ಮಂಗಳೂರು: ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾದೇಶದ ಪ್ರಜೆಯನ್ನು ರಾಜ್ಯ ಆಂತರಿಕ ಭದ್ರತಾ ವಿಭಾಗ ಹಾಗೂ ಮಂಗಳೂರು ಪೊಲೀಸರ ಜಂಟಿ ಕಾರ್ಯಾಚರಣೆಯಲ್ಲಿ ಬಂಧಿಸಲಾಗಿದೆ.
ಮಂಗಳೂರು ಹೊರವಲಯದ ಮುಕ್ಕ ಎಂಬಲ್ಲಿ ದಾಳಿ ನಡೆಸಿದ ಅಧಿಕಾರಿಗಳು ಮೂರು ವರ್ಷಗಳಿಂದ ಭಾರತದಲ್ಲಿ ತಲೆಮರೆಸಿಕೊಂಡಿದ್ದ ಬಾಂಗ್ಲಾದೇಶಿ ಅನರುಲ್ ಶೇಖ್(25) ಎಂಬಾತನನ್ನು ಬಂಧಿಸಿದ್ದಾರೆ. ಮುಕ್ಕದಲ್ಲಿ ಕಟ್ಟಡ ಕಾರ್ಮಿಕನಾಗಿದ್ದ ಅನರುಲ್ ಶೇಖ್ ಬಾಂಗ್ಲಾದೇಶದ ರಾಜಶಾಹಿ ಜಿಲ್ಲೆಯವನು. ಮೂರು ವರ್ಷಗಳ ಹಿಂದೆ ಇಂಡೋ-ಬಾಂಗ್ಲಾ ಅಂತಾರಾಷ್ಟ್ರೀಯ ಗಡಿರೇಖೆ ಲಾಲ್ ಗೋಲ್ ಮೂಲಕ ಒಳ ನುಸುಳಿದ್ದ. ಪಶ್ಚಿಮ ಬಂಗಾಳದ ಮುರ್ಷಿದಾಬಾದ್ ಮೂಲಕ ಭಾರತದೊಳಗೆ ಬಂದಿದ್ದ ಅನರುಲ್ ಶೇಖ್ ಮೊದಲು ಉಡುಪಿಗೆ ಬಂದು ನೆಲೆಸಿದ್ದ ಎಂದು ವರದಿಯಾಗಿದೆ.