ಕಾಂಗ್ರೆಸ್ಸಿಗರು ಯಾರಿಗೆ ಬೆಂಬಲ ಕೊಡುತ್ತಿದ್ದಾರೆ?; ವರಿಷ್ಠರು ತಮ್ಮವರಿಗೆ ಬುದ್ಧಿವಾದ ಹೇಳಲಿ

0
27

ಬೆಂಗಳೂರು: ಪಹಲ್ಗಾಮ್ ಭಯೋತ್ಪಾದನಾ ದಾಳಿಯನ್ನು ಇಡೀ ದೇಶ ಒಟ್ಟಾಗಿ ಎದುರಿಸುತ್ತಿರುವಾಗ ಕಾಂಗ್ರೆಸ್ಸಿಗರು ಯಾರಿಗೆ ಬೆಂಬಲ ಕೊಡುತ್ತಿದ್ದಾರೆ?ಕಾಂಗ್ರೆಸ್ ನಾಯಕರು ತಮ್ಮ ಪಕ್ಷದವರಿಗೆ ಏನೇನೋ ಹೇಳಿಕೆ ಕೊಡದಂತೆ ಬುದ್ಧಿವಾದ ಹೇಳಲಿ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಮನವಿ ಮಾಡಿದರು.

ಬೆಂಗಳೂರಿನ ವಿಮಾನ ನಿಲ್ದಾಣದಲ್ಲಿ ಇಂದು ರಾತ್ರಿ ಮಾಧ್ಯಮದವರೊಂದಿಗೆ ಮಾತನಾಡಿ, “ಜಮ್ಮು-ಕಾಶ್ಮೀರದಲ್ಲಿ ಆರ್ಟಿಕಲ್ 370 ರದ್ದುಪಡಿಸಿದ್ದೇ ಕಾರಣ” ಎಂಬ ಕಾಂಗ್ರೆಸ್ಸಿಗರ ಹೇಳಿಕೆಗೆ ಪ್ರತಿಕ್ರಿಯಿಸಿದ ಸಚಿವರು, ಇಡೀ ದೇಶವೇ ಶೋಕ ಸಾಗರದಲ್ಲಿದೆ. ಇಂಥ ಸಂದರ್ಭದಲ್ಲಿ ಯಾರೂ ರಾಜಕಾರಣ ಮಾತನಾಡುವುದು ಸರಿಯಲ್ಲ ಎಂದು ಹೇಳಿದರು.

2008 ರಲ್ಲಿ ಯುಪಿಎ ಸರ್ಕಾರ ಇದ್ದಾಗಲೂ ಭಯೋತ್ಪಾದನಾ ದಾಳಿ ನಡೆದಿತ್ತು. ಆದರೆ, ವಿರೋಧ ಪಕ್ಷದ ನಾಯಕರಾಗಿ ಅಟಲ್ ಬಿಹಾರಿ ವಾಜಪೇಯಿ, ಸುಷ್ಮಾ ಸ್ವರಾಜ್, ರಾಜನಾಥ್ ಸಿಂಗ್ ಯಾವ ರೀತಿ ವರ್ತಿಸಿದರು. ಸರ್ಕಾರಕ್ಕೆ ಹೇಗೆ ನೈತಿಕ ಬೆಂಬಲ ಕೊಟ್ಟರು ಎಂಬುದನ್ನು ಒಮ್ಮೆ ನೆನಪಿಸಿಕೊಳ್ಳಲಿ ಎಂದು ತಿರುಗೇಟು ನೀಡಿದರು.

ಭಯೋತ್ಪಾದನೆ ವಿಚಾರದಲ್ಲಿ ಕಾಂಗ್ರೆಸ್ಸಿನ ಕೆಲವರು ಅಸಂಬದ್ಧ ಹೇಳಿಕೆ ನೀಡುತ್ತಿದ್ದು, ಇಂಥವರಿಗೆ ಕಾಂಗ್ರೆಸ್ ವರಿಷ್ಠರು ಬುದ್ಧಿವಾದ ಹೇಳುವಂತೆ ಮನವಿ ಮಾಡುತ್ತೇನೆ ಎಂದರು.

ಕಾಂಗ್ರೆಸ್ ಯಾರಿಗೆ ಸಪೋರ್ಟ್ ಮಾಡುತ್ತಿದೆ?’
ಭಯೋತ್ಪಾದನಾ ದಾಳಿಗೆ ಪಾಕಿಸ್ತಾನ ಕಾರಣ ಎನ್ನುವಂಥ ಚರ್ಚೆ ಅಂತಾರಾಷ್ಟ್ರೀಯ ಮಟ್ಟದಲ್ಲಿ ಚರ್ಚೆ ನಡೆಯುತ್ತಿದೆ ಹೀಗಿರುವಾಗ ಕಾಂಗ್ರೆಸ್ಸಿಗರು ಅಸಂಬದ್ಧ ಹೇಳಿಕೆ ನೀಡುತ್ತಿರುವುದು ಯಾರಿಗೆ ಪ್ರೋತ್ಸಾಹ ಕೊಡುತ್ತಿದ್ದಾರೆ? ಎಂಬ ಪ್ರಶ್ನೆ ಬರುತ್ತದೆ. ಇದಕ್ಕೆ ಆಸ್ಪದ ಕೊಡಬೇಡಿ ಎಂದು ಹೇಳಿದರು.

ದೇಶ ಒಟ್ಟಾಗಿ ಎದುರಿಸಬೇಕು: ಮೂಲಭೂತವಾದಿಗಳು ನಡೆಸುತ್ತಿರುವ ಇಂಥ ಭಯೋತ್ಪಾದನಾ ಕೃತ್ಯಗಳನ್ನು ದೇಶ ಒಟ್ಟಾಗಿ ಎದುರಿಸಬೇಕು. ಕಾಂಗ್ರೆಸ್ ನಾಯಕರು ಇದನ್ನು ಅರ್ಥ ಮಾಡಿಕೊಳ್ಳಬೇಕು ಎಂದು ಸಚಿವ ಜೋಶಿ ಕಿವಿಮಾತು ಹೇಳಿದರು.

ತಕ್ಕ ಶಾಸ್ತಿ ಮಾಡಲು ಕ್ರಮ: ಕೇಂದ್ರ ಸರ್ಕಾರ ಈ ಭಯೋತ್ಪಾದನಾ ದಾಳಿಯನ್ನು ಗಂಭೀರವಾಗಿ ಪರಿಗಣಿಸಿದ್ದು, ಭಯೋತ್ಪಾದಕರಿಗೆ ತಕ್ಕ ಶಾಸ್ತಿ ಮಾಡಲು ಅಗತ್ಯ ಕ್ರಮ ಕೈಗೊಳ್ಳುತ್ತಿದೆ. ಇತ್ತೀಚಿನ ವರ್ಷಗಳಲ್ಲಿ ದೇಶದಲ್ಲಿ ಭಯೋತ್ಪಾದನೆ ಚಟುವಟಿಕೆ ಗಣನೀಯ ಪ್ರಮಾಣದಲ್ಲಿ ಇಳಿಕೆ ಕಂಡಿದೆ. ಭಾರತದಲ್ಲಿ ಭಯೋತ್ಪಾದನೆಯನ್ನು ಶೂನ್ಯ ಸಹಿಷ್ಣುತೆಗೆ ತೆಗೆದುಕೊಂಡು ಹೋಗುತ್ತೇವೆ ಎಂದು ಹೇಳಿದರು.

Previous articleಪಾಕ್ ಪ್ರಜೆಗಳಿಗೆ ದೇಶ ತೊರೆಯಲು ಗಡುವು
Next articleಶಿವಮೊಗ್ಗಕ್ಕೆ ಮಂಜುನಾಥ್​ ಪಾರ್ಥಿವ ಶರೀರ ರವಾನೆ