ಕಲಬುರಗಿ: ಇದೇ ಮೊಟ್ಟ ಮೊದಲ ಬಾರಿಗೆ ಬುಧವಾರ ರಾಷ್ಟ್ರ ರಾಜಧಾನಿ ನವದೆಹಲಿಯ ಸಂಸತ್ ಆವರಣದಲ್ಲಿ ಬಸವ ಜಯಂತಿ ಆಚರಿಸಲಾಯಿತು.
22 ವರ್ಷಗಳ ಹಿಂದೆಯೇ ಸಂಸತ್ ಆವರಣದ ಪ್ರೇರಣಾ ಸ್ಥಳದಲ್ಲಿ ಬಸವಣ್ಣನವರ ಪ್ರತಿಮೆಯನ್ನು ಪ್ರತಿಷ್ಠಾಪಿಸಲಾಗಿದ್ದರೂ ಇದೇ ಮೊದಲ ಬಾರಿಗೆ ಅಲ್ಲಿ ಜಯಂತಿ ಆಚರಿಸಿದ್ದು ವಿಶೇಷ. ಬಸವಣ್ಣನವರ 892ನೇ ಜಯಂತಿಯನ್ನು ಶ್ರದ್ಧಾ ಭಕ್ತಿಯಿಂದ ಆಚರಿಸಲಾಯಿತು.
ಕೇಂದ್ರ ಸಚಿವರಾದ ಪ್ರಹ್ಲಾದ ಜೋಶಿ, ಕಿರಣ್ ರಿಜಿಜು, ಅಶ್ವಿನಿ ವೈಷ್ಣವ್, ವಿ. ಸೋಮಣ್ಣ, ಶೋಭಾ ಕರಂದ್ಲಾಜೆ, ಸಂಸದ ವೀರಣ್ಣ ಕಡಾಡಿ ಹಾಗೂ ಕೂಡಲಸಂಗಮ ಪಂಚಮಸಾಲಿ ಪೀಠದ ಜಗದ್ಗುರು ಶ್ರೀ ಜಯಮೃತ್ಯುಂಜಯ ಸ್ವಾಮೀಜಿ ಜಯಂತಿ ಉತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಬಸವೇಶ್ವರರ ಪುತ್ಥಳಿಗೆ ಪುಷ್ಪನಮನ ಸಲ್ಲಿಸಿದರು.
ಕಲಬುರಗಿಯ ಮಾಜಿ ಸಂಸದ ಡಾ. ಉಮೇಶ್ ಜಾಧವ್, ಹಿರಿಯ ಬಿಜೆಪಿ ಮುಖಂಡ, ಉದ್ಯಮಿ ಶಿವಕಾಂತ ಮಹಾಜನ್, ಕಿರಣಕುಮಾರ್ ಶೆಟಗಾರ್, ಶಿವರಾಜ್ ಇಂಗಿನಶೆಟ್ಟಿ ಮತ್ತಿತರರು ಈ ಐತಿಹಾಸಿಕ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.