ಚೆಕ್ ಬೌನ್ಸ್ ಪ್ರಕರಣ
ತೆಲುಗು ನಿರ್ದೇಶಕ ರಾಮ್ ಗೋಪಾಲ್ ವರ್ಮಾಗೆ ಮುಂಬೈ ಕೋರ್ಟ್ ಚೆಕ್ ಬೌನ್ಸ್ ಪ್ರಕರಣದಲ್ಲಿ 3 ತಿಂಗಳು ಜೈಲು ಶಿಕ್ಷೆ, ಜಾಮೀನು ರಹಿತ ವಾರಂಟ್ ಹೊರಡಿಸಿದೆ.
2018ರಲ್ಲಿ ರಾಮ್ ಗೋಪಾಲ್ ವರ್ಮಾ ವಿರುದ್ದ ಮುಂಬೈನಲ್ಲಿ ಚೆಕ್ ಬೌನ್ಸ್ ಪ್ರಕರಣ ದಾಖಲಾಗಿತ್ತು. ಮಹೇಶ್ಚಂದ್ರ ಮಿಶ್ರಾ ಎನ್ನುವವರು ರಾಮ್ ಗೋಪಾಳ್ ವರ್ಮಾ ವಿರುದ್ದ ಪೊಲೀಸ್ ಠಾಣೆಯ ಮೆಟ್ಟಿಲನ್ನೇರಿದ್ದರು. ಅಲ್ಲಿಂದ ಇಲ್ಲಿಯವರೆಗೆ ಅನೇಕ ಬಾರಿ ನ್ಯಾಯಾಲಯಕ್ಕೆ ಹಾಜರಾಗುವಂತೆ ನೋಟಿಸ್ ನೀಡಿದ್ದರೂ ರಾಮ್ ಗೋಪಾಲ್ ವರ್ಮಾ ಹಾಜರಾಗಿರಲಿಲ್ಲ. ನಿನ್ನೆ ಈ ಪ್ರಕರಣದ ವಿಚಾರಣೆಯನ್ನು ಮತ್ತೊಮ್ಮೆ ನಡೆಸಿದ ಅಂಧೇರಿಯ ಮ್ಯಾಜಿಸ್ಟ್ರೇಟ್ ನ್ಯಾಯಾಲಯ ನೆಗೋಷಿಯೇಬಲ್ ಇನ್ಸ್ಟುಮೆಂಟ್ಸ್ ಕಾಯ್ದೆಯ ಸೆಕ್ಷನ್ 138ರ ಅಡಿಯಲ್ಲಿ ದೋಷಿ ಎಂದು ಹೇಳಿದೆ. ರಾಮ್ ಗೋಪಾಲ್ ವರ್ಮಾ ವಿರುದ್ದ ಜಾಮೀನು ರಹಿತ ವಾರೆಂಟ್ ಜಾರಿ ಮಾಡಲಾಗಿದೆ. ಮುಂದಿನ ಮೂರು ತಿಂಗಳಲ್ಲಿ ದೂರುದಾರರಿಗೆ ರೂ.3.72 ಲಕ್ಷ ಪರಿಹಾರ ನೀಡುವಂತೆ ಆದೇಶಿಸಿದೆ. ಪರಿಹಾರವನ್ನು ಪಾವತಿಸಲು ವಿಫಲವಾದಲ್ಲಿ, ಮ್ಯಾಜಿಸ್ಟ್ರೇಟ್ ನ್ಯಾಯಾಲಯವು 3 ತಿಂಗಳ ಸಾದಾ ಜೈಲು ಶಿಕ್ಷೆಯನ್ನು ಅನುಭವಿಸಬೇಕಾಗುತ್ತದೆ ಎಂದು ಆದೇಶದಲ್ಲಿ ತಿಳಿಸಿದೆ.