ಬೆಂಗಳೂರು: ಗೃಹಲಕ್ಷ್ಮಿ ಯೋಜನೆಯ ತಾಂತ್ರಿಕ ಸಮಸ್ಯೆಗಳನ್ನು ಬಗೆಹರಿಸಲು ಡಿ.27 ರಿಂದ 29 ರ ವರೆಗೆ ಬೆಳಿಗ್ಗೆ 9ರಿದ ಸಂಜೆ 5 ಗಂಟೆಯ ವರೆಗೂ ಪ್ರತಿ ಗ್ರಾಮ ಪಂಚಾಯಿತಿಯಲ್ಲೂ ವಿಶೇಷ ಶಿಬಿರ ಆಯೋಜಿಸಲಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.
ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿರುವ ಅವರು ನುಡಿದಂತೆ ನಡೆಯುತ್ತಿರುವ ನಮ್ಮ ಕಾಂಗ್ರೆಸ್ ಸರ್ಕಾರವು ರಾಜ್ಯದಲ್ಲಿ ಗೃಹಲಕ್ಷ್ಮಿ ಯೋಜನೆಯ ಲಾಭವನ್ನು ಮತ್ತಷ್ಟು ಜನರಿಗೆ ತಲುಪುವಂತೆ ಮಾಡುವ ನಿಟ್ಟಿನಲ್ಲಿ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಇಲಾಖೆ ವತಿಯಿಂದ ವಿಶೇಷ ಶಿಬಿರವನ್ನು ಆಯೋಜಿಸಿದೆ.
ರಾಜ್ಯದ ಎಲ್ಲಾ 5,000ಕ್ಕೂ ಹೆಚ್ಚು ಗ್ರಾಮ ಪಂಚಾಯತಿ ಕಚೇರಿಗಳಲ್ಲಿ ಏಕಕಾಲದಲ್ಲಿ ಡಿಸೆಂಬರ್ 27ರಿಂದ 29ರವರೆಗೆ ಮೂರು ದಿನಗಳ ಕಾಲ
- ಆಧಾರ್ ಜೋಡಣೆ,
- ಬ್ಯಾಂಕಿಗೆ ಸಂಬಂಧಿಸಿದ ತೊಂದರೆ,
- ಇ-ಕೆವೈಸಿ ಅಪ್ಡೆಟ್,
- ಹೊಸ ಬ್ಯಾಂಕ್ ಖಾತೆ ಸಂಪರ್ಕ ಸೇರಿದಂತೆ
ಹಲವು ಅಡೆತಡೆಗಳನ್ನು ನಿವಾರಿಸಿ, ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳಿಗೆ ನೇರ ಹಣ ವರ್ಗಾವಣೆ ಮಾಡುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಲು ಉದ್ದೇಶಿಸಲಾಗಿದೆ. ತಾವೆಲ್ಲರೂ ಈ ಅಭಿಯಾನದ ಸಂಪೂರ್ಣ ಪ್ರಯೋಜನ ಪಡೆಯಬೇಕೆಂದು ಈ ಮೂಲಕ ಕೇಳಿಕೊಳ್ಳುತ್ತೇನೆ ಎಂದಿದ್ದಾರೆ.