ ನಿರಂತರ ಕಾರ್ಯಾಚರಣೆ ನಡೆಸಿ ಕರ್ಕಶ ಹಾರ್ನ್ಗಳನ್ನು ತೆರವು ಮಾಡುತ್ತಿದ್ದಾರೆ ಎಂದು ಆಯುಕ್ತರು ಹೇಳಿದರು. ಡಿಸಿಪಿಗಳಾದ ಅಂಶು ಕುಮಾರ್, ದಿನೇಶ್ ಕುಮಾರ್, ಸಂಚಾರ ವಿಭಾಗದ ಎಸಿಪಿ ಗೀತಾ ಕುಲಕರ್ಣಿ, ಸಿಸಿಆರ್ಬಿ ಎಸಿಪಿ ರವೀಶ್ ನಾಯಕ್ ಉಪಸ್ಥಿತರಿದ್ದರು