ಹುಬ್ಬಳ್ಳಿ : ಒಳಮೀಸಲಾತಿ ಕುರಿತು ಸಚಿವ ಸಂಪುಟ ಉಪ ಸಮಿತಿಯು ಸಲ್ಲಿಸಿದ ವರದಿಯನ್ನು ಯಾವುದೇ ಕಾರಣಕ್ಕೂ ನಾವು ಒಪ್ಪುವುದಿಲ್ಲ. ಸರ್ಕಾರ ಈ ವರದಿ ಜಾರಿ ಮಾಡಕೂಡದು ಎಂದು ಬಂಜಾರ ಸೇವಾ ಸಂಘದ ರಾಜ್ಯ ಘಟಕದ ಅಧ್ಯಕ್ಷ ಪಾಂಡುರಂಗ ಪಮ್ಮಾರ ಅವರ ನೇತೃತ್ವದಲ್ಲಿ ಬಂಜಾರ ಸಮಾಜದ ಬಾಂಧವರು ಮಂಗಳವಾರ ರಾತ್ರಿ ಇಲ್ಲಿನ ವಿಮಾನ ನಿಲ್ದಾಣದಲ್ಲಿ ಮನವಿ ಸಲ್ಲಿಸಿದರು.
ಒಳಮೀಸಲಾತಿ ವರದಿ ಅವೈಜ್ಞಾನಿಕವಾಗಿದೆ.ಬಂಜಾರ, ಭೋವಿ, ವಡ್ಡರ, ಕೊರಚ, ಕೊರಮ ಸಮುದಾಯಕ್ಕೆ ಸಾಕಷ್ಟು ಅನ್ಯಾಯವಾಗಲಿದೆ. ನ್ಯಾಯಮೂರ್ತಿ ಸದಾಶಿವ ಆಯೋಗದ ವರದಿ ಜಾರಿ ಮಾಡಬಾರದು. ಆ ವರದಿಯಲ್ಲೂ ನಮ್ಮ ಎಲ್ಲ ಸಮುದಾಯಗಳ ಹಿತಾಸಕ್ತಿ ಕಡೆಗಣಿಸಲಾಗಿದೆ. ಒಳಮೀಸಲಾತಿ ಜಾರಿ ನಿರ್ಧಾರ ತಕ್ಷಣ ಹಿಂದಕ್ಕೆ ಪಡೆಯಬೇಕು ಎಂದು ಮನವಿ ಮಾಡಿದರು.
ಮನವಿ ಸ್ವೀಕರಿಸಿದ ಮುಖ್ಯಮಂತ್ರಿಯವರು, ಈ ಕುರಿತು ಎಲ್ಲ ಸಮುದಾಯದ ಮುಖಂಡರೊಂದಿಗೆ ಚರ್ಚೆ ನಡೆಸಿ ಮುಂದಿನ ತೀರ್ಮಾನ ಮಾಡುವುದಾಗಿ ಭರವಸೆ ನೀಡಿದರು.