ಬೆಂಗಳೂರು: ಹಿಂದಿನ ಸರ್ಕಾರಗಳ ಪ್ರಮುಖ ಹಗರಣಗಳ ಬಗ್ಗೆ ಸೂಕ್ತ ತನಿಖೆ ನಡೆಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
ಈ ಕುರಿತು ಸರಣಿ ಟ್ವೀಟ್ ಮಾಡಿರುವ ಅವರು, 4 ವೈದ್ಯಕೀಯ ಕಾಲೇಜು ನಿರ್ಮಾಣದಲ್ಲಿ ಅವ್ಯವಹಾರ, 40% ಕಮಿಷನ್, ಕೊರೊನಾ ಸಂದರ್ಭದಲ್ಲಿ ವೈದ್ಯಕೀಯ ಸಾಮಗ್ರಿಗಳ ಖರೀದಿಯಲ್ಲಿ ಅವ್ಯವಹಾರ, ನೀರಾವರಿ ಕಾಮಗಾರಿಗಳಲ್ಲಿ ಅವ್ಯವಹಾರ, ಪಿಎಸ್ಐ ನೇಮಕಾತಿ ಹಗರಣ ಹಾಗೂ ಬಿಟ್ ಕಾಯಿನ್ ಹಗರಣದ ಬಗ್ಗೆ ಸೂಕ್ತ ತನಿಖೆ ನಡೆಸಲಾಗುವುದು ಎಂದಿದ್ದಾರೆ.
ಚಾಮರಾಜನಗರದಲ್ಲಿ ಕೋವಿಡ್ ಸಂದರ್ಭದಲ್ಲಿ ಆಕ್ಷಿಜನ್ ಕೊರತೆಯಿಂದ ಉಂಟಾಗಿದ್ದ ದುರಂತ ಪ್ರಕರಣದ ಮರುತನಿಖೆಯನ್ನು ಕೈಗೊಳ್ಳಲಾಗುವುದು. ಅಂದಿನ ಆರೋಗ್ಯ ಸಚಿವ ಡಾ. ಸುಧಾಕರ್ ಅವರು ಅಲ್ಲಿ ಸತ್ತಿರುವುದು ಇಬ್ಬರೇ ಎಂದಿದ್ದರು, ಆದರೆ ಸತ್ತವರ ಸಂಖ್ಯೆ ಮೂವತ್ತಕ್ಕೂ ಹೆಚ್ಚಿತ್ತು. ಈ ಬಗ್ಗೆ ನಿಷ್ಪಕ್ಷಪಾತ ತನಿಖೆ ನಡೆಸಿ ಮೃತರ ಕುಟುಂಬಗಳಿಗೆ ನ್ಯಾಯ ಕೊಡಿಸುತ್ತೇವೆ ಎಂದು ಹೇಳಿದ್ದಾರೆ.