ಬೆಂಗಳೂರು: ಉತ್ತರ ಕನ್ನಡ ಜಿಲ್ಲೆಯ ಸಂಸದ ಅನಂತ ಕುಮಾರ ಹೆಗಡೆ ಅವರು ಮಾಧ್ಯಮಗಳನ್ನು ನಾಯಿಗೆ ಹೋಲಿಕೆ ಮಾಡಿರುವುದರ ವಿರುದ್ಧ ಸಾಕಷ್ಟು ಆಕ್ಷೇಪಗಳು, ಆಕ್ರೋಶಗಳು ವ್ಯಕ್ತವಾಗಿದ್ದು, ಈ ಹೇಳಿಕೆಯನ್ನು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಕಟುವಾಗಿ ಖಂಡಿಸಿದೆ. ಇಂಥವರನ್ನು ಸಾರ್ವಜನಿಕ ಚುನಾವಣೆಗಳಿಂದ ದೂರ ಇಡಬೇಕು ಎಂದು ಬಿಜೆಪಿ ಹೈಕಮಾಂಡ್ಗೆ ದೂರು ನೀಡಿ ಒತ್ತಾಯಿಸಿದೆ.
ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರಿಗೆ ಪತ್ರ ಬರೆದಿರುವ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶಿವಾನಂದ ತಗಡೂರು, ಬೇಜವಾಬ್ದಾರಿ ಹೇಳಿಕೆ ನೀಡುವ ನಾಲಿಗೆ ಮೇಲೆ ಹಿಡಿತವಿಲ್ಲದ ಇಂಥ ಸಂಸದರ ವಿರುದ್ಧ ಬಿಜೆಪಿ ಕಠಿಣ ಕ್ರಮವನ್ನು ತೆಗೆದುಕೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.
ಅಲ್ಲದೆ, “ಆನೆ ಹೋಗಿದ್ದೇ ದಾರಿ ಎಂಬಂತೆ ನಾವು ಇರಬೇಕು. ಮಾಧ್ಯಮಗಳು ಏನು ಬೇಕಾದರೂ ಬರೆದುಕೊಳ್ಳಲಿ. ಆನೆಗಳು ಹೋಗುವಾಗ ನಾಯಿಗಳು ಬೊಗಳುವುದು ಸಹಜ” ಎಂದು ಮಾಧ್ಯಮದವರನ್ನು ಹೀಯಾಳಿಸಿದ್ದಾರೆ. ಇದು ಖಂಡನೀಯ. ಅನಂತ ಕುಮಾರ್ ಹೆಗಡೆ ಬೇಷರತ್ ಕ್ಷಮೆಯಾಚನೆ ಮಾಡಬೇಕು ಎಂದೂ ಆಗ್ರಹಿಸಿದ್ದಾರೆ.
